ಸಂಪುಟ ಪುನಾರಚನೆ ಬಗ್ಗೆ ಉಭಯ ನಾಯಕರ ಚರ್ಚೆ? ಬಿಎಸ್ವೈ ಜತೆ ಸಿಎಂ ಬೊಮ್ಮಾಯಿ ಸುದೀರ್ಘ ಚರ್ಚೆ ಚರ್ಚೆ ಬೆನ್ನಲ್ಲೇ ಹಲವು ನಾಯಕರು ಅಲರ್ಟ್
ಬೆಂಗಳೂರು(ಫೆ.06): ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ(Delhi) ತೆರಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಅವರು ಶನಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಸಂಸದರ ಸಭೆ ಮತ್ತು ಜಲ ವಿವಾದ ಸಂಬಂಧಿಸಿದಂತೆ ಕೇಂದ್ರ ಸಚಿವರ ಭೇಟಿಯ ಸಮಯ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಬಸವರಾಜ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಈ ವೇಳೆ ಪಕ್ಷದ ವರಿಷ್ಠರನ್ನು ಸಹ ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ(Cabinet Expansion) ಅಥವಾ ಪುನಾರಚನೆ (Cabinet Reshuffle)ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ನಡುವೆ ಶನಿವಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರೊಂದಿಗೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಇದು ತೀವ್ರ ಕುತೂಹಲ ಮೂಡಿಸಿದೆ. ಯಡಿಯೂರಪ್ಪ ಜತೆ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಕುರಿತು ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
News Hour ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹಲವು ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಮನವಿ ಮಾಡುತ್ತಿದ್ದಾರೆ. ಕೆಲವರು ನೇರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರೆ, ಇನ್ನು ಕೆಲವರು ವರಿಷ್ಠರು ಸೇರಿದಂತೆ ಇತರೆ ಪ್ರಮುಖರ ಮೂಲಕ ಪರೋಕ್ಷವಾಗಿ ಒತ್ತಡ ಹಾಕುವ ಪ್ರಯತ್ನದಲ್ಲಿದ್ದಾರೆ. ಅಲ್ಲದೇ, ಮತ್ತಷ್ಟುಶಾಸಕರು ಯಡಿಯೂರಪ್ಪ ಮೂಲಕ ಒತ್ತಡ ಹೇರುವ ತಂತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಭೇಟಿಗೂ ಮುನ್ನ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಹಲವು ಚರ್ಚೆಯನ್ನು ಹುಟ್ಟುಹಾಕಿದೆ.
ಯಡಿಯೂರಪ್ಪ ಅವರನ್ನು ಸಹಜವಾಗಿ ಆಗಾಗ್ಗೆ ಮುಖ್ಯಮಂತ್ರಿಗಳು ಭೇಟಿ ಮಾಡಿ ಆಡಳಿತದ ಕುರಿತು ಹಲವು ಸಲಹೆಗಳನ್ನು ಪಡೆದುಕೊಳ್ಳುತ್ತಾರೆ. ಸಂಪುಟ ಪುನಾರಚನೆ ಸೇರಿದಂತೆ ಜಲವಿವಾದ ಸಂಬಂಧ ಕೆಲವು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Cabinet Expansion: ಸಿಎಂ ದೆಹಲಿ ಭೇಟಿಗೂ ಮುನ್ನ ಸಂಪುಟ ಸೇರಲು ಹಲವರ ಲಾಬಿ
ಜಾರಕಿಹೊಳಿ ಲಾಭಿ:
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬೇಡಿಕೆ ಹೆಚ್ಚುತ್ತಿರುವ ನಡುವೆಯೇ ಗೋವಾದ ಪಣಜಿಯ ಖಾಸಗಿ ಹೋಟೆಲೊಂದರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಫಡ್ನವೀಸ್ ಅವರು ರಮೇಶ್ ಜಾರಕಿಹೊಳಿ ಸಮ್ಮುಖದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ಮನವಿಯನ್ನು ಗಮನಕ್ಕೆ ತಂದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ಸಂಪುಟ ವಿಸ್ತರಣೆ ಗಂಧಗಾಳಿ ಗೊತ್ತಿಲ್ಲ
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರು ವಿಸ್ತರಣೆ ಮಾಡಿದರೂ ಮಾಡಬಹುದು, ಪುನಾರಚನೆ ಮಾಡಿದರೂ ಮಾಡಬಹುದು, ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಸಂಪುಟ ಪುನಾರಚನೆಯ ಗಂಧ, ಗಾಳಿಯೂ ಗೊತ್ತಿಲ್ಲ. ಇದರಲ್ಲಿ ನಮ್ಮ ಪಾತ್ರವಿಲ್ಲ. ಈ ಕುರಿತು ಮಾಹಿತಿ ದೊರಕಿದರೆ ನಾನೇ ಮೊದಲು ನಿಮಗೆ ಹೇಳುತ್ತೇನೆ ಎಂದರು. ಬಿಜೆಪಿ ಸಚಿವರು ಮತ್ತು ಶಾಸಕರು ತಮ್ಮ ಸಂಪರ್ಕದಲ್ಲಿ ಇರುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಪಕ್ಷದಲ್ಲಿಯೇ ಬೆಂಕಿ ಹೊತ್ತಿ ಉರಿಯುತ್ತಿದೆ. ಅಲ್ಲಿದ್ದವರೇ ಒಬೊಬ್ಬರಾಗಿ ಪಕ್ಷದಿಂಂದ ಹೊರಗೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಹೋಗುವುದು ಸಾಮಾನ್ಯ ಎಂದು ಹೇಳಿದರು.
