ಸಿಎಂ ಯಡಿಯೂರಪ್ಪ ದಿಲ್ಲಿ ಭೇಟಿ ಮತ್ತೊಮ್ಮೆ ರದ್ದು?
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದಿಲ್ಲಿ ಭೇಟಿ ಮತ್ತೊಮ್ಮೆ ರದ್ಧಾಗಿದೆ. ಇದರಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ಮುಂದೆ ಹೋಗುವ ಸಾಧ್ಯತೆಗಳು ಕಂಡು ಬರುತ್ತಿದೆ.
ಬೆಂಗಳೂರು [ಜ.14]: ಮುಂದಿನ ವಾರ ವಿಶ್ವ ಆರ್ಥಿಕ ಶೃಂಗಸಭೆಗೆ ಪಾಲ್ಗೊಳ್ಳಲು ಸ್ವಿಜರ್ಲೆಂಡ್ನ ದಾವೋಸ್ಗೆ ಹೋಗುವ ಮುನ್ನ ಸಂಪುಟ ವಿಸ್ತರಣೆ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸೋಮವಾರವೇ ಸಮಯ ನೀಡಿದ್ದರು. ಆದರೆ, ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಹಾಲುಮತದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅನಿವಾರ್ಯತೆ ಇದ್ದುದರಿಂದ ದೆಹಲಿಗೆ ತೆರಳಲು ಸಾಧ್ಯವಾಗಲಿಲ್ಲ. ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಮಾತುಕತೆ ನಡೆಸುತ್ತೇನೆ ಎಂದು ಸಮಜಾಯಿಷಿಯನ್ನೂ ನೀಡಿದ್ದಾರೆ.
ಅಮಿತ್ ಶಾ ಅವರ ಭೇಟಿಗೆ ಸಮಯ ಸಿಗದಿದ್ದರೆ ಅಂತಿಮವಾಗಿ ಈ ತಿಂಗಳ 18ರಂದು ಹುಬ್ಬಳ್ಳಿಗೆ ಆಗಮಿಸಿದ ವೇಳೆ ಅವರೊಂದಿಗೆ ಸಮಾಲೋಚನೆ ನಡೆಸಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ವರಿಷ್ಠರು ಒಪ್ಪಿದರೆ ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟದ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದೂ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧ್ಯವಾದರೆ ಮಂಗಳವಾರ ಅಥವಾ ಬುಧವಾರ ನನ್ನ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ದೆಹಲಿಗೆ ತೆರಳುತ್ತೇನೆ ಎಂದು ಹೇಳಿದರು.
ಸಚಿವ ಸಂಪುಟದ ಜೊತೆ ಬಿಜೆಪಿ ನಾಯಕರಿಗೆ ಇನ್ನೊಂದು ಸಂಕಟ!...
ಆದರೆ, ಸೋಮವಾರ ಸಂಜೆ ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕೃತ ಕಾರ್ಯಕ್ರಮ ಪಟ್ಟಿಬಿಡುಗಡೆಗೊಂಡಿದ್ದು, ಮಂಗಳವಾರ ಬೆಳಗ್ಗೆಯಿಂದ ಬುಧವಾರ ಸಂಜೆವರೆಗೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ದೆಹಲಿಗೆ ತೆರಳುವ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಮೇಲಾಗಿ ಅಮಿತ್ ಶಾ ಅವರೂ ಭೇಟಿಗೆ ಸಮಯಾವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.
ದಾವೋಸ್ಗೆ ತೆರಳುವಂತೆ ಒತ್ತಾಯ ಇದೆ. ಹೀಗಾಗಿ ಅಲ್ಲಿನ ಸಭೆಗೆ ಹೋಗಲು ನಿರ್ಧರಿಸಿದ್ದೇನೆ. ವಿದೇಶಕ್ಕೆ ಹೋಗುವಷ್ಟರಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟ ವಿಸ್ತರಣೆ ಕುರಿತು ಹಬ್ಬಿರುವ ಸುದ್ದಿಯು ಊಹಾಪೋಹದಿಂದ ಕೂಡಿದೆ. ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ದೆಹಲಿ ಚುನಾವಣೆಗೂ, ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧ ಇಲ್ಲ. ಒಂದು ವೇಳೆ ದೆಹಲಿಗೆ ತೆರಳಲು ಸಾಧ್ಯವಾಗದಿದ್ದರೆ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ ವೇಳೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ವರಿಷ್ಠರ ನಿರ್ಧಾರವೇ ಅಂತಿಮ
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ದೇವದುರ್ಗ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸಮಯ ನೀಡಿದ್ದೇ ಆದಲ್ಲಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು. ವರಿಷ್ಠರು ಒಪ್ಪಿದರೆ ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟದ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದರು.
ರಾಜೀನಾಮೆ ನೀಡಿದ ಎಲ್ಲ 17 ಜನರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಯಾರೋ ಹೇಳಿದ್ದಾರೆ ಎಂದು ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದ ನಾಯಕರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ ಎಂದು ಹೇಳಿದರು.