ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಆ ಕುರಿತು ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸೂಚನೆ ನೀಡಲಾಗಿದೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ತಿಳಿಸಿದ್ದಾರೆ.

ಬೆಂಗಳೂರು : ‘ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಆ ಕುರಿತು ಮಾತನಾಡುವವರ ವಿರುದ್ಧ ಪಕ್ಷದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸೂಚನೆ ನೀಡಲಾಗಿದೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ಸೇರಿ ಸರ್ಕಾರದಲ್ಲಿ ಬದಲಾವಣೆ ತರುವಂತಹ ಯಾವುದೇ ಚರ್ಚೆಗಳೂ ಹೈಕಮಾಂಡ್‌ ಮಟ್ಟದಲ್ಲಿಲ್ಲ. ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿ ಕೆಲವರು ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಭಾವನಾತ್ಮವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಪಕ್ಷದ ಚೌಕಟ್ಟಿನಲ್ಲಿರುವಂತೆ ನೋಡಿಕೊಳ್ಳುವ ಅಧಿಕಾರ ಡಿ.ಕೆ.ಶಿವಕುಮಾರ್‌ ಅವರಿಗಿದ್ದು, ಅವರು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.

‘ಯಾರೇ ಆದರೂ ಪಕ್ಷದ ಚೌಕಟ್ಟು ಮೀರಿ ಮಾತನಾಡಬಾರದು. ತಮ್ಮ ಭಾವನೆಗಳನ್ನು ಪಕ್ಷದ ವೇದಿಕೆಯಲ್ಲಿ ವ್ಯಕ್ತಪಡಿಸಬೇಕು. ಅವರನ್ನು ಹದ್ದುಬಸ್ತಿನಲ್ಲಿಡುವುದು ಮತ್ತು ಪಕ್ಷದ ಶಿಸ್ತಿಗೆ ಚ್ಯುತಿ ಬರದಂತೆ ನಡೆದುಕೊಳ್ಳುವಂತೆ ಮಾಡಲು ಡಿ.ಕೆ.ಶಿವಕುಮಾರ್‌ ಅವರಿಗೆ ಸೂಚಿಸಲಾಗಿದೆ. ಕರ್ನಾಟಕದ ಜನರಿಗೆ ಉತ್ತಮ ಆಡಳಿತ ನೀಡುವುದರತ್ತ ಎಲ್ಲರ ಗಮನವಿರಬೇಕು. ಜನರ ಜೀವನ ಬದಲಿಸುವಂತಹ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ, ಫಲಾನುಭವಿಗಳಿಗೆ ತಲುಪುವಂತೆ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.