Asianet Suvarna News Asianet Suvarna News

ಅತಿವೃಷ್ಟಿ: ಜೀವಹಾನಿ ತಡೆಗೆ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದು ಸೂಚನೆ

ರಾಜ್ಯದಲ್ಲಿ ಮಳೆಗಾಲ ಆರಂಭಗೊಳ್ಳುತ್ತಿದ್ದು, ಅತಿವೃಷ್ಟಿಹಾಗೂ ಪ್ರವಾಹದ ಸಂದರ್ಭದಲ್ಲಿ ಆಯಾ ಜಿಲ್ಲಾಧಿಕಾರಿಗಳು ಬೆಳೆಹಾನಿಯ ಬಗ್ಗೆ ತಕ್ಷಣವೇ ಸ್ಪಷ್ಟಮಾಹಿತಿಯನ್ನು ಪಡೆದುಕೊಳ್ಳಬೇಕು. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ಸಕಾಲದಲ್ಲಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. 

CM Siddaramaiah has instructed to take strict action to prevent loss of life gvd
Author
First Published May 24, 2023, 1:56 PM IST

ಬೆಳಗಾವಿ (ಮೇ.24): ರಾಜ್ಯದಲ್ಲಿ ಮಳೆಗಾಲ ಆರಂಭಗೊಳ್ಳುತ್ತಿದ್ದು, ಅತಿವೃಷ್ಟಿಹಾಗೂ ಪ್ರವಾಹದ ಸಂದರ್ಭದಲ್ಲಿ ಆಯಾ ಜಿಲ್ಲಾಧಿಕಾರಿಗಳು ಬೆಳೆಹಾನಿಯ ಬಗ್ಗೆ ತಕ್ಷಣವೇ ಸ್ಪಷ್ಟಮಾಹಿತಿಯನ್ನು ಪಡೆದುಕೊಳ್ಳಬೇಕು. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ಗೊಬ್ಬರ ಹಾಗೂ ಕೀಟನಾಶಕಗಳನ್ನು ಸಕಾಲದಲ್ಲಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. 

ಮುಂಗಾರು, ಅತಿವೃಷ್ಟಿಹಾಗೂ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜತೆ ಮಂಗಳವಾರ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಅತಿವೃಷ್ಟಿಹಾಗೂ ಪ್ರವಾಹ ನಿರ್ವಹಣೆಯಲ್ಲಿ ಬೇಜವಾಬ್ದಾರಿ ಅಥವಾ ಕರ್ತವ್ಯಲೋಪ ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

40% ಕಮಿಷನ್ ತನಿಖೆ ನನ್ನಿಂದಲೇ ಆರಂಭವಾಗಲಿ: ಸಿಎಂ ಸಿದ್ದುಗೆ ಕೋಟಾ ಶ್ರೀನಿವಾಸ ಪೂಜಾರಿ ಸವಾಲು!

ಪ್ರವಾಹದಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಶಾಲಾ ಕಟ್ಟಡ, ಸೇತುವೆಗಳು ಶಿಥಿಲಗೊಂಡಿದ್ದರೆ ಅವುಗಳಿಂದ ಯಾವುದೇ ರೀತಿಯ ಅನಾಹುತ ಆಗದಂತೆ ಕ್ರಮ ಕೈಗೊಳ್ಳಬೇಕು. ಇತ್ತೀಚಿನ ಮಳೆಯಿಂದ ಹಾನಿಯಾದ ಬೆಳೆಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಜೀವಹಾನಿ ತಪ್ಪಿಸಲು ಏನೇನು ಕ್ರಮ ಅಗತ್ಯವಿದೆಯೋ ಅವುಗಳನ್ನು ಕೂಡಲೇ ಕೈಗೊಳ್ಳಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದಿದ್ದರೆ ಸಾವು-ನೋವು ಸಂಭವಿಸುತ್ತವೆ. ಆದ್ದರಿಂದ ಜನರ ಜೀವಹಾನಿಯಾಗದಂತೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ವಸ್ತುಸ್ಥಿತಿ ಆಧರಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಹೊಸ ಸರ್ಕಾರದ ಮೇಲೆ ಜನರು ಸಾಕಷ್ಟುನಿರೀಕ್ಷೆ ಹೊಂದಿದ್ದಾರೆ. ಸರಕಾರದ ಎಲ್ಲ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.

ಬಿಜೆಪಿ ಸೋಲಿನ ಹೊಣೆ ಎಲ್ಲರೂ ಹೊರಬೇಕು: ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು, ಸಂಭವನೀಯ ಪ್ರವಾಹ ಎದುರಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು. ರೈತರಿಗೆ ಅಗತ್ಯವಾದ ಬಿತ್ತನೆ, ಬೀಜ ಹಾಗೂ ಕೀಟನಾಶಕಗಳ ವಿತರಣೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೋಯರ್‌ ಉಪಸ್ಥಿತರಿದ್ದರು. ಕೃಷಿ, ತೋಟಗಾರಿಕೆ, ನೀರಾವರಿ, ಆಹಾರ, ಆರೋಗ್ಯ, ಪಶುಪಾಲನೆ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Follow Us:
Download App:
  • android
  • ios