ಬಿಜೆಪಿ ನಾಯಕರಿಗೆ ಸದ್ಯ ಯಾವುದೇ ಕೆಲಸವಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಗಳ ಜಾರಿ ಕುರಿತಂತೆ ಪ್ರತಿಭಟಿಸುತ್ತಿದ್ದಾರೆ. ಆದರೆ, ಅವರಿಗೆ ನಮ್ಮ ವಿರುದ್ಧ ಪ್ರತಿಭಟಿಸುವ ನೈತಿಕತೆಯಿಲ್ಲ. ನಾವು ನುಡಿದಂತೆ ನಡೆದುಕೊಂಡಿದ್ದೇವೆ. ಬಿಜೆಪಿಯವರು ಪ್ರತಿಭಟನೆ ಮಾಡಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು(ಜೂ.07): ಗ್ಯಾರಂಟಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಪ್ರತಿಭಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರದಲ್ಲಿದ್ದಾಗ ಜನರಿಗೆ ನೀಡಿದ್ದ ಭರವಸೆ ಈಡೇರಿಸದ ಬಿಜೆಪಿ ನಾಯಕರು, ನಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನಾಯಕರಿಗೆ ಸದ್ಯ ಯಾವುದೇ ಕೆಲಸವಿಲ್ಲ. ಹೀಗಾಗಿ ಗ್ಯಾರಂಟಿ ಯೋಜನೆಗಳ ಜಾರಿ ಕುರಿತಂತೆ ಪ್ರತಿಭಟಿಸುತ್ತಿದ್ದಾರೆ. ಆದರೆ, ಅವರಿಗೆ ನಮ್ಮ ವಿರುದ್ಧ ಪ್ರತಿಭಟಿಸುವ ನೈತಿಕತೆಯಿಲ್ಲ. ನಾವು ನುಡಿದಂತೆ ನಡೆದುಕೊಂಡಿದ್ದೇವೆ. ಬಿಜೆಪಿಯವರು ಪ್ರತಿಭಟನೆ ಮಾಡಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
2018ರ ಚುನಾವಣೆ ವೇಳೆಯಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯೋಜನೆಗಳನ್ನು ಅನುಷ್ಠಾನಗೊಳಿಸದೆ ವಿಫಲವಾಗಿದೆ. ರೈತರಿಗೆ 10 ಗಂಟೆ ವಿದ್ಯುತ್ ನೀಡುವುದು, ರೈತರ ಸಾಲ ಮನ್ನಾ, ನೀರಾವರಿ ಯೋಜನೆಗಳಿಗೆ 1.50 ಲಕ್ಷ ಕೋಟಿ ರು. ಖರ್ಚು ಮಾಡುವುದು ಸೇರಿದಂತೆ ಹಲವು ಭರವಸೆಯನ್ನು ನೀಡಿದ್ದರು. ಅದರಲ್ಲಿ ಯಾವೊಂದು ಭರವಸೆಯನ್ನೂ ಈಡೇರಿಸಲಿಲ್ಲ. ಕೇವಲ ಭ್ರಷ್ಟಾಚಾರ, ಜನರ ಹಣವನ್ನು ಲೂಟಿ ಮಾಡುವುದರಲ್ಲೇ ಕಾಲ ಕಳೆದರು. ಕರ್ನಾಟಕಕ್ಕೆ ಕೆಟ್ಟ ಹೆಸರು ತಂದರು. ಈಗ ನಮ್ಮ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಬಿಜೆಪಿ ಎಂದರೆ ಜನವಿರೋಧ ಪಕ್ಷ ಎಂಬುದು ಇದರಲ್ಲೇ ತಿಳಿಯುತ್ತದೆ ಎಂದರು.
