ಆನೇಕಲ್ ಪಟಾಕಿ ದುರಂತ ಪ್ರಕರಣ ಸಂಬಂಧ ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಮೈಸೂರು (ಅ.09): ಆನೇಕಲ್ ಪಟಾಕಿ ದುರಂತ ಪ್ರಕರಣ ಸಂಬಂಧ ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನಾ ಸ್ಥಳಕ್ಕೆ ನಾನು ಹೋಗುತ್ತಿದ್ದೇನೆ. ಸಂಪೂರ್ಣ ಮಾಹಿತಿಯನ್ನ ಕಲೆ ಹಾಕುತ್ತೇನೆ. ಲೈಸೆನ್ಸ್ ಪಡೆದು ದಾಸ್ತಾನು ಮಾಡಿದರಾ ಇಲ್ಲವಾ ಎಂಬ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ‌ಕೈಗೊಳ್ಳಲಾಗುವುದು ಎಂದರು.

Add Asianetnews Kannada as a Preferred SourcegooglePreferred

ಬರ ಅಧ್ಯಯನ ತಂಡದ ವಿರುದ್ಧ ರೈತರ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ ಅವರು, ನಿನ್ನೆ ಸಹ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ. ಬರ ತಂಡದವರು ಸಮಪರ್ಕವಾಗಿ ಅಧ್ಯಯನ ಮಾಡಿ ಸರಿಯಾದ ಮಾಹಿತಿಯನ್ನ ಕೇಂದ್ರಕ್ಕೆ ಕೊಡಬೇಕು. ಆಗ ಮಾತ್ರ ಸೂಕ್ತ ಪರಿಹಾರ ರಾಜ್ಯದ ರೈತರಿಗೆ ಸಿಗುತ್ತದೆ. ಈ ಬಗ್ಗೆ ನಾನು ಈಗಾಗಲೇ ಹೇಳಿದ್ದೇನೆ ಎಂದು ಹೇಳಿದರು. ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವೆ ಕಾದಾಟದಲ್ಲಿ ಕನ್ನಡಿಗರು ಸಿಲುಕಿರುವ ಬಗ್ಗೆ ಪ್ರಶ್ನೆಗೆ ಸಿದ್ದರಾಮಯ್ಯ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತರಾತುರಿಯಲ್ಲಿ ತೆರಳಿದರು.

ಸಿದ್ದರಾಮಯ್ಯನವರ ಎರಡನೆಯ ಮುಖ ದಲಿತರನ್ನು ಅವನತಿಗೆ ದೂಡುವುದಾಗಿದೆ: ಶ್ರೀರಾಮುಲು

ಮುಂದೆ ಅನಾಹುತ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮ: ದೀಪಾವಳಿ ಹಬ್ಬ ಹತ್ತಿರ ಇರುವುದರಿಂದ ಈ ರೀತಿಯ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಚರ್ಚೆ ಮಾಡಿ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರ್ ಹೊರತುಪಡಿಸಿ ಯಾರೂ ಕಾಯಂ ನೌಕರರಿಲ್ಲ. ವಿದ್ಯಾರ್ಥಿಗಳ ಬದುಕು ಹೀಗೆ ಆಗಿದ್ದು ನೋವು ತಂದಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ: 1.25 ಲಕ್ಷ ರು. ಸಂಬಳ ನೀಡಿದರೂ ಡಾಕ್ಟರ್‌ ಸಿಗುತ್ತಿಲ್ಲ!

ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ: ಅತ್ತಿಬೆಲೆ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಮುಖ್ಯಮಂತ್ರಿಗಳಿಗೆ ಸ್ಪಂದಿಸಲಾಗದ ಸ್ಥಿತಿಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ಗಾಯಾಳುಗಳ ಸಂಬಂಧಿಕರೊಂದಿಗೆ ಚರ್ಚಿಸಿ ಸಾಂತ್ವನ ತಿಳಿಸಿದರು. ಈ ವೇಳೆ ಗಾಯಾಳುಗಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ನಮ್ಮ ಕಣ್ಣೆದುರು ಬಾಳಿ ಬದುಕಬೇಕಾದವರು ಸಾವನ್ನಪ್ಪಿದ್ದಾರೆ. ನಮ್ಮ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು, ನೋಡಲಾಗದ ಸ್ಥಿತಿಯಲ್ಲಿದ್ದಾರೆ ಎಂದು ಕಣ್ಣೀರು ಹಾಕಿದರು.