ಕಳೆದ ವರ್ಷದ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ 10 ಸಾವಿರ ಕೋಟಿ ರು. ಸಾಲ ಮಾಡಿದ್ದ ಕಾರಣಕ್ಕೆ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬಿಜೆಪಿ ನಾಯಕರು ಬೊಬ್ಬಿಡುತ್ತಿದ್ದಾರೆ. ಆದರೆ, ಅವರ ಸರ್ಕಾರದ ಅವಧಿಯಲ್ಲಿ ಮಾಡಿದ ಸಾಲದ ಲೆಕ್ಕ ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುವ ಪರಿಸ್ಥಿತಿ ಬಿಜೆಪಿಗೆ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ ಸಿದ್ದರಾಮಯ್ಯ 

ಬೆಂಗಳೂರು(ಏ.09): ರಾಜ್ಯ ಸರ್ಕಾರ ಸುಭದ್ರವಾಗಿದೆ. ಆದರೆ, ದಿವಾಳಿಯಾಗಿರುವುದು ಬಿಜೆಪಿ ನಾಯಕರ ಬುದ್ಧಿ. ದಿನಕ್ಕೊಂದು ಸುಳ್ಳು ಹೇಳುತ್ತಾ. ಆ ಸುಳ್ಳು ಬಯಾಲಾದಾಗ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳು ಸೃಷ್ಟಿಸಿ ತಮ್ಮನ್ನು ತಾವೇ ಬೆತ್ತಲೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Add Asianetnews Kannada as a Preferred SourcegooglePreferred

ರಾಜ್ಯ ಸರ್ಕಾರದ ಬಳಿ ಹಣವಿಲ್ಲದೆ ರಾಜ್ಯದ ದಿವಾಳಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ 10 ಸಾವಿರ ಕೋಟಿ ರು. ಸಾಲ ಮಾಡಿದ್ದ ಕಾರಣಕ್ಕೆ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬಿಜೆಪಿ ನಾಯಕರು ಬೊಬ್ಬಿಡುತ್ತಿದ್ದಾರೆ. ಆದರೆ, ಅವರ ಸರ್ಕಾರದ ಅವಧಿಯಲ್ಲಿ ಮಾಡಿದ ಸಾಲದ ಲೆಕ್ಕ ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುವ ಪರಿಸ್ಥಿತಿ ಬಿಜೆಪಿಗೆ ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಟಿಕೆಟ್ ಮಿಸ್ ಆಗಿದ್ದಕ್ಕೆ ಅನಂತಕುಮಾರ್ ಹೆಗ್ಡೆ ಅಸಮಾಧಾನ: ದೇಶದ ಮುಂದೆ ಇವು ದೊಡ್ಡ ಸಮಸ್ಯೆ ಅಲ್ಲ: ವಿ ಸುನೀಲ್ ಕುಮಾರ್

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ 2020-21ರಲ್ಲಿ 84,528 ಕೋಟಿ ರು., 2021-22ರಲ್ಲಿ 67,332 ಕೋಟಿ ರು. ಹಾಗೂ 2022-23ರಲ್ಲಿ 72 ಸಾವಿರ ಕೋಟಿ ರು. ಸಾಲ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಿದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವುಕ್ಕೂ ಮುನ್ನ ಕನಿಷ್ಠ ಬಸವರಾಜ ಬೊಮ್ಮಾಯಿ ಅವರನ್ನಾದರೂ ಒಮ್ಮೆ ಕೇಳುವುದು ಬೇಡವೇ? ಎಂದಿದ್ದಾರೆ.

ಬಿಜೆಪಿ ನಾಯಕರೇ ಆಡಳಿತ, ಆರ್ಥಿಕತೆ, ಅಭಿವೃದ್ಧಿ ವಿಚಾರಗಳು ನಿಮ್ಮ ಚಹದ ಬಟ್ಟಲಲ್ಲ. ಕೋಮುವಾದ, ಪಾಕಿಸ್ತಾನ, ಮುಸ್ಲಿಂ ಲೀಗ್‌ ಸೇರಿದಂತೆ ಇನ್ನಿತರ ವಿಚಾರಗಳನ್ನು ಜನರ ತಲೆಗೆ ತುಂಬಿ ಸೌಹಾರ್ದತೆಯನ್ನು ಹಾಳು ಮಾಡಿ ಸಂಘರ್ಷಕ್ಕಿಳಿಸುವ ಮೂಲಕ ರಾಜಕೀಯ ಲಾಭ ಪಡೆಯಲಷ್ಟೇ ನೀವು ಸಮರ್ಥರು. ಸುಳ್ಳು ರಾಮಯ್ಯ ಯಾರು? ಸತ್ಯ ರಾಮಯ್ಯ ಯಾರು? ಎಂಬುದನ್ನು ರಾಜ್ಯದ ಜನರು ತಿಳಿದಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ 2018ರವರೆಗಿನ ರಾಜ್ಯ ಸರ್ಕಾರದ ಒಟ್ಟು ಸಾಲದ ಮೊತ್ತ 2.42 ಲಕ್ಷ ಕೋಟಿ ರು. ಅದೇ 2022-23ರ ವೇಳೆಗೆ 5.40 ಲಕ್ಷ ಕೋಟಿ ರು.ಗೆ ಏರಿದೆ. 2018-2023ರವರೆಗೆ ಕೇವಲ ಐದು ವರ್ಷಗಳಲ್ಲಿ 3 ಲಕ್ಷ ಕೋಟಿ ರು. ಸಾಲ ಹೆಚ್ಚಾಗಿದೆ. ಆಗ ಯಾವ ಪಕ್ಷ ಆಡಳಿತದಲ್ಲಿತ್ತು ಎನ್ನುವುದನ್ನು ಬಿಜೆಪಿ ನಾಯಕರು ಜನರಿಗೆ ತಿಳಿಸಲಿ.