ಸಿಂದಗಿ ಹಾಗೂ ಹಾನಗಲ್‌ ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗೆ ದೊಡ್ಡ ಸಂಖ್ಯೆಯಲ್ಲಿ ಉಸ್ತುವಾರಿಗಳನ್ನು ನೇಮಕ 

 ಬೆಂಗಳೂರು (ಅ.06):  ಸಿಂದಗಿ (Sindagi) ಹಾಗೂ ಹಾನಗಲ್‌ (Hanagal) ಉಪ ಚುನಾವಣೆಗೆ (Karnataka By Election) ಪಕ್ಷದ ಅಭ್ಯರ್ಥಿಗಳ ಹೆಸರು ಪ್ರಕಟವಾದ ಬೆನ್ನಲ್ಲೇ ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಗೆಲುವಿಗೆ ದೊಡ್ಡ ಸಂಖ್ಯೆಯಲ್ಲಿ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಾನಗಲ್‌ಗೆ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ ಅವರ ನೇತೃತ್ವದಲ್ಲಿ 61 ಉಸ್ತುವಾರಿಗಳನ್ನು ನೇಮಕ ಮಾಡಿದ್ದರೆ, ಸಿಂದಗಿಗೆ ಹಿರಿಯ ನಾಯಕರಾದ ಎಸ್‌.ಆರ್‌. ಪಾಟೀಲ್‌ (SR patil) ಹಾಗೂ ಡಾ. ಜಿ. ಪರಮೇಶ್ವರ್‌ (Dr G.Parameshwar) ನೇತೃತ್ವದಲ್ಲಿ 47 ಮಂದಿ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.

ಅ.7ಕ್ಕೆ ಹಾನಗಲ್‌ ಕ್ಷೇತ್ರದ ಅಭ್ಯರ್ಥಿ ಮತ್ತು ಅ.8ಕ್ಕೆ ಸಿಂಧಗಿ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದು ಅಂದಿನಿಂದಲೇ ಎಲ್ಲ ಉಸ್ತುವಾರಿಗಳೂ ಕ್ಷೇತ್ರಗಳಲ್ಲಿ ಉಳಿದು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸುವಂತೆ ಸೂಚನೆ ನೀಡಿದ್ದಾರೆ.

ಸಿಂದಗಿ, ಹಾನಗಲ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಹಾನಗಲ್‌ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಅ.7ರ ಸಂಜೆ 5 ಗಂಟೆಗೆ ಹುಬ್ಬಳ್ಳಿ (Hubli) ನಗರದ ವಿಮಾನ ನಿಲ್ದಾಣ ರಸ್ತೆಯ ಹೋಟೆಲ್‌ ಕ್ಯೂಬಿಕ್‌ನಲ್ಲಿ ಹಾಗೂ ಸಿಂದಗಿ ಕ್ಷೇತ್ರ ಸಂಬಂಧ ಅ.8ಕ್ಕೆ ವಿಜಯಪುರ ನಗರದ ಶೋಲಾಪುರ ರಸ್ತೆಯ ಹೋಟೆಲ್‌ ಸ್ಪೂರ್ತಿಯಲ್ಲಿ ಪಕ್ಷದ ನಾಯಕರ ಸಭೆ ಆಯೋಜಿಸಲಾಗಿದೆ. ಈ ಸಭೆಗಳಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಆಯಾ ಕ್ಷೇತ್ರಗಳ ಉಸ್ತುವಾರಿ ಹೊತ್ತಿರುವ ಎಲ್ಲರೂ ಸಭೆಯಲ್ಲಿ ಭಾಗಿಯಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಂಡು ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಶ್ರಮಿಸಬೇಕೆಂದು ಡಿ.ಕೆ.ಶಿವಕುಮಾರ್‌ ಸೂಚಿಸಿದ್ದಾರೆ.

ಹಾನಗಲ್‌ ಉಸ್ತುವಾರಿಗಳು

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್‌, ಸತೀಶ್‌ ಜಾರಕಿಹೊಳಿ, ಮಾಜಿ ಸಚಿವರಾದ ಎಚ್‌.ಕೆ.ಪಾಟೀಲ್‌, ಆರ್‌.ವಿ.ದೇಶಪಾಂಡೆ, ರಾಮಲಿಂಗಾ ರೆಡ್ಡಿ, ಅಲ್ಲಂ ವೀರಭದ್ರಪ್ಪ, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ, ಯು.ಟಿ.ಖಾದರ್‌ ಸೇರಿದಂತೆ ಒಟ್ಟು 52 ಮಂದಿ ಪಕ್ಷದ ಪದಾಧಿಕಾರಿಗಳು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಚಿತ್ರದುರ್ಗ, ಧಾರವಾಡ, ಗದಗ ಸೇರಿದಂತೆ ಸುತ್ತಮುತ್ತಲ 9 ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರುಗಳನ್ನು ಹಾನಗಲ್‌ ಕ್ಷೇತ್ರದ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಸಿಂದಗಿ ಉಸ್ತುವಾರಿಗಳು

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ್‌, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌, ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ಕೆ.ಜೆ.ಜಾಜ್‌ರ್‍, ಅಜಯ್‌ಸಿಂಗ್‌, ಪ್ರಿಯಾಂಕ ಖರ್ಗೆ ಸೇರಿದಂತೆ ಒಟ್ಟು 38 ಮಂದಿ ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ಹಾಗೂ ಬಾಗಲಕೋಟೆ, ಚಿಕ್ಕೋಡಿ ಸೇರಿದಂತೆ ಸುತ್ತಮುತ್ತಲ ಒಂಬತ್ತು ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರುಗಳನ್ನು ಸಿಂದಗಿ ಕ್ಷೇತ್ರದ ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.