ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರ ಮುಂದೆ ಡಿಸಿಪಿ ಶಿವಪರಕಾಶ್‌ ದೇವರಾಜು ಬಹಿರಂಗ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರು (ಮೇ 06): ರಾಜ್ಯ ರಾಜಧಾನಿ ಬೆಂಗಳೂರಿನ ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ರಾಜರಾಜೇಶ್ವರಿ ನಗರ (ಆರ್.ಆರ್.ನಗರ) ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಸಂಜೆ ಮನೆ ಮನೆ ಪ್ರಚಾರದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಪೊಲೀಸರು ಗಲಾಟೆ ತಡೆಗಟ್ಟುವ ವೇಳೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರನ್ನು ಪೊಲೀಸರು ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಡಿಸಿಪಿ ಶಿವಪ್ರಕಾಶ್‌ ದೇವರಾಜು ಬಹಿರಂಗವಾಗಿ ಕುಸಮಾ ಅವರಿಗೆ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

Add Asianetnews Kannada as a Preferred SourcegooglePreferred

ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತಯಾಚನೆ ವೇಳೆ ಗಲಾಟೆ ನಡೆದಿದೆ. ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ ವ್ಯಕ್ತವಾಗಿದ್ದು, ಗಲಾಟೆಯಲ್ಲಿ ತೊಡಗಿದ್ದ ಜನರನ್ನು ಚದುರಿಸಲು ಪೊಲೀಸರಿಂದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಲಾಗಿದೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರನ್ನು ಪೊಲೀಸರು ತಳ್ಳಿದ್ದಾರೆ. ಬಿಜೆಪಿ ಕಾರ್ಯಕರ್ತರು ಕೂಡ ಹಲ್ಲೆಗೆ ಮುಂದಾಗಿದ್ದು, ನೀರು ಹಾಕಿದ್ದಾರೆ. ಜೊತೆಗೆ, ಬಿಜೆಪಿ ವೆಂಕಟೇಶ್ ಕಡೆಯವರಿಂದ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ಯಶವಂತಪುರ ಪೊಲೀಸ್‌ ಠಾಣೆಯ ಮುಂದೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. 

ವಿಧಾನಸಭೆ ಪ್ರಚಾರ ಅಖಾಡಕ್ಕೆ ಕಾಲಿಟ್ಟ ಸೋನಿಯಾಗಾಂಧಿ: ಬಿಜೆಪಿ ವಿರುದ್ಧ ವಾಗ್ದಾಳಿ!

ಯಶವಂತಪುರ ಬಿ.ಕೆ.ನಗರದಲ್ಲಿ ಗಲಾಟೆ ನಡೆದಿದೆ. ಸುಮಾರು 400 ಮಂದಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಚೀಟಿ ಹಂಚಿಕೆ ಮಾಡಲಾಗುತ್ತಿತ್ತು. ಈ ವೇಳೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು ಚೀಟಿ ಹಂಚದೇ ಮತಯಾಚನೆ ಮಾಡಿಕೊಂಡು ಹೋಗುವಂತೆ ಹೇಳಿದ್ದಾರೆ. ಈ ವೇಳೆ ಗಲಾಟೆ ಮುನ್ಸೂಚನೆ ಕಂಡುಬಂದಿದ್ದರಿಂದ ಇಬ್ಬರು ಕಡೆಯವರನ್ನು ಏರಿಯಾದಿಂದ ಹೊರ ಕಳಿಸಲು ಪೊಲೀಸರ ಲಾಠಿ ಚಾರ್ಜ್ ಮಾಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕುಸುಮ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ಏರಿಯಾದಿಂದ ಕಳಿಸಿದ್ದಾರೆ. ಆದರೆ, ಗಲಾಟೆಯ ಪ್ರದೇಶದಿಂದ ಕಳುಹಿಸುವಾಗ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ವ್ಯಕ್ತವಾಗಿದೆ.

ಪೊಲೀಸ್‌ ಠಾಣೆ ಮುಂದೆ ಬಿಗುವಿನ ವಾತಾವರಣ: ಯಶವಂತಪುರ ಪೊಲೀಸ್ ಠಾಣಾ ಮುಂಭಾಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸ್ ಠಾಣೆಯ ಮುಂದೆ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಕೆಎಸ್‌ಆರ್‌ಪಿ ತುಕಡಿಯ ನಿಯೋಜನೆ ಮಾಡಲಾಗಿದೆ. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯವರು ಹಲ್ಲೆ ಮಾಡುತ್ತಿದ್ದರೂ, ಪೊಲೀಸರು ನಿಂತು ನೋಡುತ್ತಿದ್ದರು ಎಮದು ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ನವರ ಮೇಲೆ ಪೊಲೀಸರು ಕೂಡ ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಯಶವಂತಪುರ ಠಾಣೆ ಮುಂದೆ ಪ್ರತಿಭಟನೆ ಮಾಡುತ್ತಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ಮಲ್ಲಿಕಾರ್ಜುನ ಖರ್ಗೆ ಹತ್ಯೆಗೆ ಸ್ಕೆಚ್‌ ಹಾಕಿದ ಬಿಜೆಪಿ ಅಭ್ಯರ್ಥಿ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ಡಿಸಿಪಿಯಿಂದ ಬಹಿರಂಗ ಕ್ಷಮೆಗೆ ಆಗ್ರಹ: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರನ್ನು ಪೊಲೀಸರು ತಳ್ಳಿದ್ದಾರೆ. ಪೊಲೀಸರು ಬಿಜೆಪಿ ಪರ ಕೆಲಸ ಮಾಡ್ತಿದ್ದಾರೆ ಎಂದು ಡಿಸಿಪಿ ಶಿವ ಪ್ರಕಾಶ್ ದೇವರಾಜ್ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಶವಂತಪುರ ಪೊಲೀಸ್ ಠಾಣೆ ಮುಂದೆ ಕಾರ್ಯಕರ್ತರ ಆಕ್ರೋಶ ವ್ಯಕ್ತವಾಗಿದ್ದು, ಡಿಸಿಪಿ ಕ್ಷೇಮೆ ಕೇಳುವಂತೆ ಆಗ್ರಹಿಸುತ್ತಿದ್ದಾರೆ. ಈಗಾಗಲೇ ಡಿಸಿಪಿ ಕುಸುಮಾಗೆ ಕ್ಷೇಮೆ ಕೇಳಿದ್ದಾರೆ ಎಂದರೂ ಸುಮನ್ನಾಗದ ಕಾರ್ಯಕರ್ತರು, ಬಹಿರಂಗವಾಗಿ ಕ್ಷೇಮೆ ಕೇಳುವಂತೆ ಆಗ್ರಹ ಮಾಡುತ್ತಿದ್ದಾರೆ.