ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್‌ ಈ ಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ ಎನ್ನಲಾಗಿದೆ. ‘ಕಾಂಗ್ರೆಸ್‌ಗೆ ಯಾವುದೇ ಭವಿಷ್ಯ ಇಲ್ಲ. ಅದೊಂದು ಮುಳುಗುವ ಹಡಗು, ಇಂಥ ಪಕ್ಷದಿಂದ ದೇಶದ ಹಾಗೂ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಸಚಿವರು ಪ್ರಶ್ನಿಸಿದರು.

 ಮಸ್ಕಿ (ಮಾ.30) : ಕಾಂಗ್ರೆಸ್‌ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಚಾರದ ಸಂದರ್ಭದಲ್ಲಿ ಗಲಾಟೆ, ಗದ್ದಲ ಎಬ್ಬಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಎದೆಗುಂದಬಾರದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

Add Asianetnews Kannada as a Preferred SourcegooglePreferred

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಇದಕ್ಕೂ ಮೊದಲು ಸುದ್ದಿಗಾರರ ಜತೆಗೆ ಮಾತನಾಡಿ ‘ಕಾಂಗ್ರೆಸ್‌ಗೆ ಯಾವುದೇ ಭವಿಷ್ಯ ಇಲ್ಲ. ಅದೊಂದು ಮುಳುಗುವ ಹಡಗು, ಇಂಥ ಪಕ್ಷದಿಂದ ದೇಶದ ಹಾಗೂ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಮಂತ್ರಿಗಳಿಗೆ ತವರು ಜಿಲ್ಲೆ ಹೊಣೆ ಇಲ್ಲ: 2 ದಿನದಲ್ಲಿ ಎಲ್ಲ ಸಚಿವರ ಜಿಲ್ಲಾ ಉಸ್ತುವಾರಿ ಬದಲು? ...

ಕರ್ನಾಟಕದಲ್ಲೂ ಕಾಂಗ್ರೆಸ್‌ ಮೌಲ್ಯಗಳನ್ನು ಕಳೆದುಕೊಂಡಿದೆ. ಮುಳುಗುತ್ತಿರುವ ಟೈಟಾನಿಕ್‌ ಹಡಗಿನಂತಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಆ ಹಡಗಿನ ಕ್ಯಾಪ್ಟನ್‌ ಎಂದು ವ್ಯಂಗ್ಯವಾಡಿದರು.

ಭ್ರಷ್ಟಾಚಾರದಲ್ಲಿ ಮುಳಗಿರುವ ಕಾಂಗ್ರೆಸ್‌ ಅನ್ನು ರಾಜ್ಯದಲ್ಲಿ ಬೇರುಸಮೇತ ಕಿತ್ತುಹಾಕಲಾಗುವುದು. ಅಭಿವೃದ್ಧಿ ಉದ್ದೇಶದಿಂದ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆಯುತ್ತಿವೆ ಎಂದು ಹೇಳಿದರು.

ಸಿ.ಡಿ. ಪ್ರಕರಣವು ಉಪ ಚುನಾವಣೆ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಿ.ಡಿ. ಪ್ರಕರಣವು ತನಿಖೆಯ ಹಂತದಲ್ಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಅಭಿವೃದ್ಧಿಗಾಗಿ ಮತ ಕೇಳುತ್ತಿದ್ದೇವೆ. ಆದರೆ, ಕಾಂಗ್ರೆಸ್‌ ಪಕ್ಷದವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿಂದ ಮತ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.