ವಾಲ್ಮೀಕಿ ನಿಗಮ ಹಾಗೂ ಮುಡಾದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಅವಕಾಶ ನೀಡದೆ ಪಲಾಯನವಾದ ಮಾಡಿದ್ದಾರೆ. ಹಗರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಜನಾಂದೋಲನ ಸಮಾವೇಶ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ದೂಷಿಸಿದರು.

ಮದ್ದೂರು (ಆ.07): ವಾಲ್ಮೀಕಿ ನಿಗಮ ಹಾಗೂ ಮುಡಾದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲು ಅವಕಾಶ ನೀಡದೆ ಪಲಾಯನವಾದ ಮಾಡಿದ್ದಾರೆ. ಹಗರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಜನಾಂದೋಲನ ಸಮಾವೇಶ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ದೂಷಿಸಿದರು. ವಿರೋಧ ಪಕ್ಷದವರಿಗೆ ಹಗರಣಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದಿರುವುದು ರಾಜ್ಯದ ಜನರಲ್ಲಿ ಅನುಮಾನ ಮೂಡಿಸಿದೆ. ಅವ್ಯವಹಾರಗಳ ಬಗ್ಗೆ ವಿಪಕ್ಷದವರಿಗೆ ಉತ್ತರಿಸಲಾಗದ ಸ್ಥಿತಿಯಲ್ಲಿದ್ದಾರೆ. ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಜನಾಂದೋಲನ ನಡೆಸುತ್ತಿದ್ದಾರೆ ಎಂದು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಾಲ್ಮೀಕಿ ನಿಗಮದಲ್ಲಿ ಜನಾಂಗದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ೧೮೭ ಕೋಟಿ ರು. ದುರ್ಬಳಕೆ ಮಾಡಿಕೊಂಡಿರುವ ಆರೋಪವಿದ್ದು, ಅದರಲ್ಲಿ ೮೯ ಕೋಟಿ ರು. ದುರುಪಯೋಗವಾಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ವಿಧಾನ ಮಂಡಲದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿ ಬ್ಯಾಂಕ್ ಮೂಲಕ ಅಕ್ರಮವಾಗಿ ಹಣ ಹರಿದುಹೋಗಿದೆ. ಮುಡಾ ಸೈಟು ಹಂಚಿಕೆಯಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದಾರೆ. ೧೫-೧೬ ತಿಂಗಳಿಂದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಪಡಿಸಿದರು.

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಪಾದಯಾತ್ರೆ ಮೂಲ ಸಂಚು: ಮಾಜಿ ಶಾಸಕ ಎಚ್.ಪಿ.ಮಂಜುನಾಥ್

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತು ಜನರು ಛೀಮಾರಿ ಹಾಕುತ್ತಿದ್ದಾರೆ. ಸರ್ಕಾರದ ನಡವಳಿಕೆಯಿಂದ ಬೇಸತ್ತು ರಾಜ್ಯದ ಜನರು ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬೆಂಬಲವಾಗಿ ನಿಂತಿದ್ದಾರೆ. ಇದು ಕಾಂಗ್ರೆಸ್‌ನವರಲ್ಲಿ ತೀವ್ರ ಹತಾಶೆ ಮೂಡಿಸಿದೆ. ಅದಕ್ಕಾಗಿ ವ್ಯಕ್ತಿಗತ ಟೀಕೆಗಿಳಿದಿದ್ದಾರೆ. ಇದು ಯಾರಿಗೂ ಶೋಭೆ ತರುವ ವಿಚಾರವಲ್ಲ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ರಾಜೀವ್ ಮಾತನಾಡಿ, ಜೆಡಿಎಸ್-ಬಿಜೆಪಿ ಪಾದಯಾತ್ರೆ ಕಾಂಗ್ರೆಸ್‌ನವರಲ್ಲಿ ನಡುಕ ಹುಟ್ಟಿಸಿದೆ. ಈ ದೇಶದಲ್ಲಿ ಯಾವುದೇ ಸರ್ಕಾರ ಖಜಾನೆಯ ಹಣವನ್ನು ಚುನಾವಣೆಗೆ ಬಳಸಿದ ಉದಾಹರಣೆಯೇ ಇಲ್ಲ. 

ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಬಂದಿರುವ ದೊಡ್ಡ ಕಪ್ಪು ಚುಕ್ಕೆ. ಮುಂದಿನ ಶತಮಾನದವರೆಗೂ ಇದು ಕಾಂಗ್ರೆಸ್‌ಗೆ ಅಂಟಿಕೊಂಡಿರುತ್ತದೆ ಎಂದರು. ಅಧಿಕಾರಿಗಳ ಆತ್ಮಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸಚಿವರ ಹೆಸರನ್ನು ಡೆತ್‌ನೋಟ್‌ನಲ್ಲಿ ಚಂದ್ರಶೇಖರ್ ಉಲ್ಲೇಖಿಸಿದ್ದರೂ ಕೂಡ ಸಿಐಡಿ ದೋಷಾರೋಪಣಾ ಪಟ್ಟಿಯಲ್ಲಿ ಕೈಬಿಡುವ ಮೂಲಕ ಭ್ರಷ್ಟಾಚಾರವನ್ನು ರಕ್ಷಣೆ ಮಾಡಿಕೊಳ್ಳುತ್ತಿದೆ. ಕುಮಾರಸ್ವಾಮಿ ಅವರು ಯಾವ ಭಾಷೆಯಲ್ಲಿ ಎಚ್ಚರಿಕೆ ಕೊಡಬೇಕೋ ಆ ರೀತಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡುವಂತೆ ಒತ್ತಾಯಿಸಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಕೊಡಬೇಕಿತ್ತು. ಕಾಂಗ್ರೆಸ್ ಹೈಕಮಾಂಡ್ ಸುರ್ಜೇವಾಲ ಮತ್ತು ವೇಣುಗೋಪಾಲ್ ಅವರನ್ನು ಕಳುಹಿಸಿ ಸಿದ್ದರಾಮಯ್ಯನವರನ್ನು ಇಳಿಸಿಬಿಡ ಇಲ್ಲಾಂದ್ರೆ ಕಿತ್ತಾಕಿಬಿಡಿ ಎಂಬ ಬ್ಲಾಕ್‌ಮೇಲ್‌ಗೆ ಇಳಿದಿರುವುದು ರಾಜ್ಯದ ದುರದೃಷ್ಟ. ಕರ್ನಾಟಕ ಕಾಂಗ್ರೆಸ್ ಪಾಲಿಗೆ ಎಟಿಎಂ ಆಗುತ್ತೆ. ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬೆಳಸಲಿಕ್ಕೆ ಇದನ್ನು ಬಳಸಿಕೊಳ್ಳಲಾಗುತ್ತೆ ಎಂದು ಹಿಂದಿನಿಂದಲೂ ಆರೋಪ ಮಾಡುತ್ತಿದ್ದೇವೆ. ಎರಡೂ ಪಕ್ಷಗಳ ಪಾದಯಾತ್ರೆ ಎಲ್ಲ ಕಡೆ ಉತ್ಸಾಹ-ಹುಮ್ಮಸ್ಸು ಹೆಚ್ಚಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನ್ನು ಬೇರು ಸಹಿತ ಕಿತ್ತೊಗೆಯುವುದಾಗಿ ದೃಢವಾಗಿ ಹೇಳಿದರು.

ಭ್ರಷ್ಟ ಬಿಜೆಪಿಗರು ಪಾದಯಾತ್ರೆ ನಡೆಸುತ್ತಿರುವುದು ಹಾಸ್ಯಸ್ಪದ: ಶಾಸಕ ದರ್ಶನ್‌ ಧ್ರುವನಾರಾಯಣ್

ಕಾಂಗ್ರೆಸ್‌ನವರದ್ದು ಬ್ರಿಟಿಷ್ ಮನಸ್ಥಿತಿ. ಹಾಗಾಗಿ ಈ ಕಾಂಗ್ರೆಸ್‌ನ್ನು ಜನರೇ ಕಿತ್ತೊಗೆಯುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಾಜೀವ್, ಈ ಹಿಂದೆ ಯಡಿಯೂರಪ್ಪ ವಿರುದ್ಧ ವಿಚಾರಣೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾಗ ಯಾವ ರೀತಿ ಪ್ರತಿಕ್ರಿಯಿಸಿದ್ದರು. ಈಗ ಯಾವ ರೀತಿ ಅವರ ಪ್ರತಿಕ್ರಿಯೆ ಇದೆ ಎಂಬುದಾಗಿ ಹೇಳಿದರು. ಗೋಷ್ಠಿಯಲ್ಲಿ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ, ಭೋಜೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್. ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್. ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ. ನಿರ್ದೇಶಕ ಎಸ್.ಪಿ.ಸ್ವಾಮಿ. ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್. ಮುಖಂಡರಾದ ಸಂತೋಷ್ ತಮಣ್ಣ ಇತರರಿದ್ದರು.