Asianet Suvarna News Asianet Suvarna News

ಕಾಂಗ್ರೆಸ್‌ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಮಾಜಿ ಸಿಎಂ ಬೊಮ್ಮಾಯಿ ಟೀಕೆ

ರಾಜ್ಯದ ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಸ ಪರಿಸ್ಥಿತಿ ಉಂಟಾಗಿದ್ದರೂ, ಪರಿಹಾರ ಕಾರ್ಯವನ್ನು ಕೈಗೊಳ್ಳದೇ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Congress government is mired in transfer scam Former CM Basavaraj Bommai criticism sat
Author
First Published Jul 30, 2023, 8:57 PM IST

ಬೆಳಗಾವಿ (ಜು.30): ರಾಜ್ಯದ ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಸ ಪರಿಸ್ಥಿತಿ ಉಂಟಾಗಿದ್ದರೂ, ಪರಿಹಾರ ಕಾರ್ಯವನ್ನು ಕೈಗೊಳ್ಳದೇ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಠಿಯಿಂದ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ, ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ. ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ಪರಿಹಾರ ಕೊಡಬೇಕು, ಅದನ್ನು ಇದುವರೆಗೂ ನೀಡಿಲ್ಲ. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದ್ದರೂ, ಸರ್ಕಾರ ಇದನ್ನು ಗಮನಿಸುತ್ತಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ ಎಂದು ಆರೋಪ ಮಾಡಿದರು.

ಮುಸ್ಲಿಂ ದರ್ಗಾದಲ್ಲಿ ಕೇಸರಿ ವಸ್ತ್ರವೇ ಗೆಲ್ಲುವುದಾಗಿ ಭವಿಷ್ಯ ನುಡಿದ ಲಾಲಸಾಬ್‌ ಅಜ್ಜ

ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ: ಈ ಸರ್ಕಾರ ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಎಲ್ಲರೂ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ, ಇದಕ್ಕಾಗಿ ಸರ್ಕಾರದಲ್ಲಿ ಪೈಪೋಟಿ ನಡೆಯುತ್ತಿದೆ. ಮೊನ್ನೆ ನಡೆದ ಸಭೆ ವರ್ಗಾವಣೆಯ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಅಷ್ಟೇ. ವರ್ಗಾವಣೆ ದಂಧೆಯಲ್ಲಿ ಬಾರ್ಗೆನಿಂಗ್ ನಡೆಯುತ್ತಿದೆ. ಲೋಕಸಭೆ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿದೆ. ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಆಗಲಿದೆ ಎಂದರು. 

ಪ್ರವಾಹ ಸಂತ್ರಸ್ಥರನ್ನು ಭೇಟಿ ಮಾಡಿ ಪರಿಹಾರ ಕೊಡಿ: ಕಾಂಗ್ರೆಸ್‌ ಸರ್ಕಾರದವರು ಕೇವಲ ರಾಜಕಾರಣದಲ್ಲಿ ನಿರತರಾಗಿದ್ದಾರೆ. ತಮ್ಮ ಸ್ಥಾನವನ್ನು ಉಳಿಸಿ ಕೊಳ್ಳಲು ಹೆಣಗಾಡುತ್ತಿದ್ದಾರೆ. ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮರ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ. ರಾಜ್ಯ ಜನರು ಇಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಕೂಡಲೇ ಎಲ್ಲ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿದರು.

ಮನೆ ಬಿದ್ದವರಿಗೆ, ರೈತರಿಗೆ ಪರಿಹಾರ ಕೊಡಬೇಕು: ನಮ್ಮ ಸರ್ಕಾರದ ಸಮಯದಲ್ಲಿ ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ನೀಡಿದ್ದೇವೆ. ಆ ರೀತಿಯ ಮಾನದಂಡ ಅನುಸರಿಸಿ ಈಗಲೂ ಪರಿಹಾರ ನೀಡಬೇಕು. ತಕ್ಷಣವೇ ಸಂತ್ರಸ್ತರಿಗೆ 10 ಸಾವಿರ ಪರಿಹಾರ ಕೊಡಬೇಕು. ಕೇಂದ್ರ ‌ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ನಾವು ಕೊಟ್ಟಂಗೆ ಈಗಲೂ ಕೊಡಬೇಕು. 2,600 ಕೋಟಿ ಪರಿಹಾರ ನಾವು ಒಂದೇ ತಿಂಗಳಲ್ಲಿ ನೀಡಿದ್ದೇವೆ. ಕೇಂದ್ರ ಸರ್ಕಾರ ಒಣ ಬೇಸಾಯಕ್ಕೆ 6500 ಪರಿಹಾರ ನೀಡಿತ್ತು. ನಾವು ಅದಕ್ಕೆ 1300 ಸಾವಿರ ನೀಡಿದ್ದೇವು. ನೀರಾವರಿ ಆಧಾರಿತ ಜಮೀನಿಗೆ 15 ಸಾವಿರ ನೀಡಿದ್ದರೆ ನಾವು 25,000 ಪರಿಹಾರ ನೀಡಿದ್ದೆವು. ತೋಟಗಾರಿಕೆ ಬೆಳೆಗಳಿಗೆ ಕೇಂದ್ರ ಸರ್ಕಾರ 18 ಸಾವಿರ ನೀಡಿದರೆ ನಾವು 28 ಸಾವಿರ ಪರಿಹಾರ ಕೊಟ್ಟಿದ್ದೇವು. ಅದೇ ಮಾನದಂಡ ಅನುಸರಿಸಿ ಈಗಲೂ ರೈತರಿಗೆ ಪರಿಹಾರ ಕೊಡಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಹೇಳಿದರು. 

ಶಂಕರ್‌ನಾಗ್‌ ವೇಷ ಧರಿಸಿದ ಪ್ರದೀಪ್‌ ಈಶ್ವರ್: ಆಟೋ ಚಾಲಕರಿಗೆ 5000 ರೂ. ಕೊಟ್ಟ ಆಧುನಿಕ ಆಟೋರಾಜ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಇನ್ನು ಬೆಳಗಾವಿಯಲ್ಲಿ ವಿಕಲಾಂಗನ ಮೇಲೆ ಪೊಲೀಸರ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಸಮಾಜಘಾತುಕ ಶಕ್ತಿಗಳು ಈಗ ನಿರ್ಭಯವಾಗಿ ಓಡಾಡುತ್ತಿದ್ದಾರೆ. ಸಮಾಜ ಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ. ಅವರಿಗೆ ಪೊಲಿಸರ ಭಯ ಹೋಗಿದೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಸಾಮಾನ್ಯ ಜನರ ಮೇಲೆ ಹಲ್ಲೆ, ಹೆಣ್ಣುಮಕ್ಕಳ ಮೇಲೆ ಹಲ್ಲೆ ಆಗುತ್ತದೆ. ಪೊಲೀಸ್ ಅಧಿಕಾರಿಗಳ ಕೊಲೆ ಆಗುತ್ತದೆ, ಮತ್ತೊಂದೆಡೆ ಪೊಲೀಸರಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜನರೇ ಸರ್ಕಾರದ ವಿರುದ್ಧ ದಂಗೆ ಎಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.

Follow Us:
Download App:
  • android
  • ios