ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ದೊಡ್ಡ ಮಟ್ಟದ ಯಶಸ್ಸು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಹೊಸ ಟಾಸ್ಕ್‌ ನೀಡಿದೆ. 

ಬೆಂಗಳೂರು (ಸೆ.16): ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ದೊಡ್ಡ ಮಟ್ಟದ ಯಶಸ್ಸು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಹೊಸ ಟಾಸ್ಕ್‌ ನೀಡಿದೆ. ಅದರಂತೆ ಅವರು ತೆಲಂಗಾಣ ರಾಜ್ಯದಲ್ಲಿ ಅಹಿಂದ ಸಂಘಟನೆ ಮಾಡಲು ಹಾಗೂ 5ಕ್ಕೂ ಹೆಚ್ಚು ದಿನ ತಾರಾ ಪ್ರಚಾರಕರಾಗಿ ಸಕ್ರಿಯ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಮುಂದಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತೆಲಂಗಾಣದಲ್ಲಿ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ನಿಗದಿಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಲ ತುಂಬಲು ಹಾಗೂ ಪಕ್ಷವನ್ನು ಗೆಲ್ಲಿಸಲು ಅಗತ್ಯ ಸಂಘಟನೆಗೆ ಒತ್ತು ನೀಡಲು ಸೂಚಿಸಲಾಗಿದೆ. ಇದಕ್ಕೂ ಮೊದಲು ಸೆ.17ರಿಂದ 19 ರವರೆಗೆ ಹೈದರಾಬಾದ್‌ನಲ್ಲಿ ನಿಗದಿಯಾಗಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಶನಿವಾರವೇ (ಸೆ.16) ಹೈದರಾಬಾದ್‌ಗೆ ತೆರಳಲಿದ್ದಾರೆ.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ: ಸಂಸದ ಮುನಿಸ್ವಾಮಿ ಭವಿಷ್ಯ

ಈ ವೇಳೆ ಕರ್ನಾಟಕ ಮಾದರಿಯಲ್ಲೇ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಘೋಷಣೆ ಮಾಡುವ ಸಾಧ್ಯತೆಯಿದೆ. ಈಗಾಗಲೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸಿನಿಂದಾಗಿ ಬಿಜೆಪಿಯೂ ಸಹ ಇದನ್ನು ಅನುಕರಣೆ ಮಾಡಲು ಶುರು ಮಾಡಿದೆ. ಇದೊಂದು ಯಶಸ್ವಿ ಮಾದರಿಯಾಗಿ ಬದಲಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಮ್ಮುಖದಲ್ಲೇ ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಘೋಷಿಸಲು ಕಾಂಗ್ರೆಸ್‌ ಸಜ್ಜಾಗಿದೆ ಎಂದು ತಿಳಿದುಬಂದಿದೆ.

ಅ.10ಕ್ಕೆ ಕುರುಬ ಸಮಾವೇಶ: ಇನ್ನು ತೆಲಂಗಾಣದಲ್ಲಿ ಕುರುಬ ಸಮುದಾಯದ ಮತದಾರರು ಹೆಚ್ಚಿರುವ ಹಿನ್ನೆಲೆಯಲ್ಲಿ ಕುರುಬ ಮತದಾರರನ್ನು ಓಲೈಸಲು ಅ.10 ರಂದು ಹೈದರಾಬಾದ್‌ನಲ್ಲಿ ಬೃಹತ್‌ ಕುರುಬ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಜತೆಗೆ ಅಕ್ಟೋಬರ್‌ ಕೊನೆಯ ವಾರದಲ್ಲಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಹಿಂದುಳಿದ ವರ್ಗಗಳ ಸಮಾವೇಶ ನಡೆಸಿ ಪ್ರತ್ಯೇಕ ಕಾರ್ಯಕ್ರಮಗಳನ್ನು ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ: ಸಚಿವ ಭೈರತಿ ಸುರೇಶ್ ಹೀಗೆ ಹೇಳಿದ್ಯಾಕೆ?

ಖರ್ಗೆ ನೇತೃತ್ವದ ಮೊದಲ ಸಿಡಬ್ಲ್ಯುಸಿ ಸಭೆ ಇಂದು: ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕಗೊಂಡ ಬಳಿಕ ಪುನಾರಚನೆಗೊಂಡ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯ ಮೊದಲ ಸಭೆ ಶನಿವಾರ ಹೈದರಾಬಾದ್‌ನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಮುಂಬರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೆ ಪಕ್ಷವು ರೂಪಿಸಬೇಕಾದ ರಣತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ.