ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಜಾರಿ ಮಾಡಿಲ್ಲ: ಜೆ.ಪಿ.ನಡ್ಡಾ ಆರೋಪ
ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತಾನು ಘೋಷಿಸಿದ್ದ ಭರವಸೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.
ಹೈದರಾಬಾದ್ (ನ.24): ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ತಾನು ಘೋಷಿಸಿದ್ದ ಭರವಸೆಗಳನ್ನು ಜಾರಿಗೆ ತಂದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆರೋಪಿಸಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು ‘ಕರ್ನಾಟಕದಲ್ಲಿ ಕಾಂಗ್ರೆಸ್ ಪದವೀಧರರಿಗೆ ನಿರುದ್ಯೋಗ ಭತ್ಯೆ (ಯುವನಿಧಿ) ಮತ್ತು 200 ಯೂನಿಟ್ ಸಂಪೂರ್ಣ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದ ಗ್ಯಾರಂಟಿಗಳ ಜಾರಿಗೆ ಕರ್ನಾಟಕದ ಜನರು ಕಾಯುತ್ತಿದ್ದಾರೆ’ ಎಂದರು.
ಇದೇ ವೇಳೆ ಬಿಆರ್ಎಸ್ ವಿರುದ್ಧ ಕಿಡಿಕಾರಿದ ಅವರು ‘ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಆರ್ಎಸ್ ಎರಡೂ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿವೆ. ಕಾಂಗ್ರೆಸ್ ಮತ್ತು ಕೆಸಿಆರ್ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಅಥವಾ ಕೆಸಿಆರ್ ಆಗಲಿ ಯಾವುದೇ ಅಧಿಕಾರಕ್ಕೆ ಬಂದರೂ ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕುಟುಂಬ ಆಡಳಿತ ಗ್ಯಾರಂಟಿ’ ಎಂದು ವ್ಯಂಗ್ಯವಾಡಿದರು.
ಸ್ವಸಾಮರ್ಥ್ಯದಿಂದ ಬಿವೈವಿಗೆ ರಾಜ್ಯಾಧ್ಯಕ್ಷ ಹುದ್ದೆ: ಬಿ.ವೈ.ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದಿಂದಾಗಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರು ಪಕ್ಷದ ಆಸ್ತಿ ಎನ್ನುವುದನ್ನು ಅವರು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ‘ದೈನಿಕ್ ಜಾಗರಣ್’ ಹಿಂದಿ ದಿನಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ನೇಮಕದ ಹಿಂದೆ ಯಾವ ಸಂದೇಶ ಅಡಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯೇಂದ್ರ ಅವರು ತಮ್ಮ ಸಾಮರ್ಥ್ಯದ ಮೂಲಕ ಈ ನಾಯಕತ್ವವನ್ನು ಗಳಿಸಿದ್ದಾರೆ ಎನ್ನುವುದೇ ಅದರ ಮೊದಲ ಸಂದೇಶ.
ಕಾಂಗ್ರೆಸ್ನ ಸುಳ್ಳು ಆಶ್ವಾಸನೆಗೆ ಮರುಳಾಗಬೇಡಿ: ಬಿ.ಎಸ್.ಯಡಿಯೂರಪ್ಪ
ಪಕ್ಷ ಸಂಘಟನೆಗೆ ಸಾಕಷ್ಟು ಸಮಯವನ್ನು ಮೀಸಲಿಟ್ಟಿದ್ದಲ್ಲದೆ, ಅವರ ಕಾರ್ಯನಿರ್ವಹಣೆಯಿಂದ ಬಿಜೆಪಿಗೆ ಲಾಭವಾಗಿದೆ. ಯುವ ನಾಯಕರಾಗಿರುವ ವಿಜಯೇಂದ್ರ ಅವರ ನೇಮಕವು ಬಿಜೆಪಿಯು ಶ್ರಮಶೀಲ ಯುವಶಕ್ತಿಯನ್ನು ಗೌರವಿಸುತ್ತದೆ ಮತ್ತು ಪ್ರೋತ್ಸಾಹಿಸುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದು ತಿಳಿಸಿದ್ದಾರೆ. ನಾವು ಯಾವಾಗಲೂ ಧನಾತ್ಮಕ ಬದಲಾವಣೆ ಮತ್ತು ಸುಧಾರಣೆಯನ್ನು ಪ್ರತಿಪಾದಿಸಿದ್ದೇವೆ. ಈ ನೇಮಕಾತಿಯು ಸಕಾರಾತ್ಮಕ ಬೆಳವಣಿಗೆಗಳನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ಸೂಚಿಸುತ್ತದೆ ಮತ್ತು ನೀವು ಪಕ್ಷದ ಕರ್ನಾಟಕ ಘಟಕದಲ್ಲಿ ಗಮನಾರ್ಹ ಬದಲಾವಣೆಗಳನ್ನು ನಿರೀಕ್ಷಿಸಬಹುದು ಎಂದೂ ನಡ್ಡಾ ಹೇಳಿದ್ದಾರೆ.