ಸಿದ್ದರಾಮಯ್ಯ ನಿವಾಸದಲ್ಲಿ ತಡರಾತ್ರಿ ಸಭೆ : ಮಹತ್ವದ ಚರ್ಚೆ
ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡರು ಸೇರಿ ಸಭೆಯೊಂದನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಯಾವುದೇ ನಿರ್ಣಯ ಕೈಗೊಳ್ಳದೇ ಸಭೆ ಬರ್ಖಾಸ್ತಾಗಿದೆ.
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ- ಮಂಡಳಿ ನೇಮಕಾತಿಯನ್ನು ಬೆಳಗಾವಿ ಅಧಿವೇಶನದ ನಂತರ ಮಾಡಬೇಕೇ ಅಥವಾ ಅದಕ್ಕೂ ಮುನ್ನವೇ ಪೂರ್ಣಗೊಳಿಸಬೇಕೇ ಎಂಬ ಜಿಜ್ಞಾಸೆ ಕಾಂಗ್ರೆಸ್ ನಾಯಕರನ್ನು ಕಾಡಿದೆ. ಆದರೆ ಯಾವುದೇ ನಿರ್ಣಯ ಕೈಗೊಳ್ಳದೇ ಸಭೆ ಬರ್ಖಾಸ್ತಾಗಿದೆ.
ಸಂಪುಟ ವಿಸ್ತರಣೆ ಯಾವಾಗ ನಡೆಸಬೇಕು ಎಂಬ ಬಗ್ಗೆ ನಿರ್ಧರಿಸಲು ಶಾಸಕಾಂಗ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಶುಕ್ರವಾರ ತಡರಾತ್ರಿವರೆಗೂ ಸಭೆ ನಡೆಸಿದರು.
ಉಪ ಚುನಾವಣೆ ನಂತರ ಸಂಪುಟ ವಿಸ್ತರಣೆ ನಡೆಸುವ ಭರವಸೆ ನೀಡಿರುವುದರಿಂದ ಈ ಮಾಸಾಂತ್ಯದೊಳಗೆ ಸಂಪುಟ ವಿಸ್ತರಣೆ ನಡೆಸುವುದು ಸೂಕ್ತ ಎಂದು ಕೆಲ ನಾಯಕರು ಸಭೆಯಲ್ಲಿ ಅಭಿಪ್ರಾಯ ಮಂಡಿಸಿದರು ಎನ್ನಲಾಗಿದೆ. ಆದರೆ, ಸಂಪುಟ ವಿಸ್ತರಣೆಯನ್ನು ಮಾಡಿದರೆ, ಅಸಮಾಧಾನಗೊಂಡವರು ತಮ್ಮ ಅತೃಪ್ತಿ ಹೊರ ಹಾಕಲು ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನವನ್ನು ವೇದಿಕೆಯಾಗಿ ಬಳಸಿಕೊಂಡು ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಬಹುದು. ಹೀಗಾಗಿ, ಬೆಳಗಾವಿ ಅಧಿವೇಶನದ ನಂತರವೇ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಉತ್ತಮ ಎಂದು ಮತ್ತೆ ಕೆಲ ನಾಯಕರು ವಾದಿಸಿದರು ಎನ್ನಲಾಗಿದೆ.
ಸುದೀರ್ಘ ಚರ್ಚೆಯ ನಂತರವೂ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಕ್ಷದ ಇತರ ಎಲ್ಲಾ ಹಿರಿಯ ನಾಯಕರ ಅಭಿಪ್ರಾಯ ಪಡೆದು ಈ ಬಗ್ಗೆ ತೀರ್ಮಾನ ಕೈಗೊಳ್ಳೋಣ ಎಂದು ನಿರ್ಧರಿಸಿ ಸಭೆ ಬರ್ಖಾಸ್್ತ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.