ಉಪಚುನಾವಣೆಯಲ್ಲಿ ಜೆಡಿಎಸ್ ದೋಸ್ತಿ ಬೇಡ: ಕಾಂಗ್ರೆಸ್ ಮುಖಂಡರು
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರ, ಮಂಡ್ಯ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ನಡೆದ ಸಭೆಯಲ್ಲಿ ರಾಮನಗರ ಹಾಗೂ ಮಂಡ್ಯ ಕ್ಷೇತ್ರಗಳ ಸ್ಥಳೀಯ ನಾಯಕರು ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸಿದರು
ಬೆಂಗಳೂರು: ಉಪ ಚುನಾವಣೆ ಮೈತ್ರಿಗಾಗಿ ರಾಮನಗರ ವಿಧಾನಸಭೆ ಕ್ಷೇತ್ರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡುವ ಪ್ರಸ್ತಾಪಕ್ಕೆ ಸ್ಥಳೀಯ ಕಾಂಗ್ರೆಸ್ ನಾಯಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಧಾನಸೌಧಕ್ಕೆ ಸೀಮಿತವಾಗಲಿ, ಅದು ಈ ಎರಡು ಕ್ಷೇತ್ರಗಳ ಮಟ್ಟಕ್ಕೆ ಬಂದರೆ ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಕಾರ್ಯಕರ್ತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಪಕ್ಷದ ಭವಿಷ್ಯ ಮಸುಕಾಗುತ್ತದೆ ಎಂಬ ಪ್ರಬಲ ವಾದ ಮಂಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೇತೃತ್ವದಲ್ಲಿ ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರ, ಮಂಡ್ಯ, ಬಳ್ಳಾರಿ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಗೆ ನಡೆದ ಸಭೆಯಲ್ಲಿ ರಾಮನಗರ ಹಾಗೂ ಮಂಡ್ಯ ಕ್ಷೇತ್ರಗಳ ಸ್ಥಳೀಯ ನಾಯಕರು ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಅಲ್ಲದೆ, ರಾಜ್ಯದಲ್ಲಿ ಕಾಂಗ್ರೆಸ್ ಕೂಡ ಭಾಗಿದಾರ ಆಗಿರುವ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿ ಇದ್ದರೂ ಜೆಡಿಎಸ್ ನಾಯಕರು ಜೆಡಿಎಸ್ ಪಕ್ಷವೇ ಅಧಿಕಾರದಲ್ಲಿದೆ ಎಂದು ಬಿಂಬಿಸುತ್ತಿದ್ದಾರೆ. ಸ್ಥಳೀಯ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಅಸ್ತಿತ್ವವೇ ಇಲ್ಲದಂತೆ ಮಾಡುತ್ತಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡುವುದು ಮಾತ್ರವಲ್ಲ, ಕೆಲ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ಕೂಡ ದಾಖಲಿಸುತ್ತಿದ್ದಾರೆ. ತನ್ಮೂಲಕ ಕಾಂಗ್ರೆಸ್ನ ಶಕ್ತಿಯನ್ನೇ ಕುಂದಿಸುವ ಪ್ರಯತ್ನ ಜೆಡಿಎಸ್ನಿಂದ ನಡೆದಿದೆ. ಇದು ಹೀಗೇ ಮುಂದುವರೆದರೆ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ಗೆ ಭವಿಷ್ಯವೇ ಇಲ್ಲದಂತಾಗುತ್ತದೆ ಎಂಬ ಆತಂಕವನ್ನು ಈ ನಾಯಕರು ವ್ಯಕ್ತಪಡಿಸಿದರು ಎನ್ನಲಾಗಿದೆ.
ಇದಕ್ಕೆ ಪ್ರತಿಯಾಗಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ನಾಯಕರು ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿರುವ ಹಿನ್ನೆಲೆಯಲ್ಲಿ ಮತ್ತು ಹೈಕಮಾಂಡ್ ಸೂಚನೆಯೂ ಇರುವ ಕಾರಣ ಮೈತ್ರಿ ಅನಿವಾರ್ಯ ಎಂದು ಸ್ಥಳೀಯ ನಾಯಕರಿಗೆ ಮನವರಿಕೆ ಮಾಡಿಕೊಡಲು ಹೆಣಗಬೇಕಾಯಿತು. ಅಂತಿಮವಾಗಿ ಮೈತ್ರಿ ಹೇಗೆ ಕ್ಷೇತ್ರದಲ್ಲಿ ಪಕ್ಷದ ಶಕ್ತಿಯನ್ನು ಕುಂದಿಸುತ್ತಿದೆ ಎಂಬುದನ್ನು ನಿಮ್ಮ ಗಮನಕ್ಕೆ ತಂದಿದ್ದೇವೆ. ಮೈತ್ರಿ ಮಾಡಿಕೊಳ್ಳುವುದೇ ಆದರೆ, ಸ್ಥಳೀಯವಾಗಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ರಕ್ಷಣೆ ಮಾಡಲು ಅನುವಾಗುವಂತಹ ಷರತ್ತುಗಳನ್ನು ಜೆಡಿಎಸ್ ಮುಂದಿಡಬೇಕು. ಇದನ್ನು ಮಾಡದೇ ಜೆಡಿಎಸ್ ಹೇಳಿದ್ದಕ್ಕೆಲ್ಲ ಮಣೆ ಹಾಕಿದರೆ ಮುಂದಾಗುವ ಅನಾಹುತಗಳಿಗೆ ತಾವು ಹೊಣೆಯಲ್ಲ ಎಂಬ ನೇರ ಎಚ್ಚರಿಕೆಯನ್ನು ಸ್ಥಳೀಯ ನಾಯಕರು ನೀಡಿದರು ಎಂದು ಮೂಲಗಳು ಹೇಳಿವೆ.
ರಾಮನಗರದಲ್ಲಿ ಭಾರಿ ವಿರೋಧ:
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ದಿನವಿಡೀ ನಡೆದ ಸರಣಿ ಸಭೆಗಳ ಆರಂಭ ರಾಮನಗರ ವಿಧಾನಸಭಾ ಕ್ಷೇತ್ರದ ನಾಯಕರಿಂದ ಆಯಿತು. ಈ ಸಭೆಯಲ್ಲಿ ಕ್ಷೇತ್ರದಿಂದ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಸ್ಥಳೀಯ ನಾಯಕರಾದ ಸಿ.ಎಂ. ಲಿಂಗಪ್ಪ, ಕಳೆದ ಬಾರಿಯ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ಸಭೆಯಲ್ಲಿ ಈ ನಾಯಕರು ಪ್ರಬಲವಾಗಿ ಮೈತ್ರಿಯನ್ನು ವಿರೋಧಿಸಿದರು.
ಜೆಡಿಎಸ್ ನಾಯಕತ್ವ ಹೇಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ದಮನಿಸುತ್ತಿದೆ ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟನಾಯಕರು ಮೈತ್ರಿಗಾಗಿ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವುದು ಕ್ಷೇತ್ರದಲ್ಲಿ ಪಕ್ಷದ ಅವನತಿಗೆ ಕಾರಣವಾಗುತ್ತದೆ. ಯಾವ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳಬಾರದು ಎಂದು ವಾದಿಸಿದರು ಎನ್ನಲಾಗಿದೆ.
ಇದರ ನಂತರ ದಿನದಂತ್ಯದಲ್ಲಿ ನಡೆದ ಮಂಡ್ಯ ಲೋಕಸಭಾ ಕ್ಷೇತ್ರದ ನಾಯಕರ ಸಭೆಯಲ್ಲೂ ಇದೇ ರೀತಿಯ ವಾದ ಮಂಡನೆಯಾಗಿದೆ. ಸ್ಥಳೀಯ ನಾಯಕರಾದ ಚೆಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಉತ್ತಮ ಅಸ್ತಿತ್ವವಿದೆ. ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವುದು ಆತ್ಮಹತ್ಯಾಕಾರಿ ಬೆಳವಣಿಗೆಯಾಗುತ್ತದೆ. ಹೀಗಾಗಿ, ಮೈತ್ರಿಯನ್ನು ವಿಧಾನಸೌಧಕ್ಕೆ ಸೀಮಿತಗೊಳಿಸಬೇಕು ಎಂದು ವಾದಿಸಿದರು.
ಅಲ್ಲದೆ, ಜೆಡಿಎಸ್ ಸ್ಥಳೀಯ ನಾಯಕರು ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರನ್ನು ದಮನಿಸತೊಡಗಿದ್ದಾರೆ. ರಾಜ್ಯದಲ್ಲಿ ಇರುವುದು ಜೆಡಿಎಸ್ ಸರ್ಕಾರ ಎಂಬಂತೆ ಅವರು ವರ್ತಿಸುತ್ತಿದ್ದಾರೆ. ಇದಕ್ಕೆ ಬೆಂಬಲ ಎಂಬಂತೆ ಜೆಡಿಎಸ್ ನಾಯಕರಾದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ರೇವಣ್ಣ ಹಾಗೂ ವರಿಷ್ಠ ಎಚ್.ಡಿ. ದೇವೇಗೌಡ ಅವರು ದೆಹಲಿ ಸೇರಿದಂತೆ ಪ್ರತಿಯೊಂದು ಕಡೆಗೂ ತಾವೇ ಹೋಗುತ್ತಾರೆ. ಸಮ್ಮಿಶ್ರ ಸರ್ಕಾರದ ಭಾಗಿದಾರರಾಗಿರುವ ಕಾಂಗ್ರೆಸ್ನ ಸಚಿವರನ್ನು ಜೊತೆಗೆ ಒಯ್ಯುವುದಿಲ್ಲ. ತನ್ಮೂಲಕ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವೇ ಇದೆ ಎಂಬಂತೆ ವರ್ತಿಸುತ್ತಿದ್ದಾರೆ.
ಕ್ಷೇತ್ರದಲ್ಲಂತೂ ಕಾಂಗ್ರೆಸ್ನ ಕಟ್ಟರ್ ಕಾರ್ಯಕರ್ತರಿಗೆ ಕಿರುಕುಳ ಆರಂಭವಾಗಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ಗಳನ್ನು ಹಾಕಿಸಲಾಗುತ್ತಿದೆ. ಸ್ಥಳೀಯ ಮಟ್ಟದ ಪ್ರಾಧಿಕಾರಗಳ ನೇಮಕಾತಿಯಲ್ಲಿ ಕೇವಲ ಜೆಡಿಎಸ್ ಕಾರ್ಯಕರ್ತರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ದೂರವಿಡಲಾಗುತ್ತಿದೆ. ಹೀಗಾಗಿ ಮೈತ್ರಿ ಮಾಡಿಕೊಳ್ಳಲೇಬಾರದು ಎಂದು ವಾದಿಸಿದರು ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಪ್ರತಿಯಾಗಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಸ್ತುವಾರಿ ವೇಣುಗೋಪಾಲ್ ಅವರು ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಮೈತ್ರಿಯ ಅನಿವಾರ್ಯತೆಯನ್ನು ಮನದಟ್ಟು ಮಾಡಿಕೊಡಲು ಯತ್ನಿಸಿದ್ದಾರೆ. ಅಂತಿಮವಾಗಿ ಮೈತ್ರಿ ಮಾಡಿಕೊಳ್ಳುವುದೇ ಆದರೆ, ಕಾಂಗ್ರೆಸ್ ಕಾರ್ಯಕರ್ತರ ಹಿತ ಕಾಯುವಂತಹ ಷರತ್ತುಗಳನ್ನು ಜೆಡಿಎಸ್ಗೆ ವಿಧಿಸಬೇಕು. ಈ ಹಿಂದೆ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರವಾದಂತೆ ಸ್ಥಳೀಯ ಪ್ರಾಧಿಕಾರಗಳ ನೇಮಕಾತಿ ವೇಳೆ ಜೆಡಿಎಸ್ ಶಾಸಕರಿರುವ ಕ್ಷೇತ್ರಗಳಲ್ಲಿ ತಲಾ ಇಬ್ಬರು ಕಾಂಗ್ರೆಸ್ ಶಾಸಕರಿಗೆ ಅವಕಾಶ ನೀಡಬೇಕು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಾಕಲಾಗಿರುವ ಸುಳ್ಳು ಕೇಸ್ಗಳನ್ನು ಹಿಂಪಡೆಯಬೇಕು. ಕಾರ್ಯಕರ್ತರ ಶೋಷಣೆ ತಪ್ಪಬೇಕು. ರಾಜ್ಯದಲ್ಲಿ ಇರುವುದು ಸಮ್ಮಿಶ್ರ ಸರ್ಕಾರವೆಂಬ ಭಾವನೆ ಸಾಮಾನ್ಯರಲ್ಲಿ ಬರುವಂತೆ ಜೆಡಿಎಸ್ ನಾಯಕರ ನಡವಳಿಕೆ ಇರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು ಎನ್ನಲಾಗಿದೆ.
ಬಳ್ಳಾರಿ ಕ್ಷೇತ್ರಕ್ಕೆ ತೀವ್ರ ಪೈಪೋಟಿ:
ಇದೇ ವೇಳೆ ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಶಾಸಕರಾದ ನಾಗೇಂದ್ರ, ಭೀಮಾ ನಾಯ್ಕ, ಕೆ.ಸಿ.ಕೊಂಡಯ್ಯ ಅವರು ಯಾರು ಗೆಲ್ಲಬಹುದು ಎಂಬ ಬಗ್ಗೆ ಚರ್ಚಿಸಿದರು. ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್, ಸ್ಥಳೀಯ ನಾಯಕ ನಟಕಲ್ಲಪ್ಪ ಹಾಗೂ ಲೋಕೇಶ್ ನಾಯಕ್ ಅವರ ಹೆಸರು ಪ್ರಸ್ತಾಪವಾಯಿತು. ಈ ಬಗ್ಗೆ ಸ್ಥಳೀಯ ನಾಯಕರಿಂದ ತೀವ್ರ ವಾದ - ಪ್ರತಿವಾದ ನಡೆದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ಅಭ್ಯರ್ಥಿಯನ್ನು ಸೂಚಿಸುವಂತೆ ತಿಳಿಸಲಾಯಿತು.
ಇದೇ ವೇಳೆ ಸ್ಥಳೀಯ ಕಾಂಗ್ರೆಸ್ ನಾಯಕರಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯದ ಬಗ್ಗೆ ರಾಜ್ಯ ನಾಯಕರು ತೀವ್ರ ಆತಂಕ ವ್ಯಕ್ತಪಡಿಸಿದರು. ಲೋಕಸಭೆ ಉಪ ಚುನಾವಣೆಯಿಂದ ದೇಶಾದ್ಯಂತ ಸಂದೇಶ ರವಾನೆಯಾಗಲಿರುವ ಹಿನ್ನೆಲೆಯಲ್ಲಿ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಸೂಚಿಸಲಾಯಿತು.
ಶಿವಮೊಗ್ಗ ಕ್ಷೇತ್ರ ಒಕ್ಕಲಿಗ ಅಭ್ಯರ್ಥಿಗೆ?:
ಇದಾದ ನಂತರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿದಂತೆ ಸ್ಥಳೀಯ ನಾಯಕರು ಪಾಲ್ಗೊಂಡಿದ್ದರು. ಚರ್ಚೆಯ ವೇಳೆ ಈ ಬಾರಿ ಶಿವಮೊಗ್ಗದಲ್ಲಿ ಜೆಡಿಎಸ್ ಬೆಂಬಲ ದೊರೆತರೆ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆಯಿರುವ ಕಾರಣ ಕಾಂಗ್ರೆಸ್ನಿಂದ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಬಗ್ಗೆ ತೀರ್ಮಾನಿಸಲಾಯಿತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಮಾಜಿ ಕಾಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರ ಹೆಸರನ್ನು ಪರಿಗಣಿಸಲಾಗಿದ್ದು, ಈ ಪೈಕಿ ಒಬ್ಬರಿಗೆ ಟಿಕೆಟ್ ನೀಡುವಂತೆ ಸ್ಥಳೀಯ ನಾಯಕರು ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.
ರಾಹುಲ್ ಬಂದ ನಂತರ ಆಖೈರು
ದಿನವಿಡೀ ನಡೆದ ಸಭೆಯಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿರುವ ಮೂರು ಕ್ಷೇತ್ರಗಳ ಪೈಕಿ ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಅಕಾಲಿಕ ನಿಧನಕ್ಕೆ ಒಳಗಾದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಪುತ್ರ ಆನಂದ ನ್ಯಾಮಗೌಡಗೆ ಟಿಕೆಟ್ ನೀಡಲು ನಿರ್ಧರಿಸಲಾಯಿತು.
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಹಾಗೂ ಸುಂದರೇಶ್ ಅವರಿಬ್ಬರ ಪೈಕಿ ಒಬ್ಬರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ಆದರೆ, ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಒಮ್ಮತ ಮೂಡದ ಕಾರಣ ಉಸ್ತುವಾರಿ ಸಚಿವರೊಂದಿಗೆ ಸ್ಥಳೀಯ ನಾಯಕರು ಚರ್ಚಿಸಿ ಅಂತಿಮವಾಗಿ ಒಬ್ಬರ ಹೆಸರನ್ನು ಸೂಚಿಸುವಂತೆ ತಿಳಿಸಲಾಯಿತು. ಮೂಲಗಳ ಪ್ರಕಾರ ಅ.13ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಗರಕ್ಕೆ ಆಗಮಿಸಲಿದ್ದು, ಈ ವೇಳೆ ರಾಜ್ಯ ನಾಯಕರು ಅವರೊಂದಿಗೆ ಅಂತಿಮವಾಗಿ ಚರ್ಚಿಸಿ ಈ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸಲಿದ್ದಾರೆ.