ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬ್ರೇಕ್‌ಫಾಸ್ಟ್‌ ಸಭೆಯು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಕಪಾಳ ಮೋಕ್ಷ ಎಂದು ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌ ಹೇಳಿದ್ದಾರೆ.

ನವದೆಹಲಿ (ನ.30): ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬ್ರೇಕ್‌ಫಾಸ್ಟ್‌ ಸಭೆಯು ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಕಪಾಳ ಮೋಕ್ಷ ಎಂದು ವಿಧಾನ ಪರಿಷತ್‌ ಸದಸ್ಯ ಸಲೀಂ ಅಹಮದ್‌ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು. ಆದರೆ ಕಾಂಗ್ರೆಸ್‌ ಪಕ್ಷ ಯಾವತ್ತಿಗೂ ಇಬ್ಭಾಗ ಆಗಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರ ನಡುವೆ ಅಧಿಕಾರ ಹಂಚಿಕೆಯ ಗೊಂದಲ ಇದೆ ಎಂದು ಬಿಜೆಪಿ- ಜೆಡಿಎಸ್‌ ಟೀಕಾ ಪ್ರಹಾರ ನಡೆಸಿದ್ದವು. ಶನಿವಾರ ಬೆಳಗ್ಗೆ ಸಿದ್ದು ಮತ್ತು ಡಿಕೆಶಿ ಅವರು ಒಟ್ಟಾಗಿ ತಿಂಡಿ ತಿನ್ನುವ ಮೂಲಕ ಎಲ್ಲ ಗೊಂದಲಗಳಿಗೂ ಉತ್ತರ ನೀಡಿದ್ದಾರೆ. ಇದು ವಿರೋಧ ಪಕ್ಷಗಳಿಗೆ ಕಪಾಳ ಮೋಕ್ಷ ಮಾಡಿದಂತೆ ಆಗಿದೆ ಎಂದರು. ವಿರೋಧ ಪಕ್ಷಗಳಿಗೆ ಇನ್ನೂ ಬೇಕಾದರೆ ಅಧಿವೇಶನದಲ್ಲಿ ಉತ್ತರ ಕೊಡುತ್ತೇವೆ. ಬಿಜೆಪಿಯವರು ಮೋಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬೇಡಿ. ಕಾಂಗ್ರೆಸ್‌ನ ಸಮಸ್ಯೆಗಳಿಗೆ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಯಾರೂ ಹೇಳೋರಿಲ್ಲ, ಕೇಳೋರಿಲ್ಲ

ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ತರ. ನಮ್ಮಲ್ಲಿ ಪ್ರಜಾಪ್ರಭುತ್ವ ಇದೆ. ಬಿಜೆಪಿ ಶಾಸಕರಿಗೆ ದೆಹಲಿಯಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ. ಆದರೆ ನಮಗೆ ನಮಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯದರ್ಶಿ ವೇಣುಗೋಪಾಲ, ವರಿಷ್ಠರಾದ ರಾಹುಲ್ ಗಾಂಧಿ ಇದ್ದಾರೆ. ಅವರನ್ನು ಭೇಟಿ ಮಾಡಲು ನಮ್ಮ ಶಾಸಕರು ದೆಹಲಿಗೆ ಬರುತ್ತಾರೆ ಎಂದ ಅವರು, 2028ರಲ್ಲಿ ನಾವೇ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ತಿಳಿಸಿದರು.