ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆ ಮುಂದೂಡಿಕೆ
* ಕೊರೋನಾ ಎರಡನೇ ಅಲೆ ಮಧ್ಯೆ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ
* ಕೊರೋನಾ ಸಮಯದಲ್ಲಿ ಚುನಾವಣೆ ಬೇಡ ಎಂದು ಹಿರಿಯ ನಾಯಕ ಅಭಿಪ್ರಾಯ
* ಜೂನ್ 23ಕ್ಕೆ ನಿಗದಿಯಾಗಿದ್ದ ಎಐಸಿಸಿ ಅಧ್ಯಕ್ಷರ ಚುನಾವಣೆ ಮುಂದೂಡಿಕೆ
ನವದೆಹಲಿ, (ಮೇ.10): ಕೊರೋನಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಐಸಿಸಿ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆಯನ್ನು ಮುಂದೂಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ.
ಜೂನ್ 23ಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಆಯ್ಕೆ ಸಂಬಂಧ ಚುನಾವಣೆ ನಿಗದಿ ಮಾಡಲಾಗಿತ್ತು. ಆದ್ರೆ, ಇಂದು (ಸೋಮವಾರ) ನಡೆದ ಸಿಡಬ್ಲ್ಯೂಸಿ ಸಭೆಯಲ್ಲಿ ಚುನಾವಣೆ ನಿರ್ಧಾರವನ್ನು ಕೈಬಿಡಲಾಗಿದೆ.
ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಸದ್ದು, ಮುಂದಿನ ಎಐಸಿಸಿ ಅಧ್ಯಕ್ಷ ಯಾರು?
ಮಧುಸೂಧನ್ ಮಿಸ್ತ್ರಿ ನೇತೃತ್ವದ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರವು ಜೂನ್ 23ರಂದು ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ, ಈಗಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಹೆಚ್ಚಿನ ಮುಖಂಡರು ಪ್ರತಿಪಾದಿಸಿದ್ದರು.
ಪ್ರಸ್ತುತ ಸನ್ನಿವೇಶದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಬಾರದು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಸ್ತತ ಸನ್ನಿವೇಶದಲ್ಲಿ ಪಕ್ಷದಲ್ಲಿನ ಯಾರೊಬ್ಬರು ಚುನಾವಣೆಯನ್ನು ಬಯಸುತ್ತಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿಅಂತಿಮವಾಗಿ ಚುನಾವಣೆ ಮುಂದೂಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಈಗಿನ ವೇಳಾಪಟ್ಟಿ ಪ್ರಕಾರ, ಜೂನ್ 23ಕ್ಕೆ ಚುನಾವಣೆ, 24ಕ್ಕೆ ಮತಎಣಿಕೆ ನಡೆಯಬೇಕಿತ್ತು. ಜೂನ್ 1ರಂದು ಅಧಿಸೂಚನೆ ಹೊರಡಿಸಿ, ನಾಮಪತ್ರವನ್ನು ಜೂನ್ 2 ರಿಂದ7ರವರೆಗೆ ಸ್ವೀಕರಿಸಲು ನಿರ್ಧರಿಸಲಾಗಿತ್ತು.