ರಾಜ್ಯ ಸರಕಾರವು ಚುನಾವಣಾ ಪೂರ್ವದಲ್ಲಿ ನೀಡಿದ 5 ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಇದೀಗ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರಕಾರ ತಗಾದೆ ತೆಗೆದರೂ ಕೂಡಾ ಕೊಟ್ಟ ಮಾತಿನಂತೆ ನಡೆದುಕೊಂಡು ಶೀಘ್ರದಲ್ಲಿಯೇ ಉಳಿದ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ: ಸತೀಶ ಸೈಲ್ 

ಕಾರವಾರ(ಜೂ.20): ರಾಜ್ಯ ಸರಕಾರದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಬಿಜೆಪಿ ಸರಕಾರ ನಿರಾಕರಿಸಿದೆ ಎಂದು ಆರೋಪಿಸಿ ಇಂದು ಕಾರವಾರ ನಗರದ ಸುಭಾಷ್ ವೃತ್ತದಲ್ಲಿ ಕಾರವಾರ ಬ್ಲಾಕ್ ಕಾಂಗ್ರೆಸ್ವ ತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಪಕ್ಷದ ಶಾಲು ಟೋಪಿ ಧರಿಸಿ ಬಂದ 50ಕ್ಕೂ ಹೆಚ್ಚು ಕಾರ್ಯಕರ್ತರು ರಸ್ತೆಯಲ್ಲಿ ಕೂತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವೇಳೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಕೇಂದ್ರ ಸರಕಾರವು ಬಡವರು ತಿನ್ನುವ ಅಕ್ಕಿಯ ಪೂರೈಕೆಯಲ್ಲಿ ರಾಜಕೀಯ ಮಾಡುವುದು ನಾಚಿಕೆಗೇಡು. ಹಿಂದೆ ಮನಮೋಹನ್‌ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಆಹಾರ ಭದ್ರತೆ ಕಾಯಿದೆಯನ್ನು ಜಾರಿಗೆ ತಂದಿದ್ದರು. 2013ರಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಪ್ರತಿಯಿಬ್ಬರಿಗೂ 10 ಕೆ.ಜಿ ಅಕ್ಕಿ ನೀಡುವ ಮೂಲಕ ಈ ಯೋಜನೆಯನ್ನು ಉತ್ತಮವಾಗಿ ಕಾರ್ಯರೂಪಕ್ಕೆ ತಂದಿದ್ದರು. ಬಳಿಕ ಬಿಜೆಪಿ ಸರಕಾರವು ಅಧಿಕಾರ ವಹಿಸಿಕೊಂಡ ಮೇಲೆ 7 ರಿಂದ 6 ಕೆಜಿ ಗೆ ಅಕ್ಕಿಯನ್ನು ಇಳಿಕೆ ಮಾಡಲಾಗಿತ್ತು. ಇದೀಗ ಮತ್ತೆ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದಿದ್ದು 7 ಕೆಜಿ ಅಕ್ಕಿಯನ್ನು ನೀಡಲು ಮುಂದಾಗಿದೆ. ಆದರೆ, ಇದರಲ್ಲಿಯೂ ಕೇಂದ್ರ ಸರಕಾರ ರಾಜಕೀಯ ಮಾಡುವ ಮೂಲಕ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದರು.

ಸರ್ಕಾರಿ ಶಾಲಾ ಆವರಣದಲ್ಲಿ ಬೆಳೆದ ವಿಷಕಾರಿ ಬೀಜ ತಿಂದು, ಅಸ್ವಸ್ಥರಾದ ಮಕ್ಕಳು

ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್ ಮಾತನಾಡಿ, ರಾಜ್ಯ ಸರಕಾರವು ಚುನಾವಣಾ ಪೂರ್ವದಲ್ಲಿ ನೀಡಿದ 5 ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿ ಮಾಡಿದ್ದೇವೆ. ಇದೀಗ ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರಕಾರ ತಗಾದೆ ತೆಗೆದರೂ ಕೂಡಾ ಕೊಟ್ಟ ಮಾತಿನಂತೆ ನಡೆದುಕೊಂಡು ಶೀಘ್ರದಲ್ಲಿಯೇ ಉಳಿದ 4 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು. 

ಪ್ರತಿಭಟನೆಯಲ್ಲಿ ವಿ.ಎಸ್ ಪಾಟೀಲ, ಕಾಂಗ್ರೆಸಿನ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವ್ಕರ, ಕಾರವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಮೀರ ನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ಗಾಂವ್ಕರ ಹಾಗೂ ಇತರ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.