ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಮಾಡುವ ಕಾಲ ಕೂಡಿ ಬಂದಿದ್ದು, ದಲಿತರನ್ನು ಸಿಎಂ ಮಾಡುವ ಮೂಲಕ ಇತಿಹಾಸ ಸೃಷ್ಟಿಸಲಿ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಕಲಬುರಗಿ (ಮಾ.07): ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಮಾಡುವ ಕಾಲ ಕೂಡಿ ಬಂದಿದ್ದು, ದಲಿತರನ್ನು ಸಿಎಂ ಮಾಡುವ ಮೂಲಕ ಇತಿಹಾಸ ಸೃಷ್ಟಿಸಲಿ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈಗ ಗೃಹ ಸಚಿವ ಡಾ.ಪರಮೇಶ್ವರ್‌ ಅವರು ಸಿಎಂ ಆಗಬೇಕೆಂದು ದಲಿತರ ಬೇಡಿಕೆಯಿದೆ. ಹೇಗಿದ್ದರೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ದಲಿತರಿದ್ದಾರೆ. ಖರ್ಗೆ ಅವರು ರಾಜ್ಯದಲ್ಲಿದ್ದಾಗ ಸಿಎಂ ಆಗೋಕೆ ಆಗ್ಲಿಲ್ಲ. ಸದ್ಯ ಸಚಿವರಾದ ಸತೀಶ್ ಜಾರಕಿಹೊಳಿ, ಪರಮೇಶ್ವರ್‌, ಮುನಿಯಪ್ಪ ಸಿಎಂ ಆಗಲು ಹವಣಿಸುತ್ತಿದ್ದಾರೆ. ಈ ಮೂವರಲ್ಲಿ ಯಾರನ್ನಾದರೂ ಸಿಎಂ ಮಾಡಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಬೇಕು ಎಂದರು.

Add Asianetnews Kannada as a Preferred SourcegooglePreferred

ಸಿದ್ದರಾಮಯ್ಯ ದೊಡ್ಡ ಮನಸ್ಸು ಮಾಡಲಿ: ದಲಿತರನ್ನ ಸಿಎಂ ಮಾಡುವ ಅವಕಾಶ ಬಂದಿದೆ. ಮುಂದೆ ಈ ಅವಕಾಶ ಇರುತ್ತದೆ, ಆದರೆ ಕಾಂಗ್ರೆಸ್‌ಗಲ್ಲ. ಮುಂದೆ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ 20 ಸೀಟು ಬರಲ್ಲ. ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಮನಸ್ಸು ಮಾಡಿ ದಲಿತರಿಗೆ ಒಂದು ಅವಕಾಶ ಮಾಡಿಕೊಡಲಿ. ಟೈಮ್ ಬಂದರೆ ದಲಿತರು ಸಿಎಂ ಆಗ್ತಾರೆ ಅಂತಾ ಖರ್ಗೆ ಹೇಳಿದ್ದಾರೆ. ಆ ಟೈಮ್ ಯಾವಾಗ ಬರುತ್ತದೆ ಎಂದು ಕಾರಜೋಳ ಪ್ರಶ್ನಿಸಿದರು.

ಗ್ಯಾರಂಟಿಗಾಗಿ ದಲಿತರ ಅಭಿವೃದ್ಧಿ ಕಡಗಣನೆ: ಪಂಚ ಗ್ಯಾರಂಟಿ ಹೆಸರಿನಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ, ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್‌ ಕೇವಲ ಬಡಾಯಿ ಸರ್ಕಾರ: ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

ಈ ವೇಳೆ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಅಂಬಿಕಾ ಹುಲಿನಾಯ್ಕರ್ ಮಾತನಾಡಿ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಹಿಂದುಳಿದ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯ ವಾಗುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರವು, ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ ತುಂಬಬೇಕಿತ್ತು. ಬಡವರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್ ಸರ್ಕಾರ ತೊಲಗಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಕ್ಕೆ ಮೀಸಲಿಟ್ಟ ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದೆ ಎಂದು ಆರೋಪಿಸಿದರು.