ಲೋಕಸಭಾ ಚುನಾವಣೆ ತಯಾರಿ ಕುರಿತು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮಹತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಲವು ಭರವಸೆ ನೀಡಿದ್ದಾರೆ. ಈ ಬಾರಿ ಲೋಕಸಭೆ ಚುನಾವಣಯೆಲ್ಲಿ ಕರ್ನಾಟಕದಲ್ಲಿ 20 ಸ್ಥಾನ ಗೆಲ್ಲುವುದಾಗಿ ಹೈಕಮಮಾಂಡ್‌ಗೆ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಮತ್ತೆರೆಡು ಭರವಸೆಯನ್ನೂ ನೀಡಿದ್ದಾರೆ. 

ದೆಹಲಿ(ಆ.02) ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಣಿಸಿ ಅಧಿಕಾರಕ್ಕೇರಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಇಂದು ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಜೊತೆ ಮಹತ್ವ ಸಭೆ ನಡೆಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನೇತೃತ್ವದ ಸಭೆಯಲ್ಲಿ ರಾಜ್ಯ ನಾಯಕರಿಗೆ ಹಲವು ನಿರ್ದೇಶನಗಳನ್ನು ನೀಡಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚುನಾವಣೆ ಗೆಲ್ಲುವ ಭರವಸೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಲೋಕಸಭಾ ಚುನಾವಣೆ ಸ್ಥಾನ ಮಾತ್ರವಲ್ಲ, ಬಿಬಿಎಂಪಿ ಚುನಾವಣೆ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ದಾಖಲಿಸಲಿದೆ ಎಂದು ರಾಜ್ಯ ನಾಯಕರು ಹೈಕಮಾಂಡ್‌ಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ರಾಜ್ಯದ ಜನ ಬಿಜೆಪಿಯಿಂದ ಬೇಸತ್ತಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆದ್ದು ಉಡುಗೊರೆಯಾಗಿ ನೀಡುತ್ತೇವೆ. ಇದರ ಜೊತೆಗೆ ಬಿಬಿಎಂಪಿ ಚುನಾವಣೆ, ಗ್ರಾಮ ಪಂಚಾಯತ್ ಚುನಾವಣೆಯನ್ನೂ ಗೆಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಭ್ರಷ್ಟಾಚಾರಕ್ಕೆ ಅನುಮತಿ ಕೊಡಬಾರದು, ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಿ: ರಾಹುಲ್‌ ಗಾಂಧಿ

 ಈ ಸಭೆಯಲ್ಲಿ ಸಚಿವ ಸಂಪುಟದ ಸದಸ್ಯರು, ಹಿರಿಯ ನಾಯಕರು ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲರೂ ತಮ್ಮ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾವಣಾ ಜವಾಬ್ದಾರಿ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಒಬ್ಬ ಹಿರಿಯ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಬೇಕು. ಇದಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 ಕಾಂಗ್ರೆಸ್ ಘೋಷಿಸಿದಂತೆ ಗ್ಯಾರಂಟಿಯನ್ನು ಮತದಾರರಿಗೆ ತಲುಪಿಸಿದ್ದೇವೆ. ರಾಜ್ಯದ ಜನರಿಗೆ ನೀಡಿರುವ ಎಲ್ಲಾ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಜನರು ಸಂತಸಗೊಂಡಿದ್ದಾರೆ. ಆದರೆ ಪ್ರಧಾನಿ ಮೋದಿ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸ ಮಾಡಲು ದುಡ್ಡಿಲ್ಲ ಅನ್ನೋ ಹೇಳಿಕೆ ಸುಳ್ಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆ ಕುಸಿತ: ಸಿದ್ದರಾಮಯ್ಯ ಕಿಡಿ

ಇತ್ತ ಡಿಕೆ ಶಿವಕುಮಾರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲ ಸಮುದಾಯದಗಳನ್ನು ಒಟ್ಟು ಮಾಡಿಕೊಂಡು ಹೋಗುತ್ತೇವೆ. ಇದರಿಂದ ನಮಗೆ ಹೆಚ್ಚು ಸ್ಥಾನ ಗೆಲ್ಲುವ ಭರವಸೆ ಇದೆ. ಎಲ್ಲರೂ ಒಟ್ಟಾಗಿ ಕೆಲಸ‌ ಮಾಡಿದ್ದೇವೆ. ಒಗ್ಗಟ್ಟಿನಿಂದ ಹೋರಾಡಿ ಚುನಾವಣೆ ಹೇಗೆ ಗೆಲ್ಲಬೇಕು ಎಂಬುದನ್ನು ವಿಧಾನಸಭೆ ಚುನಾವಣೆಯಲ್ಲಿ ತೋರಿಸಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ. ಕರ್ನಾಟಕದಲ್ಲಿ 20 ಸ್ಥಾನಗಳನ್ನು ಗೆದ್ದು ಇಂಡಿಯಾ ಒಕ್ಕೂಟ ನೀಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.