ಬಿಜೆಪಿಯಿಂದ ಖೊಟ್ಟಿಮತದಾರರ ಸೃಷ್ಟಿ-ಸಲೀಂ ಅಹ್ಮದ್‌ ಬಿಬಿಎಂಪಿ ಸೇರಿ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಮತಗಳ ಕದಿಯುತ್ತಿದೆ-ಟೀಕೆ

ಹಾವೇರಿ (ನ.20) : ಬಿಜೆಪಿಯವರಿಗೆ ಸೋಲಿನ ಭೀತಿ ಕಾಡುತ್ತಿದೆ. ಅದಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಖೊಟ್ಟಿಮತದಾರರನ್ನು ಸೃಷ್ಟಿಸುತ್ತಿದೆ. ಬಜೆಪಿಯವರು ಖೊಟ್ಟಿಮತದಾರರ ವೀರರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಆರೋಪಿಸಿದರು.

Add Asianetnews Kannada as a Preferred SourcegooglePreferred

ಇಲ್ಲಿಯ ನಗರಸಭೆಯಲ್ಲಿ ತಮ್ಮ ವಿಧಾನಪರಿಷತ್‌ ನೂತನ ಕಾರ್ಯಾಲಯವನ್ನು ಶನಿವಾರ ಉದ್ಘಾಟನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಮತಗಳನ್ನು ಕದಿಯುವ ಕಾರ್ಯ ನಡೆದಿದೆ. ಇದರಲ್ಲಿ ಕೆಲವು ಭ್ರಷ್ಟಅಧಿಕಾರಿಗಳೂ ಶಾಮೀಲಾಗಿದ್ದಾರೆ.

ಗ್ರಾಪಂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತುವೆ; ಸಲೀ ಅಹ್ಮದ್

ಚಿಲುಮೆ ಏಜೆನ್ಸಿಯಿಂದ ಮತದಾರರ ಪಟ್ಟಿಅಕ್ರಮ ನಡೆದಿರುವುದು ಸಾಬೀತಾಗಿದೆ. ಚಿಲುಮೆ ಏಜೆನ್ಸಿ ಸಚಿವ ಅಶ್ವತ್ಥ ನಾರಾಯಣ ಅವರಿಗೆ ಸೇರಿದ್ದಾಗಿದ್ದು, ಅವರನ್ನು ಬಂಧಿಸಿ ತನಿಖೆ ನಡೆಸಬೇಕು. ಅಲ್ಪಸಂಖ್ಯಾತರು, ಎಸ್ಸಿ ಎಸ್ಟಿಗಳ ಮತಗಳನ್ನು ತೆಗೆದು ತಮಗೆ ಬೇಕಾದವರನ್ನು ಸೇರಿಸಲಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿಗಳೇ ನೇರ ಹೊಣೆಗಾರರು. ನಾವು ಅಕ್ರಮದ ಬಗ್ಗೆ ಧ್ವನಿ ಎತ್ತಿದ ಮೇಲೆ ಚಿಲುಮೆ ಸಂಸ್ಥೆಯವರು ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಸಿಬ್ಬಂದಿಯನ್ನು ಬಂಧಿಸಲಾಗಿದೆ. ಕಾಂಗ್ರೆಸ್‌ ಮಾಡಿದ ಆರೋಪ ಸತ್ಯ ಎಂಬುದು ಸಾಬೀತಾಗಿದೆ. ಈ ಅಕ್ರಮದ ಬಗ್ಗೆ ಹೈಕೋರ್ಚ್‌ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ಶಾಮೀಲಾಗಿರುವ ಅಧಿಕಾರಿಗಳ ರಕ್ಷಣೆ ಮಾಡುವ ಕಾರ್ಯ ನಡೆದಿದೆ. ಅತಿವೃಷ್ಟಿಯಲ್ಲಿ ಮನೆ ಕಳೆದುಕೊಂಡ ಅರ್ಹರಿಗೆ ಮನೆ ಸಿಗುತ್ತಿಲ್ಲ. 5 ಲಕ್ಷ ರು. ಪರಿಹಾರ ಪಡೆಯಲು ಒಂದು ಲಕ್ಷ ರು. ಬೇಡಿಕೆ ಇಡುತ್ತಿರುವ ದೂರು ಕೇಳಿಬಂದಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೆತ್ತಿಕೊಳ್ಳಲಾಗುವುದು. ಬಿಜೆಪಿ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ. ಬಿಜೆಪಿ ಸರ್ಕಾರ ಕಿತ್ತೊಗೆಯುವ ಸಂಕಲ್ಪ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

ಡಿಸೆಂಬರ್‌ ಅಂತ್ಯದೊಳಗೆ 150 ಅಭ್ಯರ್ಥಿಗಳ ಅಂತಿಮ: ಸಲೀಂ ಆಹ್ಮದ್

ಅಭ್ಯರ್ಥಿಗಳ ಪಟ್ಟಿಅಂತಿಮ:

ರಾಜ್ಯದ 224 ಕ್ಷೇತ್ರಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರವಾಸ ಕೈಗೊಂಡು ಸರ್ಕಾರದ ವೈಫಲ್ಯಗಳನ್ನು ತಿಳಿಸುವ ಕಾರ್ಯ ಮಾಡಲಾಗುವುದು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಆಕಾಂಕ್ಷಿಗಳಿಂದ ಅರ್ಜಿ ಕರೆಯಲಾಗಿತ್ತು. ಈಗಾಗಲೇ ಒಂದು ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ನ. 21ರ ವರೆಗೂ ಅರ್ಜಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ 6 ಕ್ಷೇತ್ರಗಳಿಂದ 35ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಎಲ್ಲವನ್ನೂ ಏಳೆಂಟು ಹಂತಗಳಲ್ಲಿ ಪರಿಶೀಲನೆ ನಡೆಸಲಾಗುವುದು. ಪಕ್ಷದ ಆಂತರಿಕ ಸರ್ವೇ ಮೂಲಕ ಅಭ್ಯರ್ಥಿಯ ಜನಬೆಂಬಲ ಹೇಗಿದೆ ಎಂಬುದನ್ನು ನೋಡಲಾಗುವುದು. ಬಳಿಕ ಪಕ್ಷದ ವರಿಷ್ಠರು ಟಿಕೆಟ್‌ ಫೈನಲ್‌ ಮಾಡಲಿದ್ದಾರೆ. ಡಿಸೆಂಬರ್‌ ಅಂತ್ಯದೊಳಗಾಗಿ 150 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಅಂತಿಮಗೊಳಿಸಲಾಗುವುದು. 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಸರ್ವೇ ವರದಿ ಹೇಳುತ್ತಿದೆ. ಆದರೆ, ನಾವು 150 ಸ್ಥಾನಗಳಲ್ಲಿ ಗೆಲ್ಲುವ ಗುರಿ ಹಾಕಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. ಮಾಜಿ ಸಚಿವ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇತರರು ಇದ್ದರು.