ಕಾಂಗ್ರೆಸ್‌ನೊಳಗೆ ನಾಯಕತ್ವ ಬದಲಾವಣೆ ವಿಚಾರದ ಕುರಿತು ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ಶಾಸಕ ಬೇಲೂರು ಸುರೇಶ್‌ ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು : ಕಾಂಗ್ರೆಸ್‌ನೊಳಗೆ ನಾಯಕತ್ವ ಬದಲಾವಣೆ ವಿಚಾರದ ಕುರಿತು ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ಶಾಸಕ ಬೇಲೂರು ಸುರೇಶ್‌ ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

Add Asianetnews Kannada as a Preferred SourcegooglePreferred

ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಬೆಳವಣಿಗೆಗಳು

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಬೆಳವಣಿಗೆಗಳು ನಡೆಯುತ್ತಿವೆ. ಅದರ ನಡುವೆಯೇ ಬೇಲೂರು ಸುರೇಶ್‌ ಅವರು ಸದಾಶಿವನಗರದ ಡಿ.ಕೆ. ಶಿವಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚಿನ ಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿ ವೇಳೆ ಡಿ.ಕೆ. ಶಿವಕುಮಾರ್‌ ನಿವಾಸದಲ್ಲಿ ಕಾಂಗ್ರೆಸ್‌ನ ಕೆಲ ಶಾಸಕರೂ ಜತೆಗಿದ್ದರು.

ಕ್ಷೇತ್ರದ ಕೆಲಸ, ಎತ್ತಿನಹೊಳೆ ಯೋಜನೆ ಕುರಿತು ಚರ್ಚಿಸಲು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದೆ. ಆದರೆ, ಡಿ.ಕೆ.ಶಿವಕುಮಾರ್‌ ಅವರು ಕಾಂಗ್ರೆಸ್‌ನ ಆಪ್ತ ಶಾಸಕರ ಜತೆ ಚರ್ಚೆ ಮಾಡುವಾಗ ನಾನು ಹೊರಗಡೆಯಿದ್ದೆ ಬೇಲೂರು ಸುರೇಶ್‌ ಹೇಳಿದ್ದಾರೆ.

ಸಾಕಷ್ಟು ಅನುಮಾನಗಳಿಗೆ ಎಡೆ

ಆದರೆ, ಸದ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕರೊಬ್ಬರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಡುವಂತಾಗಿದೆ.

ಇದರ ನಡುವೆಯೇ ಗುರುವಾರ ಮುಂಬೈಗೆ ತೆರಳಿದ್ದ ಡಿ.ಕೆ.ಶಿವಕುಮಾರ್ ಅವರೊಂದಿಗೆ ಬೇಲೂರು ಸುರೇಶ್‌ ಸೇರಿ ಕೆಲ ಬಿಜೆಪಿ ನಾಯಕರು ಇದ್ದರು ಎಂಬ ಮಾತುಗಳು ಕೇಳಿಬರುತ್ತಿವೆ. ಖಾಸಗಿ ಕಾರ್ಯಕ್ರಮ, ಆಸ್ಪತ್ರೆಯಲ್ಲಿ ದಾಖಲಾಗಿರುವ ಸ್ನೇಹಿತರೊಬ್ಬರ ಆರೋಗ್ಯ ವಿಚಾರಿಸಲು ಮುಂಬೈಗೆ ತೆರಳಿದ್ದಾಗಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.