ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್‌ ಅಥವಾ ನವೆಂಬರ್‌ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್‌ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ಮಾಸಾಂತ್ಯದಲ್ಲಿ ನಡೆಯಲಿದೆ ಎಂದ ಸಿದ್ದು 

ಮಂಡ್ಯ(ಅ.06): ಮುಂಬರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಕಾಂಗ್ರೆಸ್‌ ಪಕ್ಷದಿಂದ ನಡೆಸಲುದ್ದೇಶಿರುವ ಬಸ್‌ಯಾತ್ರೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಗೊಳಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ಶಿವಪುರದಲ್ಲಿ ಬುಧವಾರ ಸ್ಥಳೀಯ ಕಾಂಗ್ರೆಸ್‌ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್‌ ಅಥವಾ ನವೆಂಬರ್‌ ಮಾಸಾಂತ್ಯದಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು. ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್‌ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ಮಾಸಾಂತ್ಯದಲ್ಲಿ ನಡೆಯಲಿದೆ ಎಂದರು.

Add Asianetnews Kannada as a Preferred SourcegooglePreferred

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್‌ಯಾತ್ರೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ನಾನು 2 ತಂಡಗಳಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತೇವೆ. ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್‌ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಯಾತ್ರೆ ಬಗ್ಗೆ ಅವರ ಒಪ್ಪಿಗೆ ಪಡೆಯಲಾಗುವುದು ಎಂದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ, ಖರ್ಗೆ ವಿರುದ್ಧ ಸ್ಪರ್ಧಿಸಿದ ತರೂರ್ ಮೇಲೆ ಹೆಚ್ಚಿದ ಒತ್ತಡ

ಇದೇ ವೇಳೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ಪಕ್ಷದ ಬಗ್ಗೆ ಜನರಲ್ಲಿ ದಿನೇ ದಿನೆ ಒಲವು ಹೆಚ್ಚಾಗುತ್ತಿದೆ ಎಂದರು.

ಖರ್ಗೆ ಗೆಲುವಿಗೆ ಶ್ರಮ: 

ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅದರ ಪ್ರಕ್ರಿಯೆ ಮುಗಿದ ನಂತರ ನಾನೂ ಒಳಗೊಂಡಂತೆ ಕಾಂಗ್ರೆಸ್‌ ಮುಖಂಡರು ಅವರ ಪರ ಪ್ರಚಾರ ನಡೆಸುತ್ತೇವೆ. ಖರ್ಗೆ ನಮ್ಮ ರಾಜ್ಯದವರೇ ಆದ ಕಾರಣ ಅವರ ಗೆಲುವಿಗೆ ನಮ್ಮ ಎಲ್ಲ ಮುಖಂಡರು ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.