ದಾವಣಗೆರೆ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಹಿರಿಯ ನಾಯಕರ ಸಂಧಾನದ ಬಳಿಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಮಾತುಕತೆ ಯಶಸ್ವಿಯಾಗಿದ್ದು, ಯಾವುದೇ ಷರತ್ತುಗಳಿಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಪೈಲ್ವಾನ್ ಘೋಷಿಸಿದ್ದಾರೆ.
ಬೆಂಗಳೂರು: ದಾವಣಗೆರೆ ಉಪ ಚುನಾವಣೆಯಲ್ಲಿ ಉಂಟಾಗಿದ್ದ ಬಂಡಾಯಕ್ಕೆ ತೆರೆ ಬಿದ್ದಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾದಿಕ್ ಪೈಲ್ವಾನ್ ಇದೀಗ ಚುನಾವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗೆ ಬೆಂಬಲ ನೀಡಲು ಒಪ್ಪಿದ್ದಾರೆ. ಏ.9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ನಿನ್ನೆ ನಾಮಪತ್ರ ಹಿಂಪಡೆಯದೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದು ಕಾಂಗ್ರೆಸ್ ಹೈಕಮಾಂಡ್ಗೆ ಸಡ್ಡು ಹೊಡೆದಿದ್ದರು. ಇಂದು ಸಂಧಾನ ಸಕ್ಸಸ್ ಆಗಿದ್ದು, ಈ ಬೆಳವಣಿಗೆಯ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ.
ಸಂಧಾನಕ್ಕೆ ಫಲ: ಪೈಲ್ವಾನ್ ಮನವೊಲಿಸಿದ ಕಾಂಗ್ರೆಸ್ ನಾಯಕರು
ಡಿ.ಕೆ. ಶಿವಕುಮಾರ್ ಅವರು ತಿಳಿಸಿದಂತೆ, ಸಾದಿಕ್ ಪೈಲ್ವಾನ್ ಅವರನ್ನು ಮನವೊಲಿಸಲು ಕಾಂಗ್ರೆಸ್ ಹಿರಿಯ ನಾಯಕರು ಸಲೀಂ ಅಹಮದ್ ಮತ್ತು ರಿಜ್ವಾನ್ ಅರ್ಷದ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಜೊತೆಗೆ ಸ್ವತಃ ಡಿಕೆಶಿಯವರೂ ದೂರವಾಣಿ ಮೂಲಕ ಪೈಲ್ವಾನ್ ಜೊತೆ ಮಾತುಕತೆ ನಡೆಸಿದ್ದರು. ಈ ಸಂಧಾನ ಪ್ರಯತ್ನಗಳ ಫಲವಾಗಿ, ಸಾದಿಕ್ ಪೈಲ್ವಾನ್ ಯಾವುದೇ ಷರತ್ತುಗಳಿಲ್ಲದೆ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ.
“ಸಾದಿಕ್ ಪೈಲ್ವಾನ್ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಇದ್ದವರು. ಅವರಿಗೆ ಸೂಕ್ತ ಸ್ಥಾನಮಾನ ನೀಡುವುದು ಮತ್ತು ಅವರನ್ನು ರಾಜಕೀಯವಾಗಿ ಬೆಳೆಸುವುದು ನಮ್ಮ ಜವಾಬ್ದಾರಿ,” ಎಂದು ಡಿಕೆಶಿ ತಿಳಿಸಿದ್ದಾರೆ.
ಬಂಡಾಯಕ್ಕೆ ತೆರೆ: ಚುನಾವಣಾ ಕಣದಿಂದ ಹಿಂದೆ ಸರಿದ ಪೈಲ್ವಾನ್
ಆರಂಭದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಸಾದಿಕ್ ಪೈಲ್ವಾನ್, ಅಂತಿಮವಾಗಿ ಪಕ್ಷದ ನಾಯಕರ ಮಾತಿಗೆ ಮಣಿದು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಇದರಿಂದ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಉಂಟಾಗಿದ್ದ ಒಳಭಿನ್ನತೆ ಶಮನಗೊಂಡಿದೆ.
ಡಿಕೆಶಿ ಟಾಂಗ್: ಜವಾಬ್ದಾರಿ ತಪ್ಪಿಸಿದವರಿಗೆ ಚಾಟಿ
ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಕೆಲ ನಾಯಕರ ವಿರುದ್ಧ ಟೀಕೆ ಮಾಡಿದರು. “ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಕೆಲವರಿಗೆ ಜವಾಬ್ದಾರಿ ನೀಡಲಾಗಿತ್ತು. ಆದರೆ ಕೆಲವರು ಬೇರೆ ಕಾರಣ ಹೇಳಿ ಹಿಂದೆ ಸರಿದರು,” ಎಂದು ಹೇಳುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದರು.
ಸಾದಿಕ್ ಪೈಲ್ವಾನ್ ಪ್ರತಿಕ್ರಿಯೆ
ಸಾದಿಕ್ ಪೈಲ್ವಾನ್ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡು, “ಒಂದು ಮನೆಯಲ್ಲಿ ಒಡಕು ಬಂದರೆ ಹಿರಿಯರು ಮಧ್ಯಪ್ರವೇಶ ಮಾಡುತ್ತಾರೆ. ಅದೇ ರೀತಿ ನಾನು ಮತ್ತೆ ನನ್ನ ಮನೆಯಾದ ಕಾಂಗ್ರೆಸ್ಗೆ ಮರಳಿದ್ದೇನೆ. ನಾನು ಚುನಾವಣಾ ಕಣದಿಂದ ನಿವೃತ್ತಿಯಾಗುತ್ತೇನೆ. ಪಕ್ಷದ ಅಭ್ಯರ್ಥಿ ಪರವಾಗಿ ಭುಜಕ್ಕೆ ಭುಜ ಕೊಟ್ಟು ಕೆಲಸ ಮಾಡುತ್ತೇನೆ,” ಎಂದು ಹೇಳಿದ್ದಾರೆ.
ಅವರು ಮುಂದುವರೆದು, “ಎಲ್ಲಾ ಧರ್ಮ ಮತ್ತು ಅಹಿಂದ ಸಮುದಾಯದವರು ಒಂದಾಗಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸುತ್ತೇವೆ,” ಎಂದು ಸ್ಪಷ್ಟಪಡಿಸಿದರು. ನಂತರ ಮಾಧ್ಯಮಗಳ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸದೇ ಅಲ್ಲಿಂದ ತೆರಳಿದರು.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈ ಬೆಳವಣಿಗೆಯನ್ನು ಸ್ವಾಗತಿಸಿ, “ಸಾದಿಕ್ ಪೈಲ್ವಾನ್ ದೊಡ್ಡ ಕುಸ್ತಿಪಟು ಹಾಗೂ ಕಟ್ಟಾ ಕಾಂಗ್ರೆಸ್ಸಿಗ. ಅವರು ಚುನಾವಣಾ ಕಣದಿಂದ ಹಿಂದೆ ಸರಿದಿರುವುದು ಒಳ್ಳೆಯ ಬೆಳವಣಿಗೆ. ಅವರಿಗೆ ಧನ್ಯವಾದಗಳು,” ಎಂದು ಹೇಳಿದರು.
ದಾವಣಗೆರೆ ಉಪ ಚುನಾವಣೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಬಂಡಾಯ ಶಮನಗೊಂಡಿದ್ದು, ಇದು ಪಕ್ಷಕ್ಕೆ ಬಲ ತುಂಬುವ ಬೆಳವಣಿಗೆಯಾಗಿ ಪರಿಣಮಿಸಿದೆ. ನಾಯಕರ ಸಂಧಾನದ ಮೂಲಕ ಸಮಸ್ಯೆಯನ್ನು ಬಗೆಹರಿಸಿರುವುದು ಚುನಾವಣಾ ಕಣದಲ್ಲಿನ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಕಾಂಗ್ರೆಸ್ನಿಂದ ಸಮರ್ಥ್ ಶಾಮನೂರು, ಬಿಜೆಪಿ- ಜೆಡಿಎಸ್ ಮೈತ್ರಿಯ ಎನ್ಡಿಎ ಅಭ್ಯರ್ಥಿಯಾಗಿ ಶ್ರೀನಿವಾಸ ದಾಸಕರಿಯಪ್ಪ ಅಭ್ಯರ್ಥಿಗಳಾಗಿದ್ದಾರೆ.


