2028ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಸಮಾವೇಶದಲ್ಲಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ವಿಶ್ವದ ಮಾದರಿ ಎಂದು ಶ್ಲಾಘಿಸಿದ ಅವರು, ಕುಮಾರಸ್ವಾಮಿ ಟೀಕೆಗೆ ತಿರುಗೇಟು.
ತುಮಕೂರು (ಮೇ.20): 2028ರಲ್ಲಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಬರುತ್ತೆ. ಜೆಡಿಎಸ್ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಲಿ. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಂಗಳವಾರ ನಡೆದ ‘ಸಾರ್ಥಕ ಸೇವೆಯ ಸಮರ್ಪಣೆ’ ಸಮಾವೇಶದಲ್ಲಿ ಅವರು ಮಾತನಾಡಿದರು. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನದ ಪ್ರಕಾರ, ಕರ್ನಾಟಕದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಬಡವರ ಬದುಕಿನಲ್ಲಿ ಸಾಮಾಜಿಕ ಬದಲಾವಣೆ ತಂದಂತಹ ಕಾರ್ಯಕ್ರಮಗಳಾಗಿವೆ. ಇವು ವಿಶ್ವಕ್ಕೇ ಮಾದರಿ. ಪ್ರಧಾನಿ ಮೋದಿಯಾದಿಯಾಗಿ ಬಿಜೆಪಿ ನಾಯಕರು ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಾರೆ. ಆದರೆ, ನಾವು ಕೊಟ್ಟ ಗ್ಯಾರಂಟಿಯನ್ನು ಕಾಪಿ ಮಾಡಿಕೊಳ್ಳುತ್ತಿದ್ದಾರೆ. ಟೀಕೆಗಳು ಸಾಯ್ತವೆ, ಆದರೆ, ನಾವು ಮಾಡಿದ ಒಳ್ಳೆಯ ಕೆಲಸಗಳು ಉಳಿಯುತ್ತವೆ ಎಂದು ಹೇಳಿದರು.
ಕೊಟ್ಟ ಕುದುರೆ ಏರಲು ಆಗದ ಎಚ್ಡಿಕೆ:
ಮೊನ್ನೆ ತಾನೇ ಕುಮಾರಸ್ವಾಮಿಯವರು ಬೆಂಗಳೂರು ನಗರದಲ್ಲಿ ‘ಬಿ’ ಖಾತೆಯಿಂದ ‘ಎ’ ಖಾತೆ ಮಾಡಿಸಬೇಡಿ, ನಮ್ಮ ಸರ್ಕಾರ ಬಂದು ಬಿಡುತ್ತದೆ. ನೀವು ಯಾರೂ ದುಡ್ಡು ಕೊಡಲು ಹೋಗಬೇಡಿ. ನಾವು ಮಾಡುತ್ತೇವೆ ಎಂದು ಮಾತಾಡಿದ್ದಾರೆ. ಅದಕ್ಕೆ ಹಿಂದೆಯೇ ನಾನು ಉತ್ತರ ನೀಡಿದ್ದೆ, ಕೊಟ್ಟ ಕುದುರೆಯನ್ನು ಏರಲು ಆಗದವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಕೊಟ್ಟಾಗ ನಿಮಗೇನೂ ಮಾಡುವುದಕ್ಕೆ ಆಗಲಿಲ್ಲ. ಅಧಿಕಾರ ಇಲ್ಲದೆ ಹೋದಾಗ ಬರೀ ಹದಿನೇಳು ಜನರನ್ನು ಇಟ್ಟುಕೊಂಡು ಹರಿತೀನಿ, ಹರಿತೀನಿ, ಹರಿತೀನಿ ಅಂದ್ರೆ, ನಿಮ್ಮ ಕೈಯಲ್ಲಿ ಏನೂ ಮಾಡಲಿಕ್ಕೆ ಸಾಧ್ಯ ಇಲ್ಲ. ನಿಮ್ಮ ಶಾಸಕರು ವಿಧಾನಸಭೆಯಲ್ಲಿ ಬಡವರ ಬಗ್ಗೆ ಒಂದು ದಿನವೂ ಮಾತಾಡಿಲ್ಲ. ನಿಮ್ಮಲ್ಲಿರುವಂತಹ ಸಮಸ್ಯೆ ಬಗೆಹರಿಸಿಕೊಳ್ಳುವುದಕ್ಕೆ ನಿಮ್ಮ ಹತ್ತಿರ ಸಮಯ ಇಲ್ಲ. ಇನ್ನು ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮಾತು ಬೇಡವೇ ಬೇಡ ಎಂದು ವಾಗ್ದಾಳಿ ನಡೆಸಿದರು.
ಕೊಟ್ಟು ಹೋಗಬೇಕು, ಇಲ್ಲ ಬಿಟ್ಟು ಹೋಗ್ಬೇಕು: ಡಿಕೆ ಮಾರ್ಮಿಕ ನುಡಿ
‘ದೇವರು ನಮಗೆ ಕೊಟ್ಟಿರುವುದು ಎರಡೇ ಆಯ್ಕೆ, ಒಂದು ಕೊಟ್ಟು ಹೋಗಬೇಕು, ಇಲ್ಲ ಬಿಟ್ಟು ಹೋಗಬೇಕು. ತೆಗೆದುಕೊಂಡು ಹೋಗುವ ಯಾವ ಆಯ್ಕೆಯೂ ಇಲ್ಲ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಮಿಕವಾಗಿ ನುಡಿದಿದ್ದಾರೆ. ತುಮಕೂರು ಸಮಾವೇಶದಲ್ಲಿ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕಂಥ ಸಂದರ್ಭದಲ್ಲಿ ನಮ್ಮ ಸಹೋದ್ಯೋಗಿ ಸಚಿವರು ನಿಮಗೆ ಶಕ್ತಿ ತುಂಬಿದ್ದಾರೆ. ಕಾಂಗ್ರೆಸ್ ಸರ್ಕಾರ ದೇಶಕ್ಕೆ ಮಾದರಿ ಸರ್ಕಾರವನ್ನು ಕೊಟ್ಟಿದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದರು.


