‘ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಮುಖ್ಯಮಂತ್ರಿ ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ. ಅದಕ್ಕಾಗಿ ಸೂಕ್ತ ಮುಹೂರ್ತ ನಿಗದಿ ಮಾಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀಕ್ಷ್ಣ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಅ.17): ‘ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಮುಖ್ಯಮಂತ್ರಿ ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ. ಅದಕ್ಕಾಗಿ ಸೂಕ್ತ ಮುಹೂರ್ತ ನಿಗದಿ ಮಾಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಬೆಂಗಳೂರು ಸದಾಶಿವನಗರದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ ಹಾಗೂ ಕುಮಾರಕೃಪ ಅತಿಥಿ ಗೃಹದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಹೈಕಮಾಂಡ್‌ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್‌ ಟಾಸ್ಕ್‌ ನೀಡಿದ್ದಾರೆ’ ಎಂಬ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅವರಂತೆ ಮಾತನಾಡಲು ಆಗುವುದಿಲ್ಲ. ನ್ಯಾಯಾಲಯದ ವಿಚಾರದಲ್ಲಿ ಆ ರೀತಿ ಮಾತನಾಡಿದರೆ ತಪ್ಪಾಗುತ್ತದೆ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’ ಎಂದು ತಿಳಿಸಿದರು. ಪ್ರತಿಪಕ್ಷದವರ ಆರೋಪಕ್ಕೆ ಹೈವೋಲ್ಟೇಜೂ ಕೊಡ್ತಿನಿ, ಲೋವೋಲ್ಟೇಜೂ ಕೊಡ್ತಿನಿ. ನಕಲಿಗೂ ಕೊಡುವೆ, ಲೂಟಿಗೂ ಕೊಡುವೆ, ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದರು.

ಕೃಷಿ ಕ್ಷೇತ್ರದ ಬೆಳವಣಿಗೆಗೆ ಹೈಟೆಕ್‌ ಹಬ್‌ ಸ್ಥಾಪನೆ: ಸಚಿವ ಚೆಲುವರಾಯಸ್ವಾಮಿ

ಬಿಜೆಪಿಯವರು ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರು ಪ್ರತಿಭಟನೆ ಮಾಡಬೇಕು, ಪ್ರತಿಭಟನೆ ಮಾಡಿದರೆ ಜನರಿಗೆ ಅವರ ಎಲ್ಲಾ ತರಹದ ಲೂಟಿ ಬಗ್ಗೆ ಗೊತ್ತಾಗುತ್ತದೆ, ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ಎಚ್ಚರಿಸಿದರು. ಹೈಕೋರ್ಟ್ ತಡೆಯಾಜ್ಞೆ ತೆರವಿಗೆ ಸಿಬಿಐ ಮಾಡಿದ್ದ ಮನವಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ‘ಶಿವಕುಮಾರ್ ಎಲ್ಲಿಯೂ ಓಡಿ ಹೋಗೋಲ್ಲ’ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಹೌದು, ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ. ನ್ಯಾಯಾಲಯದ ವಿಚಾರಣೆ, ನೆಲದ ಕಾನೂನನ್ನು ನಾನು ಗೌರವಿಸುತ್ತೇನೆ’ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಆಗಮನ ಹಾಗೂ ಪಕ್ಷದ ನಾಯಕರ ಸಭೆ ಕುರಿತು ಮಾಹಿತಿ ನೀಡಿದ ಅವರು, ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾನು ಪಕ್ಷದ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಲೋಕಸಭೆ ಕ್ಷೇತ್ರಗಳಿಗೆ ಹೋಗಿ ವರದಿ ನೀಡುವಂತೆ ಮಂತ್ರಿಗಳಿಗೆ ಜವಾಬ್ದಾರಿ ನೀಡಿದ್ದೆವು. ಈ ಪ್ರಕ್ರಿಯೆ ತಡವಾಗುತ್ತಿರುವುದರಿಂದ ಅದನ್ನು ತ್ವರಿತವಾಗಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದಷ್ಟೇ ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಇವರೆಲ್ಲಾ ಚಿಗುರುತ್ತಾರೆ: ಭಗವಾನ್ ವಿರುದ್ಧ ಸುಧಾಕರ್ ಆಕ್ರೋಶ

ನಿಗಮ-ಮಂಡಳಿ ಎರಡು ದಿನದಲ್ಲಿ ಚರ್ಚೆ: ನಿಗಮ-ಮಂಡಳಿಗಳಲ್ಲಿ ಶಾಸಕರಿಗೆ ಮಾತ್ರ ಸ್ಥಾನವೇ? ಎಂಬ ಪ್ರಶ್ನೆಗೆ, ಶಾಸಕರು ಹಾಗೂ ಕಾರ್ಯಕರ್ತರು ಇಬ್ಬರಿಗೂ ನೀಡಬೇಕು. ಪಕ್ಷ ಎಂದರೆ ಎಲ್ಲರೂ ಸೇರುತ್ತಾರೆ. ಎಲ್ಲರಿಗೂ ಸ್ಥಾನಮಾನ ನೀಡಬೇಕು. ಈ ವಿಚಾರವಾಗಿ ನಾನು ಹಾಗೂ ಮುಖ್ಯಮಂತ್ರಿಗಳು ಒಂದೆರಡು ದಿನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.