ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅನ್ಯಪಕ್ಷಗಳ ಮುಖಂಡರು ಹಾಗೂ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆದವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಜೋರಾಗಿದೆ. ಅದರ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ, ಜೆಡಿಎಸ್‌ನಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ.

ಬೆಂಗಳೂರು(ಆ.20): ಕಾಂಗ್ರೆಸ್‌ನಲ್ಲಿ ಘರ್‌ ವಾಪಸಿ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕೀಯ ಧ್ರುವೀಕರಣ ಆರಂಭವಾಗಿದೆ. ಬಿಜೆಪಿಯ ಮಾಜಿ ಎಂಎಲ್‌ಸಿ, ಹಾಲಿ ಜೆಡಿಎಸ್‌ನಲ್ಲಿರುವ ಆಯನೂರು ಮಂಜುನಾಥ್‌ ಹಾಗೂ ಶಿಕಾರಿಪುರದಲ್ಲಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಾಗರಾಜ್‌ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಅನ್ಯಪಕ್ಷಗಳ ಮುಖಂಡರು ಹಾಗೂ ವಿಧಾನಸಭೆ ಚುನಾವಣೆಗೂ ಮುನ್ನ ಪಕ್ಷ ತೊರೆದವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಜೋರಾಗಿದೆ. ಅದರ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ, ಜೆಡಿಎಸ್‌ನಲ್ಲಿನ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ.

ರಾಜ್ಯ​ದಲ್ಲಿ ವಿಚಿತ್ರವಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಸರ್ಕಾರ: ಶಾಸಕ ಬಿ.ವೈ.ವಿಜಯೇಂದ್ರ

ಅದರಲ್ಲೂ ಚುನಾವಣೆಗೂ ಮುನ್ನ ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಆಯನೂರು ಮಂಜುನಾಥ್‌ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ. ಬಹುತೇಕ ಮುಂದಿನ ವಾರದೊಳಗೆ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿಕಾರಿಪುರ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಎದುರು ಸ್ಪರ್ಧಿಸಿ ಒಂದು ಹಂತದಲ್ಲಿ ಗೆಲ್ಲುವ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ನಾಗರಾಜ್‌, ಕಾಂಗ್ರೆಸ್‌ಗೆ ಮತ್ತೆ ವಾಪಾಸಾಗುತ್ತಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್‌ನಲ್ಲೇ ಇದ್ದ ನಾಗರಾಜ್‌ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಗೋಣಿ ಮಾಲತೇಶ್‌ಗೆ ಕಾಂಗ್ರೆಸ್‌ ಟಿಕೆಟ್‌ ಘೊಷಿಸಿತ್ತು. ಹೀಗಾಗಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು, ವಿಜಯೇಂದ್ರ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದರು. ಇದೀಗ ಅವರನ್ನು ಮತ್ತೆ ಪಕ್ಷಕ್ಕೆ ವಾಪಸು ಕರೆತರುವಲ್ಲಿ ಮಧು ಬಂಗಾರಪ್ಪ ಸಫಲರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ನಾಯಕರ ಜತೆಗೆ ಸ್ಥಳೀಯ ಮುಖಂಡರು ಕೂಡ ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿದ್ದಾರೆ. ಅದರಲ್ಲೂ ಸೊರಬ ಬಿಜೆಪಿಯ 10ಕ್ಕೂ ಹೆಚ್ಚಿನ ಮುಖಂಡರು ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.