ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವ್ಯಾಹತವಾಗಿ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟು ಹೋಗಿದೆ. ಪೊಲೀಸ್ ಇಲಾಖೆಯು ಸರ್ಕಾರದ ಮಾತು ಕೇಳುತ್ತಿಲ್ಲ. ಜನರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಪುತ್ತೂರು (ಜು.15) : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವ್ಯಾಹತವಾಗಿ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟು ಹೋಗಿದೆ. ಪೊಲೀಸ್ ಇಲಾಖೆಯು ಸರ್ಕಾರದ ಮಾತು ಕೇಳುತ್ತಿಲ್ಲ. ಜನರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಶುಕ್ರವಾರ ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ತಿಂಗಳಿನಲ್ಲಿ ಮುನಿಗಳ, ಉದ್ಯಮಿಗಳ, ಬಿಜೆಪಿ ಕಾರ್ಯಕರ್ತರ ಹಾಗೂ ಕೂಲಿ ಕಾರ್ಮಿಕರ ಸಹಿತ ಹತ್ತಾರು ಮಂದಿಯ ಹತ್ಯೆಗಳು ನಡೆದಿವೆ. ಅಧಿಕಾರಿಗಳ ವರ್ಗಾವಣೆಯನ್ನು ರೇಟ್ ಕಾರ್ಡ್ ಇಟ್ಟುಕೊಂಡು ದಂಧೆಯಾಗಿಸಿ ಈ ಸರ್ಕಾರ ವ್ಯಾಪಕ ಭ್ರಷ್ಟಚಾರ ನಡೆಸಿದ ಪರಿಣಾಮ ಪೊಲೀಸ್ ಇಲಾಖೆ ಸರ್ಕಾರದ ಮಾತು ಕೇಳದ ಕಾರಣ ಅವ್ಯಾಹತವಾಗಿ ಹತ್ಯೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಹಿಂದೂ ಮುಖಂಡ ಅರುಣ್ ಪುತ್ತಿಲ ಬಗ್ಗೆ ನಳಿನ್ ಕುಮಾರ್ ಫಸ್ಟ್ ರಿಯಾಕ್ಷನ್!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಹತ್ಯೆಗಳು ಹಾಗೂ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತವೆ. ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಯ ರು. 6000ಕ್ಕೆ ಹೆಚ್ಚುವರಿಯಾಗಿ ರು. 4000 ಸೇರಿಸಿ ರಾಜ್ಯ ಸರ್ಕಾರ ನೀಡುತಿತ್ತು. ಇದನ್ನು ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರ ನಿಲ್ಲಿಸಿದ್ದು, ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಈ ಯೋಜನೆಯನ್ನು ಪುನರಾರಂಭಿಸಬೇಕು ಎಂದು ಆಗ್ರಹಿಸಿದರು.
ಈ ಹಿಂದಿನ ಬೊಮ್ಮಾಯಿ ಸರ್ಕಾರ ಅಭಿವೃದ್ದಿ ಕಾಮಗಾರಿಗಳಿಗೆ ಸಾವಿರಾರು ಕೋಟಿ ರು. ಅನುದಾನ ಮೀಸಲಿಟ್ಟಿತ್ತು. ಇದರಲ್ಲಿ ಕಾಮಕಾರಿ ಪೂರ್ಣಗೊಳ್ಳದ ಅಥಾವ ಇನ್ನಷ್ಟೆಆರಂಭಗೊಳ್ಳಬೇಕಾದ ಕಾಮಗಾರಿಗಳ ಹಣವನ್ನು ತಡೆ ಹಿಡಿಯುವ ಮೂಲಕ ಈಗಿನ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದರಿಂದ ಅಭಿವೃದ್ದಿ ಕಾರ್ಯಗಳು ಕುಂಠಿತವಾಗುತ್ತಿದೆ ಎಂದು ಆಕ್ಷೇಪಿಸಿದರು.
ಹವಮಾನ ಆಧಾರಿತ ಫಸಲು ಬಿಮಾ ಯೋಜನೆ ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಾಗದಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅಡಕೆ ಮತ್ತು ಕಾಳು ಮೆಣಸು ಹಿಂದೆಯೇ ಫಸಲ್ ಭಿಮಾ ಯೋಜನೆಯಡಿ ಕೇಂದ್ರ ಸರ್ಕಾರ ಸೇರಿಸಿತ್ತು. ಹಿಂದಿನ ರಾಜ್ಯ ಸರ್ಕಾರ ಅದಕ್ಕೆ ಅದೇಶವನ್ನು ಮಾಡಿತ್ತು ಈ ತಿಂಗಳಿನ ಒಳಗಡೆ ಅದು ಬಿಡುಗಡೆಯಾಗುತ್ತದೆಂದು ಭರವಸೆ ನೀಡಿದರು.
ಸೋಲಿಗೆ ಕಾರಣ:
ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪಕ್ಷೇತರ ಅಭ್ಯರ್ಥಿಯಿಂದಾಗಿ ಬಿಜೆಪಿ ಅಭ್ಯರ್ಥಿಗೆ ಸೋಲಾಯಿತೇ ಹೊರತು ಪಕ್ಷದೊಳಗೆ ಯಾವುದೇ ಗೊಂದಲಗಳಿರಲಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ಪರ್ಧಿಸುವ ಅವಕಾಶವಿದೆ. ಈಗ ಗ್ರಾ. ಪಂ ಉಪ ಚುನಾವಣೆ ಸಂದರ್ಭವು ರಾಷ್ಟ್ರೀಯ ಪಕ್ಷವಾಗಿ ನಾವು ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಮತ್ತು ಅವರ ಗೆಲವಿಗಾಗಿ ಶಕ್ತಿ ಮೀರಿ ಶ್ರಮಿಸಲಿದ್ದೇವೆ ಎಂದರು.
ಸೂಕ್ತ ಸಮಯದಲ್ಲಿ ವಿಪಕ್ಷ ನಾಯಕ ಆಯ್ಕೆ: ನಳಿನ್
ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳಿಲ್ಲ. ಸೂಕ್ತ ಸಮಯದಲ್ಲಿ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕನ ಆಯ್ಕೆ ಮಾಡಲಿದ್ದಾರೆ. ಬಿಜೆಪಿಯಿಂದ 66 ಶಾಸಕರು ವಿಧಾನಸಭೆಗೆ ಆಯ್ಕೆಯಾಗಿದ್ದು ಎಲ್ಲರೂ ಸಮರ್ಥ ಸಂಸದೀಯ ಪಟುಗಳಾಗಿದ್ದು , ಪ್ರತಿಯೊಬ್ಬರು ವಿಪಕ್ಷ ನಾಯಕನ ಸ್ಥಾನಕ್ಕೆ ಸಮರ್ಥರಾಗಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.
ಚುನಾವಣೆ ಬಳಿಕ ಅರುಣ್ ಕುಮಾರ್ ಪುತ್ತಿಲರ ಜತೆ ನೀವು ಮಾತುಕತೆ ನಡೆಸಿದ್ದೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ವೈಯಕ್ತಿಕ ವಿಷಯಗಳನ್ನು ಮಾತನಾಡಲು ಇಚ್ಛಿಸುವುದಿಲ್ಲ. ರಾಷ್ಟ್ರೀಯ ನಾಯಕರ ಜತೆ ಚರ್ಚೆಗಳು ನಡೆದಿದ್ದು, ಈ ಕುರಿತ ನಿರ್ಧಾರ ಅವರೆ ತೆಗೆದುಕೊಳ್ಳಲಿದ್ದಾರೆಂದು ತಿಳಿಸಿದರು.
ಜೈನ ಮುನಿಗಳ ಹತ್ಯೆ: ಪಾರದರ್ಶಕತೆ ತನಿಖೆಗೆ ನಳಿನ್ ಕುಮಾರ್ ಕಟಿಲ್ ಆಗ್ರಹ
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತ ಯಾವುದೇ ಚರ್ಚೆಗಳು ಈಗ ನಡೆದಿಲ್ಲ . ಸದ್ಯ ಪಕ್ಷವನ್ನು ಮುಂದಿನ ಚುನಾವಣೆಗೆ ತಯಾರಿ ಮಾಡುವ ಕಾರ್ಯ ನಡೆಯುತ್ತಿದೆ. ಯಾರ ಜತೆ ಹೋಗಬೇಕು, ಯಾರ ಜತೆ ಮೈತ್ರಿ ಮಾಡಿಕೊಳ್ಳಬೇಕು, ಯಾರು ಅಭ್ಯರ್ಥಿ ಎಂಬ ಕುರಿತು ಮುಂದಿನ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಯೋಚನೆ ಮಾಡಲಿದ್ದೇವೆ ಎಂದರು.
