ಬಿಜೆಪಿ ಪಕ್ಷದಿಂದ ಮಾತ್ರ ದೇಶದ ವಿಕಾಸ ಮತ್ತು ಪರಿವರ್ತನೆ ಸಾಧ್ಯವಿದೆ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಮತ್ತೊಮೆ ಅಧಿಕಾರ ಹಿಡಿಯುವುದರಲ್ಲಿ ಅನುಮಾನವಿಲ್ಲ. ಮೋದಿಯವರ ಆಡಳಿತ ಎಲ್ಲರಲ್ಲೂ ಚೈತನ್ಯ ಮೂಡಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ ತಿಳಿಸಿದರು. 

ತಿಪಟೂರು (ಮಾ.19): ಬಿಜೆಪಿ ಪಕ್ಷದಿಂದ ಮಾತ್ರ ದೇಶದ ವಿಕಾಸ ಮತ್ತು ಪರಿವರ್ತನೆ ಸಾಧ್ಯವಿದೆ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಮತ್ತೊಮೆ ಅಧಿಕಾರ ಹಿಡಿಯುವುದರಲ್ಲಿ ಅನುಮಾನವಿಲ್ಲ. ಮೋದಿಯವರ ಆಡಳಿತ ಎಲ್ಲರಲ್ಲೂ ಚೈತನ್ಯ ಮೂಡಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್‌ ನಡ್ಡಾ ತಿಳಿಸಿದರು. ತಿಪಟೂರಿಗೆ ಶನಿವಾರ ಆಗಮಿಸಿದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯಲ್ಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಿಸಾನ್‌ ಸಮ್ಮಾನ್‌ ಯೋಜನೆ, ಪ್ರಧಾನಮಂತ್ರಿ ಗರೀಬ್‌ ಯೋಜನೆ ಹೀಗೆ ರೈತರು, ಮಹಿಳೆಯರು, ಆದಿವಾಸಿ, ದಲಿತರನ್ನು ಗಮನದಲ್ಲಿಟ್ಟುಕೊಂಡು ಹಲವು ಮಹತ್ವಕಾಂಕ್ಷಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಿಜೆಪಿ ಸದೃಢ ಪಕ್ಷವಾಗಿ ಬೆಳೆದಿದೆ. 

Add Asianetnews Kannada as a Preferred SourcegooglePreferred

ಆದರೆ ಕಾಂಗ್ರೆಸ್‌ ಪಕ್ಷ ಕುಟುಂಬ ಪರಿವಾರಕ್ಕೆ ಮಾತ್ರ ಸೀಮಿತವಾಗಿದ್ದು ಕ್ರಿಮಿನಲ್‌, ಭ್ರಷ್ಟಚಾರದ ಪಕ್ಷವಾಗಿದೆ. ರಾಹುಲ್‌ಗಾಂದಿ ಪಾದಯಾತ್ರೆ ಮಾಡಿದರೂ ಚುನಾವಣೆಯಲ್ಲಿ ಒಂದು ಸೀಟನ್ನು ಗೆಲ್ಲುವುದಿಲ್ಲ. ಮೋದಿಯವರ ಕಮಾಲ್‌ ಮುಂದೆ ಕಾಂಗ್ರೆಸ್‌ ಶೂನ್ಯ. ಆದ್ದರಿಂದ ಕಾಂಗ್ರೆಸ್‌ನ್ನು ರಾಜ್ಯದಿಂದ ಕೊತ್ತೊಗೆಯ ಕೆಲಸವನ್ನು ನೀವು ಮಾಡಬೇಕೆಂದರು. ತಿರುಕನ ಕನಸು ಕಾಣುತ್ತಿರುವ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಿ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವ ಮೂಲಕ ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿಸುವುದು ನಮ್ಮ ಗುರಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಕ್ರೆಡಿಟ್‌ ತೆಗೆದುಕೊಳ್ಳೋದು ಎಚ್ಡಿಕೆಗೆ ಹೊಸತೇನಲ್ಲ: ಸಿ.ಪಿ.ಯೋಗೇಶ್ವರ್‌

ರಾಜ್ಯದೆಲ್ಲೆಡೆ ವಿಜಯ ಸಂಕಲ್ಪ ರಥಯಾತ್ರೆಗೆ ಅದ್ಧೂರಿ ಸ್ವಾಗತ ದೊರೆಯುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ನೂರಕ್ಕೆ ನೂರರಷ್ಟು ಅಧಿಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತಪರ, ಜನಪರ ಹಾಗೂ ಎಲ್ಲಾ ವರ್ಗದ ಹಿತ ಕಾಪಾಡುವಂತಹ ಯೋಜನೆಗಳನ್ನು ಜಾರಿಗೆ ತಂದು ಎಲ್ಲರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅವರ ಎಂಟೂವರೆ ವರ್ಷದ ಜನಪರ ಆಡಳಿತಕ್ಕೆ ದೇಶದ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು ದೇಶ ವಿದೇಶಿಗಳಿಗೆ ಹೋದರೂ ವಿಶ್ರಾಂತಿ ಪಡೆಯದೆ ದೇಶದ ಅಭಿವೃದ್ಧಿಗೆ ಕಟಿಬದ್ಧರಾಗಿದ್ದಾರೆ. 

ಕಳೆದ ಬಾರಿ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್‌ ಪಕ್ಷ ಈ ಬಾರಿಯೂ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತೇವೆಂಬ ಭಯ ಕಾಂಗ್ರೆಸ್‌ ಪಕ್ಷಕ್ಕಿದೆ. ಆದರೆ ಬಿಜೆಪಿ ಜನಸಾಮಾನ್ಯರ ಪಕ್ಷವಾಗಿದ್ದು ಪಕ್ಷದ ಸಾಧನೆ ಏನು ಎಂಬುದು ರಾಜ್ಯದ ಜನತೆಗೆ ತಿಳಿದಿದ್ದು, ನಿಮ್ಮ ಆಶೀರ್ವಾದವಷ್ಟೇ ನಮಗೆ ಬೇಕಿದೆ. ತುಮಕೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದ್ದು ತಿಪಟೂರಿನಿಂದ ಬಿ.ಸಿ. ನಾಗೇಶ್‌ರನ್ನು ಮತ್ತೊಮ್ಮೆ ಗೆಲ್ಲಿಸಬೇಕು. ಮುಂಬರುವ ಚುನಾವಣೆಯಲ್ಲಿ ನಿಮ್ಮೆಲ್ಲರ ಸಹಕಾರದಿಂದ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ರಥಯಾತ್ರೆಯಲ್ಲಿ ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲು, ಕಂದಾಯ ಸಚಿವ ಆರ್‌. ಆಶೋಕ್‌, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್‌, ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ಸೇರಿದಂತೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು. ಕಾರ್ಯಕರ್ತರು ಬೈಕ್‌ ರಾರ‍ಯಲಿ ಮೂಲಕ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ನಗರದ ಬಂಡೀಹಳ್ಳಿಯಿಂದ ಯಾತ್ರೆ ಪ್ರಾರಂಭವಾಗಿ ನಂತರ ನೀಲಕಂಠಸ್ವಾಮಿ ಸರ್ಕಲ್‌, ಸಿಂಗ್ರಿ ನಂಜಪ್ಪ ವೃತ್ತದ ಬಳಿ ಸಮಾವೇಶಗೊಂಡಿತು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟ ಗ್ಯಾರಂಟಿ: ಸಿ.ಟಿ.ರವಿ

ಕೊಬ್ಬರಿ ಧರಣಿಯತ್ತ ತಿರುಗಿ ನೋಡದ ರಥಯಾತ್ರೆ: ಕಳೆದ 27 ದಿನಗಳಿಂದಲೂ ಇಲ್ಲಿನ ತೆಂಗು ಬೆಳೆಗಾರರು ನಗರದ ಮುಖ್ಯ ರಸ್ತೆಯಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ವಿಜಯಸಂಕಲ್ಪ ರಥಯಾತ್ರೆಯು ಸೌಜನ್ಯಕ್ಕಾದರೂ ಧರಣಿ ಸ್ಥಳಕ್ಕೆ ಬಂದು ರೈತರ ಬೇಡಿಕೆ ಅಥವಾ ಸಮಸ್ಯೆಯನ್ನು ಆಲಿಸಲಿಲ್ಲ. ರೈತರ ಹೆಸರಿನಲ್ಲಿ ಪ್ರಮಾಣ ಮಾಡಿ ಅಧಿಕಾರ ಹಿಡಿಯುವ ಇವರಿಗೆ ರೈತರು ಬೇಡವೇ ಎಂದು ಇಲ್ಲಿನ ತೆಂಗುಬೆಳೆಗಾರರು, ಸಾರ್ವಜನಿಕರು, ವಿರೋಧ ಪಕ್ಷದವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆಗಳು ಕಂಡುಬಂದವು.