ಧರ್ಮಸ್ಥಳ ಪ್ರಕರಣದಲ್ಲಿ ಪ್ರಸ್ತಾಪಗೊಂಡ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಕಾಂಗ್ರೆಸ್ಸಿಗರ ಪಾತ್ರ ಹೊರಬೀಳಲಿದೆ ಎಂಬ ಆತಂಕ ಸರ್ಕಾರವನ್ನು ಕಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.
ಹುಬ್ಬಳ್ಳಿ (ಸೆ.14): ಧರ್ಮಸ್ಥಳ ಪ್ರಕರಣದಲ್ಲಿ ಪ್ರಸ್ತಾಪಗೊಂಡ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದರೆ ಕಾಂಗ್ರೆಸ್ಸಿಗರ ಪಾತ್ರ ಹೊರಬೀಳಲಿದೆ ಎಂಬ ಆತಂಕ ಸರ್ಕಾರವನ್ನು ಕಾಡುತ್ತಿದೆ. ಹೀಗಾಗಿಯೇ ಅವರನ್ನು ಈವರೆಗೂ ಬಂಧಿಸಿಲ್ಲ. ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಮೃತ ವ್ಯಕ್ತಿಯ ಹೂತ ಶವ ಹೊರ ತೆಗೆಯಬೇಕೆಂದರೆ ಕೋರ್ಟ್ ಅನುಮತಿ ಬೇಕಾಗುತ್ತದೆ. ಆದರೆ, ಧರ್ಮಸ್ಥಳದಲ್ಲಿ ಅದ್ಯಾವುದನ್ನೂ ಪಾಲಿಸಿಲ್ಲ. ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಹೊರ ದೇಶಗಳಿಂದ ಭಯೋತ್ಪಾದಕರ ನಿಧಿ ಬಳಕೆಯಾಗುತ್ತಿರಬಹುದು ಎಂದು ಸಂಶಯ ವ್ಯಕ್ತಪಡಿಸಿದರು.
ಬುರುಡೆಯನ್ನು ಯಾರು ತಂದುಕೊಟ್ಟರು, ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಮುಸುಕುಧಾರಿ ಹೇಳಿಕೆ ನೀಡಿದ್ದಾನೆ. ಹೀಗಿದ್ದಾಗಲೂ ಅವರನ್ನು ಬಂಧಿಸದೆ, ಕೇವಲ ಕಾಟಾಚಾರಕ್ಕೆ ವಿಚಾರಿಸಿ ಕೈ ಬಿಡಲಾಗುತ್ತಿದೆ. ಬುರುಡೆ ತಗೊಂಡವನನ್ನು ಮಾತ್ರ ಬಂಧಿಸಲಾಗಿದೆ. ಕೊಟ್ಟವನನ್ನು ಬಿಡಲಾಗಿದೆ. ಇದನ್ನೆಲ್ಲ ಗಮನಿಸಿದರೆ ಇದೊಂದು ಕಾಂಗ್ರೆಸ್ ಮತ್ತು ಸರ್ಕಾರದ ಷಡ್ಯಂತ್ರದ ಭಾಗವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು. ಕೋಮು ಗಲಭೆಗೆ ಸಂಬಂಧಿಸಿ ಹಾಗೂ ಸಿಎಂಗೆ ಅವಹೇಳನ ಮಾಡಿದ್ದಾರೆಂದು ಕೆಲವರನ್ನು ಬಂಧಿಸುತ್ತಿರುವ ಪೊಲೀಸರು, ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವವರನ್ನು ಅರೆಸ್ಟ್ ಮಾಡುತ್ತಿಲ್ಲ ಏಕೆ ಎಂದು ಆಕ್ಷೇಪಿಸಿದರು.
ಅನಧಿಕೃತ ಮಸೀದಿ
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮಸೀದಿಯನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಹೊರಗಿನವರ ಕೈವಾಡ ಇದೆ ಎಂದು ಉಸ್ತುವಾರಿ ಸಚಿವರೇ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ತುಷ್ಟೀಕರಣ ನೀತಿ ವ್ಯಾಪಕವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ನರೇಂದ್ರ ಘಟನೆಯನ್ನು ಪ್ರಸ್ತಾಪಿಸಿ, ಧಾರವಾಡದ ನರೇಂದ್ರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಶಾಂತವಾಗಿ ನಡೆಯುತ್ತಿದ್ದರೂ ಅನಗತ್ಯವಾಗಿ ಲಾಠಿ ಪ್ರಹಾರ ಮಾಡಿದ ಅಲ್ಲಿನ ಸಿಪಿಐಯನ್ನು ಸಸ್ಪೆಂಡ್ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಗ್ರಾಮದಲ್ಲಿ ಎರಡೂ ಕಡೆಯಿಂದ ಗಣೇಶ ಮೂರ್ತಿ ಮೆರವಣಿಗೆ ಅತ್ಯಂತ ಶಾಂತಿಯುತವಾಗಿ ನಡೆಯುತ್ತಿತ್ತು. ಆದರೂ ಪೊಲೀಸರು ಲಾಠಿ ಚಾರ್ಜ್ ಮಾಡಿ ಮೆರವಣಿಗೆಯಲ್ಲಿದ್ದವರ ಕೈ-ಕಾಲುಗಳಿಗೆ ಪೆಟ್ಟು ನೀಡಿದ್ದಾರೆ ಎಂದು ದೂರಿದರು. ಸುಪ್ರೀಂಕೋರ್ಟ್ ಸೂಚನೆ ಪ್ರಕಾರ ಗಣೇಶೋತ್ಸವ ಸಂದರ್ಭ ರಾತ್ರಿ ವೇಳೆ ಡಿಜೆ ಹಚ್ಚಬಾರದು ಎಂದು ಸರ್ಕಾರ ಹೇಳಿತು. ಆಕ್ಷೇಪದ ನಡುವೆಯೂ ಸೂಚನೆ ಪಾಲಿಸಲಾಯಿತು. ಆದರೆ, ಬೆಳಗ್ಗೆ ಐದು ಗಂಟೆಗೇ ಆಜಾನ್ ಮೊಳಗುತ್ತದೆ. ಅದಕ್ಯಾಕೆ ಸರ್ಕಾರ ಕಡಿವಾಣ ಹಾಕುತ್ತಿಲ್ಲ ಎಂದು ಸಚಿವರು ಪ್ರಶ್ನಿಸಿದರು.
