ಮತದಾರರಿಗೆ ಆಮಿಷ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಹೈಕೋರ್ಚ್‌ ರದ್ದುಪಡಿಸಿ ಸೋಮವಾರ ಆದೇಶಿಸಿದೆ.

ಬೆಂಗಳೂರು (ಆ.08): ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ನಡೆದಿದ್ದ ಚುನಾವಣಾ ಪ್ರಚಾರದ ಸಂದರ್ಭ ಮತದಾರರಿಗೆ ಆಮಿಷ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ಹೈಕೋರ್ಚ್‌ ರದ್ದುಪಡಿಸಿ ಸೋಮವಾರ ಆದೇಶಿಸಿದೆ. ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಜೆ.ಪಿ. ನಡ್ಡಾ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

Add Asianetnews Kannada as a Preferred SourcegooglePreferred

ಭಾಷಣದ ಮೂಲಕ ಮತದಾರರಿಗೆ ಆಮಿಷ ಮತ್ತು ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಅರ್ಜಿದಾರರ ವಿರುದ್ಧ ಆರೋಪಿಸಲಾಗಿದೆ. ಆದರೆ, ಅದನ್ನು ಸಾಬೀತುಪಡಿಸುವ ಅಂಶಗಳು ದೂರುದಾರರ ಬಳಿ ಇಲ್ಲ ಹಾಗೂ ನಡ್ಡಾ ಅವರ ಭಾಷಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿದ ಬಗ್ಗೆಯೂ ಸಾಕ್ಷ್ಯಗಳಿಲ್ಲ. ಪ್ರಕರಣ ದಾಖಲಿಸಲು ಮ್ಯಾಜಿಸ್ಪ್ರೇಟ್‌ ಅವರಿಂದ ಅನುಮತಿಯನ್ನು ಪಡೆದುಕೊಂಡಿಲ್ಲ. ಹೀಗಿದ್ದರೂ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ದೋಷಪೂರಿತವಾಗಿದೆ ಎಂಬ ಅರ್ಜಿದಾರರ ಪರ ವಕೀಲರ ವಾದ ಪುರಸ್ಕರಿಸಿದ ಹೈಕೋರ್ಚ್‌ ಈ ಆದೇಶ ಮಾಡಿದೆ.

ಕಾಂಗ್ರೆಸ್ಸಿಂದ ದೇಶದ ಆರ್ಥಿಕತೆ ಸದೃಢ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ

ಪ್ರಕರಣದ ಹಿನ್ನೆಲೆ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ಹರಪನಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದ ಜೆ.ಪಿ. ನಡ್ಡಾ, ‘ಡಬಲ್‌ ಎಂಜಿನ್‌ ಸರ್ಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ದೊರೆಯುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳು ಬಂದ್‌ ಆಗಲಿವೆ. ನಿಮಗೆ ಅಭಿವೃದ್ಧಿ ಬೇಕಾದರೆ ಬಿಜೆಪಿ ಗೆಲ್ಲಿಸಬೇಕು’ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಚುನಾವಣಾಧಿಕಾರಿಗಳು ಹರಪನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು.