ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರಿಗೆ ಶಿರಾ ಮತ್ತು ಆರ್‌.ಆರ್.ನಗರ ಉಪಚುನಾವಣೆ ಎದುರಾಗಿದ್ದು, ಈ ಪ್ರಥಮ ಪರೀಕ್ಷೆಯಲ್ಲಿ ಪಾಸಾಗಲು ಸಹೋದರರು ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ.

ಬೆಂಗಳೂರು, (ಅ.03): ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಅವರ ಪತ್ನಿಯನ್ನು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿಸಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ, ಇದರ ಬೆನ್ನಲ್ಲೇ ಶನಿವಾರ ರಾತ್ರಿ ಡಿ.ಕೆ. ರವಿ ಅವರ ಮಾವ ಹನುಮಂತರಾಯಪ್ಪ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತವರ ಸೋದರ, ಸಂಸದ ಡಿ.ಕೆ. ಸುರೇಶ್ ದಿಡೀರ್ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

Add Asianetnews Kannada as a Preferred SourcegooglePreferred

ರಾಜರಾಜೇಶ್ವರಿನಗರ ವಿಧಾನಕ್ಷೇತ್ರದ ವ್ಯಾಪ್ತಿಗೆ ಬರುವ ಮಲ್ಲತ್ತಹಳ್ಳಿಯಲ್ಲಿರುವ ಜೆಡಿಎಸ್ ಮುಖಂಡರಾಗಿರುವ ಹನುಮಂತರಾಯಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದರು. 

ಮಾತುಕತೆ ಫೈನಲ್, RR ನಗರದಲ್ಲಿ 'ಕೈ' ಮಾಸ್ಟರ್ ಸ್ಟ್ರೋಕ್... ಡಿಕೆ ರವಿ ಪತ್ನಿ ಕಣಕ್ಕೆ!

.ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್, ಹನುಮಂತರಾಯಪ್ಪ ಅವರ ಪುತ್ರಿ ಕುಸುಮಾ ರವಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬ ಒತ್ತಾಯ ಬಂದಿದೆ. ಅದಕ್ಕೆ ಪಕ್ಷದ ಕಚೇರಿಗೆ ಬಂದು ಸದಸ್ಯತ್ವ ಪಡೆಯಬೇಕು ಅಂತ ಹೇಳಿದೆವು. ಹೀಗಾಗಿ ಕುಸುಮಾ ಅವರು ಭಾನುವಾರ ಬೆಳಗ್ಗೆ 11 ಗಂಟೆಗೆ ಬಂದು ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು. 

ಪಕ್ಷದ ಅಭ್ಯರ್ಥಿ ಯಾರಾಗಬೇಕು ಎಂಬುದರ ಬಗ್ಗೆ ತೀರ್ಮಾನಿಸಲು ಪಕ್ಷದ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರ ನೇತೃತ್ವದ ಸಮಿತಿ ಇದೆ. ಆ ಸಮಿತಿ ತೀರ್ಮಾನ ಮಾಡಲಿದೆ. ಇನ್ನು ಪಕ್ಷದಿಂದ ಕಣಕ್ಕಿಳಿಯುವ ಅಚ್ಚರಿಯ ಅಭ್ಯರ್ಥಿ ಯಾರು ಎಂಬುದನ್ನು ನಾಳೆ (ಭಾನುವಾರ) ಕಾದು ನೋಡಿ ಎಂದು ಹೇಳುವ ಮೂಲಕ ಮತ್ತೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದರು.

ಎಲೆಕ್ಷನ್‌ಗೆ ನಿಲ್ತಿರೋ ಡಿಕೆ ರವಿ ಪತ್ನಿ ಕುಸುಮಾ ಈಗ ಹೇಗಾಗಿದ್ದಾರೆ ನೋಡಿ

ಡಿ.ಕೆ. ಸುರೇಶ್ ಮಾತನಾಡಿ, ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ 7 ಜನ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. ಪಕ್ಷಕ್ಕೆ ಮರಳಲು ಬಯಸುವವರನ್ನು ಸೇರಿಸಿಕೊಳ್ಳಲು ನಿರ್ಧರಿಸಿದ್ದೇವೆ. ಅದರಲ್ಲಿ ನಾಲ್ವರು ಪ್ರಮುಖ ನಾಯಕರಿದ್ದಾರೆ. ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಹಿರಿಯ ನಾಯಕರು ತೀರ್ಮಾನಿಸಲಿದ್ದಾರೆ. ಮುನಿರತ್ನ ಅವರಿಗೂ ನನಗೂ ರಾಜಕೀಯವಾಗಿ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಕುಸುಮಾ ಅವರನ್ನು ಭಾನುವಾರ ಕಾಂಗ್ರೆಸ್‌ಗೆ ಸೇರಿಸಿಕೊಂಡು ಅವರನ್ನೇ ಆರ್‌.ಆರ್.ನಗರ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.