ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ 2018ರ ಚುನಾವಣೆ ಅಭ್ಯರ್ಥಿಗಳಿಗೆ ಪತ್ರ ಬರೆದು, ‘ತಾವು ತಕ್ಷಣ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳ ವ್ಯಾಪ್ತಿಯ ಹಾತ್ ಸೆ ಹಾತ್ ಜೋಡೋ ಅಭಿಯಾನದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾನುವಾರದ ಒಳಗಾಗಿ ವರದಿ ನೀಡಬೇಕು ಎಂದು ಹೇಳಿದ ಡಿ.ಕೆ. ಶಿವಕುಮಾರ್
ಬೆಂಗಳೂರು(ಡಿ.18): ಕಾಂಗ್ರೆಸ್ ಪಕ್ಷವು ಡಿ.23 ರಂದು ‘ಹಾತ್ ಸೆ ಹಾತ್ ಜೋಡೋ’ (ಕೈ ಜತೆ ಕೈಜೋಡಿಸಿ) ಅಭಿಯಾನ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚಿಸಲು ದೆಹಲಿಯಲ್ಲಿ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ಗಳಿಂದ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
‘ಹಾತ್ ಸೆ ಹಾತ್ ಜೋಡೋ ಅಭಿಯಾನ’ ಸಿದ್ಧತೆ ಹಾಗೂ ಪಕ್ಷ ಸಂಘಟನೆ ಕುರಿತು ಚರ್ಚೆ ಮಾಡಲು ಡಿ.23 ರಂದು ಮಧ್ಯಾಹ್ನ 2.30 ಗಂಟೆಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು, ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಭಾಗವಹಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸುತ್ತೋಲೆ ಹೊರಡಿಸಿದ್ದಾರೆ.
ಉಗ್ರ ಪರ ಹೇಳಿಕೆ: ಯುವ ಸಮೂಹವನ್ನು ದೂರ ಮಾಡಿಕೊಳ್ಳುತ್ತಾ ಕಾಂಗ್ರೆಸ್?
ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ 2018ರ ಚುನಾವಣೆ ಅಭ್ಯರ್ಥಿಗಳಿಗೆ ಪತ್ರ ಬರೆದಿರುವ ಶಿವಕುಮಾರ್, ‘ತಾವು ತಕ್ಷಣ ತಮ್ಮ ಜಿಲ್ಲೆ ಹಾಗೂ ಕ್ಷೇತ್ರಗಳ ವ್ಯಾಪ್ತಿಯ ಹಾತ್ ಸೆ ಹಾತ್ ಜೋಡೋ ಅಭಿಯಾನದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾನುವಾರದ ಒಳಗಾಗಿ ವರದಿ ನೀಡಬೇಕು. ಜತೆಗೆ ಪಕ್ಷ ಸಂಘಟನೆ ಬಲಗೊಳಿಸಲು ಕೆಪಿಸಿಸಿ ವತಿಯಿಂದ ಹಲವಾರು ಕಾರ್ಯಕ್ರಮಗಳ್ನು ಹಮ್ಮಿಕೊಳ್ಳಲು ಸೂಚಿಸಲಾಗಿತ್ತು. ಈ ಪೈಕಿ ಈವರೆಗೆ ತಾವು ನಿಮ್ಮ ಜಿಲ್ಲೆ ಹಾಗೂ ಕ್ಷೇತ್ರದಲ್ಲಿ ಕೈಗೊಂಡಿರುವ ಕಾರ್ಯಕ್ರಮ, ಪ್ರತಿಭಟನೆ, ಸಮಾವೇಶಗಳ ವಿವರಗಳನ್ನು ಸಲ್ಲಿಸಬೇಕು’ ಎಂದು ಹೇಳಿದ್ದಾರೆ.
