ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಾಮಗಾರಿಗಳ ಬಿಲ್ ಪಾವತಿಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಗುತ್ತಿಗೆದಾರರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ.
ಬೆಂಗಳೂರು (ಮಾ.07): ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಕಾಮಗಾರಿಗಳ ಬಿಲ್ ಪಾವತಿಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಗುತ್ತಿಗೆದಾರರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ. ಬಾಕಿ ಬಿಲ್ ಬಿಡುಗಡೆಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡಿದ ಗುತ್ತಿಗೆದಾರರು, ಜಿಬಿಎ ವ್ಯಾಪ್ತಿಯಲ್ಲಿ ಹೆಚ್ಚಿನ ಬಿಲ್ ಬಾಕಿ ಇಲ್ಲ. ಪಾವತಿಯಲ್ಲೂ ಯಾವುದೇ ಸಮಸ್ಯೆ ಉಂಟಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿಯವರೊಂದಿಗೆ ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿ ಜೊತೆ ಸಭೆ ಮಾಡಿಸುತ್ತೇನೆ. ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ. ಗುತ್ತಿಗೆದಾರರು ತಮ್ಮ ಬದುಕಿಗೆ ಮಾತ್ರವಲ್ಲ ರಾಜ್ಯದ ಬದುಕಿಗೆ ಸಹಾಯ ಮಾಡುತ್ತಿದ್ದೀರಿ. ನಮ್ಮ ಸರ್ಕಾರ ತಂದಿದ್ದೀರಿ ಎಂಬ ಅರಿವು ನಮಗಿದೆ. ನಿಮಗೆ ಹಣ ಪಾವತಿ ಮಾಡಬಾರದು ಎಂಬುದು ನಮ್ಮ ಉದ್ದೇಶವಲ್ಲ ಎಂದು ಹೇಳಿದರು.
ಮುಂಚೆ ಎಚ್ಚರಿಸಿದ್ದೆ
ನನ್ನ ಇಲಾಖೆಯಲ್ಲಿ 13,000 ಕೋಟಿ ರು., ಸಣ್ಣ ನೀರಾವರಿ ಇಲಾಖೆಯಲ್ಲಿ 3,000 ಕೋಟಿ ರು. ಸೇರಿದಂತೆ ಸುಮಾರು 37,000 ಕೋಟಿ ರು. ಬಿಲ್ ಬಾಕಿ ಇದೆ. ಇಲಾಖೆಗಳಲ್ಲಿ ಹಣವಿಲ್ಲದೆ ಯಾವುದೇ ಕಾಮಗಾರಿ ತಗೆದುಕೊಳ್ಳಬೇಡಿ ಎಂದು ಚುನಾವಣೆಗೆ 6 ತಿಂಗಳು ಮುಂಚೆ ಎಚ್ಚರಿಸಿದ್ದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟದ್ದು. ನೀವು ಕೆಲಸ ತೆಗೆದುಕೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ. ಇದಕ್ಕೆ ಒಂದು ರೂಪ ನೀಡಬೇಕಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು
ಬಾಕಿ ಬಿಲ್ ಪಾವತಿಗೆ ಸುಮಾರು 50,000 ಕೋಟಿ ರು.ಯಷ್ಟು ಬಾಂಡ್ ಅಥವಾ ಇತರೆ ಮಾರ್ಗ ಹುಡುಕಬೇಕು. ಆಗ ಮಾತ್ರ ಈ ಸಮಸ್ಯೆ ಬಗೆಹರಿಯಲಿದೆ. ನೀವು ನಮ್ಮ ಬಳಿ ಬಂದು ಚರ್ಚೆ ಮಾಡಿ, ಯಾವ ರೀತಿ ಹಣ ಹೊಂದಿಸಿ ಸಮಸ್ಯೆ ಬಗೆಹರಿಸಬೇಕು ಎಂಬುದನ್ನು ನೋಡೋಣ ಎಂದು ಗುತ್ತಿಗೆದಾರರಿಗೆ ಡಿ.ಕೆ. ಶಿವಕುಮಾರ್ ಹೇಳಿದರು. ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಬೋಸರಾಜು ಇದ್ದರು.

