ಕೊರೋನಾ ವಿಚಾರವಾಗಿ ರಾಜ್ಯಪಾಲರ ನೇತೃತ್ವದಲ್ಲಿ ನಡೆಯಲಿರುವ ಸರ್ವಪಕ್ಷಗಳ ಸಭೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಏ.19): ಕೊರೋನಾ ವಿಚಾರವಾಗಿ ಸರ್ವಪಕ್ಷ ಸಭೆ ಬಗ್ಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಕೆಪಿಸಿಸಿ ಕಚೇರಿಯಲ್ಲಿ ಇಂದು (ಸೋಮವಾರ) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಕೊರೋನಾ ಪರಿಸ್ಥಿತಿ ನಿರ್ವಹಣೆ ಸಂಬಂಧ ರಾಜ್ಯ ಸರ್ಕಾರ ಇವತ್ತು ಸಭೆ ನಡೆಸಿದ್ದು, ರಾಜ್ಯಪಾಲರು ನಾಳೆ (ಏ.21) ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಗೆ ರಾಜ್ಯಪಾಲರ ಕಚೇರಿಯಿಂದ ಆಹ್ವಾನ ಬಂದಿದ್ದು, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬಂದಂತೆ ಕಾಣುತ್ತಿದೆ ಎಂದರು.

ಕರ್ನಾಟಕದಲ್ಲಿ ಅರ್ಧ ಬಂದ್..ಬಂದ್..: ಹರಿದಾಡುತ್ತಿರುವ Fake ಮಾರ್ಗಸೂಚಿ

ಇದೇ ಮೊದಲ ಬಾರಿಗೆ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿದ್ದು, ಮುಂದಿನ ದಿನಗಳಲ್ಲಿ ರಾಜ್ಯಪಾಲರ ಆಳ್ವಿಕೆ ಅಧಿಕೃತವಾಗಿ ಜಾರಿಯಾಗುವ ಲಕ್ಷಣ ಗೋಚರಿಸುತ್ತಿದೆ. ನಾಳೆ ನಾವು ಸಭೆಯಲ್ಲಿ ಭಾಗವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕೊರೋನಾ ವಾಸ್ತವಾಂಶದ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದು, ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸುತ್ತೇವೆ. ಕೊರೋನಾ ಲಸಿಕೆ ಪೂರೈಕೆ ಗುತ್ತಿಗೆಯನ್ನು ಕೇವಲ ಎರಡು ಕಂಪನಿಗಳಿಗೆ ಯಾಕೆ ನೀಡಲಾಗಿದೆ? ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು. ಎಲ್ಲ ಅಭಿವೃದ್ಧಿ ಕೆಲಸ ನಿಲ್ಲಿಸಿ. ಈ ವಿಚಾರದ ಬಗ್ಗೆ ಗಮನ ಹರಿಸಿ. ಎಲ್ಲರಿಗೂ ಆರೋಗ್ಯ ಸೇವೆ ಸಿಗುವಂತೆ ಮಾಡಬೇಕು. ಆದರೆ ಈವರೆಗೂ ಯಾವುದೇ ಸಿದ್ಧತೆ ಆಗಿಲ್ಲ. ಈ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ನಾವು ಕಾಂಗ್ರೆಸ್ ಕಚೇರಿಯಲ್ಲಿ ವೈದ್ಯರ ಘಟಕದ ಜತೆ ಚರ್ಚೆ ಮಾಡಿ ಒಂದು ಹೆಲ್ಪ್ ಲೈನ್ ಆರಂಭಿಸಲು ತೀರ್ಮಾನಿಸಿದ್ದೇವೆ. ಅಲ್ಲಿ ಸೋಂಕಿತರಿಗೆ ಮಾರ್ಗದರ್ಶನ ನೀಡಿ ನೆರವಾಗುತ್ತೇವೆ ಎಂದು ತಿಳಿಸಿದರು.

’70 ವರ್ಷ ಕಾಂಗ್ರೆಸ್ ಏನು ಮಾಡಿದೆ ಅಂತಾ ಸುಧಾಕರ್ ಕೇಳಿದ್ದಾರೆ. ಅವರು ಕೇವಲ 1 ವರ್ಷದಿಂದ ಮಾತ್ರ ಬಿಜೆಪಿಯಲ್ಲಿದ್ದಾರೆ. ಉಳಿದ ಅವಧಿಯಲ್ಲಾ ಕಾಂಗ್ರೆಸ್ ನಲ್ಲೇ ಇದ್ದರಲ್ಲ. ಅವರನ್ನು ಬೆಳೆಸಿ, ಶಾಸಕರನ್ನಾಗಿ ಮಾಡಿದ್ದು ಕಾಂಗ್ರೆಸ್ ಎಂದು ತಿರುಗೇಟು ನೀಡಿದರು.