ಬೆಂಗಳೂರು ಗ್ರಾ. ಸಂಸದನ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ, ಎಚ್‌ಡಿಕೆ ಪುತ್ರನ ವಿರುದ್ಧ ಡಿಕೆಶಿ ಸೋದರನ ಭರ್ಜರಿ ಫೈಟ್‌?. ಡಿ.ಕೆ.ಸುರೇಶ್‌ ಅವರನ್ನು ರಾಜ್ಯ ರಾಜಕಾರಣಕ್ಕೆ ತರಬೇಕೋ, ಬೇಡವೋ ಎಂಬ ಬಗ್ಗೆ ಈ ಹಿಂದೆ ಚರ್ಚೆ ನಡೆದಿತ್ತು. 

ಬೆಂಗಳೂರು(ಮಾ.14): ಕಾಂಗ್ರೆಸ್‌ ಸಂಸದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ಅವರನ್ನು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವ ಚಿಂತನೆ ಹಠಾತ್‌ ಆಗಿ ಕಾಂಗ್ರೆಸ್‌ನಲ್ಲಿ ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ ಇಳಿದಿರುವ ರಾಮನಗರ ಕ್ಷೇತ್ರದಲ್ಲಿ ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್‌ ಅವರನ್ನು ಕಣಕ್ಕಿಳಿಸುವ ಕುರಿತು ಚಿಂತನೆ ಹುಟ್ಟಿಕೊಂಡಿದೆ ಎನ್ನಲಾಗಿದೆ.

ಮಾಗಡಿಗೆ ಕುಮಾರಸ್ವಾಮಿ ಕೊಡುಗೆ ಏನು: ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸುರೇಶ್‌ ಅವರನ್ನು ರಾಜ್ಯ ರಾಜಕಾರಣಕ್ಕೆ ತರಬೇಕೋ ಅಥವಾ ಬೇಡವೋ ಎಂಬ ಚರ್ಚೆ ನಡೆದಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷವನ್ನು ಚುನಾವಣೆಗೆ ಮುನ್ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸುರೇಶ್‌ ರಾಜ್ಯ ರಾಜಕಾರಣ ರಂಗ ಪ್ರವೇಶ ಬೇಡ ಎಂದೂ ತೀರ್ಮಾನಿಸಲಾಗಿತ್ತು. ಆದರೆ, ಹಠಾತ್‌ ಬೆಳವಣಿಗೆಯೊಂದರಲ್ಲಿ ಸುರೇಶ್‌ ಅವರನ್ನು ರಾಮನಗರ ಕ್ಷೇತ್ರದಿಂದ ಕಣಕ್ಕೆ ಇಳಿಸುವ ಕುರಿತು ಪಕ್ಷದಲ್ಲಿ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಹೀಗೆ ಹಠಾತ್‌ ಆಗಿ ಸುರೇಶ್‌ ಅವರನ್ನು ರಾಜ್ಯ ರಾಜಕಾರಣಕ್ಕೆ ಅದರಲ್ಲೂ ಕುಮಾರಸ್ವಾಮಿ ಅವರ ಪುತ್ರರಾದ ನಿಖಿಲ್‌ ಎದುರಾಳಿಯಾಗಿ ಕಣಕ್ಕೆ ಇಳಿಸುವ ಚಿಂತನೆಗೆ ಮುಂದಾಗಿರುವುದಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಒಂದೊಂದು ಕ್ಷೇತ್ರದ ಗೆಲವೂ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಸುರೇಶ್‌ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.