ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. 

ಬೆಂಗಳೂರು (ಮೇ.06): ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ನಿರ್ವಹಣೆಗೆ ಹಣಕಾಸು ಕೊರತೆ ಇಲ್ಲ. ಪಂಚಾಯತ್ ರಾಜ್ ಇಲಾಖೆಗೆ ಈ ಸಂಬಂಧ ಈಗಾಗಲೇ 60 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್‌ಪೋರ್ಸ್‌ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು. ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್‌ವೆಲ್‌ ಕೊರೆದು ದುಂದುವೆಚ್ಚ ಮಾಡಬಾರದು ಎಂದು ಸೂಚನೆ ನೀಡಿದರು.

ಪಾಪದ ಕೆಲಸ ಮಾಡಿ ಒಳ್ಳೆಯದನ್ನು ಕೇಳಿದರೆ ಆಗೋಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇ.55ರಷ್ಟು ಹೆಚ್ಚು ಮಾನ್ಸೂನ್ ಪೂರ್ವ ಮಳೆಯಾಗಿದೆ. ಯಾವುದೇ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿಲ್ಲ. 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಎಲ್ಲಾ ಜಲಾಶಯಗಳಲ್ಲಿ ಶೇ.50 ರಿಂದ 60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ. ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂಬುದಾಗಿ ಗುರುತಿಸಲಾಗಿದೆ ಎಂದು ಹೇಳಿದರು. 

ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ ಮೂರು ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದರು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌, ಇಂಧನ ಸಚಿವ ಕೆ.ಜೆ.ಜಾರ್ಜ್‌ ಸೇರಿದಂತೆ ಇತರರು ಭಾಗವಹಿಸಿದ್ದರು.

ಪಾಕಿಸ್ತಾನದ ಪ್ರಜೆಗಳ ಗಡಿಪಾರಿಗೆ ಅಗತ್ಯ ಕ್ರಮ: ಪರಮೇಶ್ವರ್‌ ಸ್ಪಷ್ಟನೆ

ಸಿಎಂ ಹೇಳಿದ್ದೇನು?
- ಪ್ರತಿ ವರ್ಷ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಶಾಶ್ವತ ಪರಿಹಾರ ರೂಪಿಸಬೇಕು
- ಅಗತ್ಯ ಬಿದ್ದರಷ್ಟೇ ಬೋರ್‌ವೆಲ್‌ ಕೊರೆಯಬೇಕು. ಅನಗತ್ಯ ಬೋರ್‌ ಕೊರೆದು ದುಂದು ವೆಚ್ಚ ಮಾಡಬಾರದು
- ವಾಡಿಕೆಗಿಂತ 55% ಹೆಚ್ಚು ಮುಂಗಾರು ಪೂರ್ವ ಮಳೆಯಾಗಿದೆ. ಯಾವುದೇ ಜಿಲ್ಲೆಯಲ್ಲೂ ಮಳೆ ಕಮ್ಮಿ ಆಗಿಲ್ಲ
- ಮುಂಗಾರು ವಿಳಂಬವಾದರೆ ಮಾತ್ರ ರಾಜ್ಯದ 6319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು
- 551 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಇದೆ. 123 ಹಳ್ಳಿಗೆ ಟ್ಯಾಂಕರಲ್ಲಿ ನೀರು ಪೂರೈಕೆ ಆಗ್ತಿದೆ: ಸಿಎಂ