ರಾಜಕಾರಣದ ಟರ್ನ್ ಪಡೆದುಕೊಂಡ ಡ್ರಗ್ಸ್ ವಿಚಾರ/ ಕುಮಾರಸ್ವಾಮಿ ಮತ್ತು ಸುಧಾಕರ್ ನಡುವೆ ಚಕಮಕಿ/ ದೋಸ್ತಿ ಕೆಡವಲು ಡ್ರಗ್ಸ್ ಹಣ/ ಸುಧಾಕರ್ ಮೇಲೆ ಆರೋಪ ಮಾಡಿದ್ದ ಕುಮಾರಸ್ವಾಮಿ
ಬೆಂಗಳೂರು(ಆ. 31)
ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ
ತನಗಾದ ಆಗೇನು ಅವರಿಗಾದ ಚೇಗೆಯೇನು
ತನುವಿನ ಕೋಪ ತನ್ನ ಹಿರಿಯತನದ ಕೇಡು
ಮನದ ಕೋಪ ತನ್ನರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೇ
ನೆರೆಮನೆಯ ಸುಡದೋ
ಕೂಡಲಸಂಗಮದೇವ
ವಚನದ ಮೂಲಕ ವೈದ್ಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಜಿ ಸಿಎಂ ಕುಮಾರಸ್ವಾಮಿಗೆ ಠಕ್ಕರ್ ನೀಡಿದ್ದಾರೆ. ಸರ್ಕಾರದ ವಿರುದ್ಧ ತಮ್ಮ ಆರೋಪಗಳಿಗೆ ಪುರಾವೆ ನೀಡಿ. ಸರ್ಕಾರದಲ್ಲಿ ಸಚಿವನಾಗಿ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡಿದರೆ ಅದಕ್ಕೆ ಪುರಾವೆ ಕೇಳುವುದು ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಹೇಗಾದೀತು? ಎಂದು ಸವಾಲು ಹಾಕಿದ್ದಾರೆ.
ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? ಪಕ್ಕದಲ್ಲಿ ಧರಮ್ ಸಿಂಗ್ ಅವರನ್ನು ಇಟ್ಟುಕೊಂಡು, ಕೆಲವು ಸ್ನೇಹಿತರೊಂದಿಗೆ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಹಿನ್ನಲೆ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಒಮ್ಮೆ ಕೇಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.
ತಮ್ಮ ಆರೋಪಗಳ ಹಿನ್ನಲೆ ಆಧಾರಗಳ ಬಗ್ಗೆ ಕೇಳಿದ್ದೇನೆ. ನಾನು ಮಾಜಿ ಮುಖ್ಯಮಂತ್ರಿ ಮಾಜಿ ಪ್ರಧಾನಮಂತ್ರಿಯ ಮಗನಲ್ಲ, ಒಬ್ಬ ಸಾಮಾನ್ಯ ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ. ಎಲ್ಲರ ಹಿನ್ನಲೆಗಳನ್ನೂ ರಾಜ್ಯದ ಜನರು ಗ್ರಹಿಸಿದ್ದಾರೆ ಎಂದಿದ್ದಾರೆ.
ಸ್ಯಾಂಡಲ್ ವುಡ್ ದಾರಿ ತಪ್ಪಿದ್ದು ಎಲ್ಲಿ?
ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೇನಿ ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ಸವಾಲು ಹಾಕಿದ್ದಾರೆ.
ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ? ಎಂದು ಕಾಲೆಳೆದಿದ್ದಾರೆ.
ನಾನು ಕೇಳಿದ್ದು ಡ್ರಗ್ ಮಾಫಿಯಾ ಆರೋಪದ ಹಿನ್ನಲೆಗಳ ಬಗ್ಗೆ, ಮಾಜಿ ಮುಖ್ಯಮಂತ್ರಿಗಳಾಗಿ, ಡ್ರಗ್ ಮಾಫಿಯಾ ಹಣದಿಂದ ಸರ್ಕಾರ ಬಂದಿದೆ ಎಂದು ಚುನಾಯಿತ ಸರ್ಕಾರದ ಮೇಲಿನ ಬೇಜಾವಾಬ್ದಾರಿ ಹೇಳಿಕೆಯ ಹಿನ್ನಲೆ ಬಗ್ಗೆ! ಬಿಜೆಪಿ ಅನೈತಿಕ ಕೆಲಸವನ್ನು ಎಂದೂ ಮಾಡಿಲ್ಲ, ಮಾಡುವುದಿಲ್ಲ. ಅದಕ್ಕೆ 2ಸ್ಥಾನದಿಂದ 303 ಸ್ಥಾನಗಳನ್ನು ಜನ ಆಶೀರ್ವದಿಸಿದ್ದಾರೆ ಎಂದು ಕುಮಾರಸ್ವಾಮಿ ಅವರನ್ನು ಕಟುವಾಗಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ.
ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂದು ಕುಮಾರಸ್ವಾಮಿ ಟ್ವಿಟ್ ಮಾಡಿದ್ದರು.
