ಕಾಂಗ್ರೆಸ್ ನಾಯಕರಿಗೆ ರೇವಣ್ಣ ಮನವಿ
ಕಾಂಗ್ರೆಸ್ ನಾಯಕರಿಗೆ ರೇವಣ್ಣ ರಾಜ್ಯ ಸಚಿವ ಸಂಪುಟದ ಬಗ್ಗೆ ಮನವಿ ಮಾಡಿಕೊಂಡಿದ್ದಾರೆ. ಖಾಲಿ ಇರುವ 8 ಸಚಿವ ಸ್ಥಾನಗಳನ್ನು ಶೀಘ್ರ ಭರ್ತಿ ಮಾಡಬೇಕು ಎಂದು ಹೇಳಿದ್ದಾರೆ.
ನವದೆಹಲಿ : ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ 8 ಸ್ಥಾನಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ರಾಜ್ಯ ಕಾಂಗ್ರೆಸ್ ನಾಯಕರನ್ನು ಆಗ್ರಹಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಇಷ್ಟೊಂದು ಸ್ಥಾನ ಖಾಲಿ ಇಟ್ಟಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ವಿವಿಧ ನೆಪಗಳನ್ನು ಮುಂದೊಡ್ಡಿ ಸಂಪುಟ ವಿಸ್ತರಣೆಯನ್ನು ಸತತವಾಗಿ ಮುಂದೂಡಿಕೊಂಡು ಬರಲಾಗಿದೆ. ಆದರೆ ಈಗ ಸಂಪುಟ ವಿಸ್ತರಣೆಗೆ ಕಾಲ ಪಕ್ವವಾಗಿದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಗಬೇಕು ಎಂದು ರೇವಣ್ಣ ಅಭಿಪ್ರಾಯಪಟ್ಟರು.
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ಅಭ್ಯರ್ಥಿಗಳು ಸಾಮಾನ್ಯ ವರ್ಗದಿಂದ ಗೆಜೆಟೆಡ್ ಹುದ್ದೆ ಪಡೆಯುವುದನ್ನು ತಪ್ಪಿಸಿ ಕೆಪಿಎಸ್ಸಿ ಹೊರಡಿಸಿರುವ ಸುತ್ತೋಲೆಯನ್ನು ತಕ್ಷಣವೇ ರಾಜ್ಯ ಸರ್ಕಾರ ಹಿಂತೆಗೆದುಕೊಳ್ಳಬೇಕು ಎಂದು ರೇವಣ್ಣ ಒತ್ತಾಯಿಸಿದರು.