ಸಿದ್ದರಾಮಯ್ಯ ಅವರಿಗೆ ಎಲ್ಲ ಸತ್ಯವೂ ಗೊತ್ತಿದೆ. ಆದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ 

ಬೆಂಗಳೂರು(ನ.26): ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಎಲ್ಲ ಸತ್ಯವೂ ಗೊತ್ತಿದೆ. ಆದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿಕೆಶಿ ವಿರುದ್ಧ ತನಿಖೆಗೆ ಸ್ಪೀಕರ್‌ ಅನುಮತಿ ಬೇಕಿರಲಿಲ್ಲ: ಕಾಗೇರಿ

ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು. ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇದರಲ್ಲಿ ನಿಯಮಗಳ ಉಲ್ಲಂಘನೆಯಾಗಿರುವ ಪ್ರಶ್ನೆ ಎಲ್ಲಿಂದ ಬಂತು? ಎಂದು ಹೇಳಿದರು.

ಹೇಳಿದ್ದನ್ನೇ ಹೇಳಿ, ಸುಳ್ಳನ್ನು ಸತ್ಯ ಮಾಡಲು ಸಿದ್ದರಾಮಯ್ಯ ಮತ್ತವರ ತಂಡದವರು ಮುಂದಾಗಿದ್ದಾರೆ. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿರುವುದಕ್ಕೆ ಬದ್ಧನಾಗುತ್ತೇನೆ. ಅಡ್ವೋಕೇಟ್‌ ಜನರಲ್‌ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಲಾಗಿತ್ತು. ಇನ್ನಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು.