ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮನ್ನು ಗೆಲ್ಲಿಸಿರುವ ಬಾದಾಮಿ ಕ್ಷೇತ್ರಕ್ಕೆ ಮತ್ತೆ ಹೋಗುವುದಿಲ್ಲ ಎನ್ನುವುದು ಸರಿಯಲ್ಲ. ಇದು ಕಷ್ಟಕಾಲದಲ್ಲಿ ಗೆಲ್ಲಿಸಿದ ಜನರಿಗೆ ಮಾಡುವ ನಂಬಿಕೆ ದ್ರೋಹ, ವಿಶ್ವಾಸ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.  

ವಿಧಾನಸಭೆ (ಫೆ.23): ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮನ್ನು ಗೆಲ್ಲಿಸಿರುವ ಬಾದಾಮಿ ಕ್ಷೇತ್ರಕ್ಕೆ ಮತ್ತೆ ಹೋಗುವುದಿಲ್ಲ ಎನ್ನುವುದು ಸರಿಯಲ್ಲ. ಇದು ಕಷ್ಟಕಾಲದಲ್ಲಿ ಗೆಲ್ಲಿಸಿದ ಜನರಿಗೆ ಮಾಡುವ ನಂಬಿಕೆ ದ್ರೋಹ, ವಿಶ್ವಾಸ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಅವರಿಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಕಿವಿ ಮಾತು ಹೇಳಿದರು. 

ಬಾದಾಮಿಯಲ್ಲಿ ನಿಮ್ಮನ್ನು ಗೆಲ್ಲಿಸಿದ ಜನರ ಪರವಾಗಿ ಐದು ವರ್ಷ ಕೆಲಸ ಮಾಡಿದ್ದೀರಿ. ಇದೀಗ ಕ್ಷೇತ್ರ ತೊರೆಯುವ ಮಾತನ್ನಾಡುತ್ತಿದ್ದೀರಿ. ಇದು ಕ್ಷೇತ್ರದಲ್ಲಿ ನಿಮಗೆ ಗೆಲ್ಲುವ ವಿಶ್ವಾಸವಿಲ್ಲ ಎಂಬುದನ್ನು ತೋರಿಸುತ್ತದೆ. ತವರು ಜಿಲ್ಲೆಯಲ್ಲಿ ಸೋಲುತ್ತಿರುವಾಗ ನಿಮ್ಮನ್ನು ಗೆಲ್ಲಿಸಿದ ಆ ಭಾಗದ ಜನರಿಗೆ ನಂಬಿಕೆ ದ್ರೋಹ, ವಿಶ್ವಾಸದ್ರೋಹ ಮಾಡುತ್ತಿದ್ದೀರಿ ಎಂದು ಹೇಳಿದರು. ಗೆದ್ದು ಬಂದ ಕ್ಷೇತ್ರಕ್ಕೆ ವಾಪಸು ಹೋಗುವುದಿಲ್ಲ ಎಂದರೆ ಏನರ್ಥ? ಏನೇ ಆಗಲಿ ಅದೇ ಕ್ಷೇತ್ರದಲ್ಲಿ ನಿಂತು ಜನರ ಋುಣ ತೀರಿಸುವ ಪ್ರಯತ್ನ ಮಾಡಬೇಕು. 

ಅಧಿವೇಶನದಲ್ಲಿ ಬಿಎಸ್‌ವೈ ವಿದಾಯ ಭಾಷಣ: ವಿಧಾನಸಭೆಯಲ್ಲಿ ಮಾಜಿ ಸಿಎಂ ಭಾವುಕ ನುಡಿ

ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸಲು ಹೋಗಬಾರದು. ಬಾದಾಮಿ ಜನರ ಋುಣ ಅವರ ಮೇಲಿದೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಯು.ಟಿ. ಖಾದರ್‌, ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ. ಬಾದಾಮಿ ಬೆಂಗಳೂರಿನಿಂದ ದೂರ ಇರುವುದರಿಂದ ನಿರಂತರವಾಗಿ ಓಡಾಡಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕಾಗಿ ಅವರು ಕ್ಷೇತ್ರ ಬದಲಿಸುತ್ತಿದ್ದಾರೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಬಾದಾಮಿಯನ್ನು ತನ್ನದೇ ಕ್ಷೇತ್ರ ಎಂದು ತಿಳಿದು ಅಭಿವೃದ್ಧಿ ಮಾಡುತ್ತೇನೆ ಎಂದಿದ್ದಾರೆ ಎಂದು ಸಮರ್ಥಿಸಿಕೊಂಡರು.

7ನೇ ವೇತನ ಆಯೋಗ ಜಾರಿಗೆ ಬಿಎಸ್‌ವೈ ಆಗ್ರಹ: ರಾಜ್ಯದಲ್ಲಿ ಕೂಡಲೇ 7ನೇ ವೇತನ ಆಯೋಗ ವರದಿ ಜಾರಿಗೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ನೌಕರರು ಬೀದಿಗಿಳಿದು ಹೋರಾಡುವ ಪರಿಸ್ಥಿತಿಯನ್ನು ನಿರ್ಮಾಣ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಬಜೆಟ್‌ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಂಡಿಸಿರುವ ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಸ್ಪಷ್ಟಪಡಿಸಿಲ್ಲ. ಹಲವು ವರ್ಷಗಳಿಂದ ಸರ್ಕಾರಿ ನೌಕರರು ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಜೆಟ್‌ ಚರ್ಚೆಗೆ ಉತ್ತರಿಸುವಾಗ 7ನೇ ವೇತನ ಆಯೋಗ ಜಾರಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಬೇಕು ಎಂದು ಆಗ್ರಹಿಸಿದರು.

Chikkamagaluru: ಜೆ.ಪಿ.ನಡ್ಡಾ ಬೆನ್ನಲ್ಲೇ ಶೃಂಗೇರಿ ಮಠಕ್ಕೆ ಎಚ್.​ಡಿ.ಕುಮಾರಸ್ವಾಮಿ ಭೇಟಿ

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೆಡಿಎಸ್‌ ಸದಸ್ಯ ಬಂಡೆಪ್ಪ ಕಾಶೆಂಪೂರ್‌, ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಬಜೆಟ್‌ನಲಿ ಯಾವುದೇ ಪ್ರಸ್ತಾಪವಿಲ್ಲ. ಬೇರೆ ರಾಜ್ಯಗಳಲ್ಲಿ ಈಗಾಗಲೇ 7ನೇ ವೇತನ ಆಯೋಗ ಜಾರಿ ಮಾಡಿ ಅನುಕೂಲ ಮಾಡಿಕೊಡಲಾಗಿದೆ. ಆದರೆ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸದೆ ಸರ್ಕಾರಿ ನೌಕರರಿಗೆ ಸರ್ಕಾರ ಅನ್ಯಾಯ ಮಾಡಿದೆ. ಹೀಗಾಗಿ ಬಜೆಟ್‌ ಮೇಲಿನ ಚರ್ಚೆಗೆ ಉತ್ತರಿಸುವಾಗ ವೇತನ ಆಯೋಗ ಜಾರಿ ಬಗ್ಗೆ ಸ್ಪಷ್ಟಪಡಿಸಬೇಕು ಎಂದರು.