ಮಾತು ತಪ್ಪಿದ ಸರ್ಕಾರ: ಯಡಿಯೂರಪ್ಪ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ
ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ| ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ ಹಚ್ಡಿಕೆ|
ಬೆಂಗಳೂರು(ಅ.10): ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ರಾಜ್ಯ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಎಸ್ವೈ ಸರ್ಕಾಅರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ, ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದ ಮುಖ್ಯಮಂತ್ರಿಗಳು ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು, ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ ಎಂದು ರಾಜ್ಯ ಸರ್ಕಾರದ ನಡೆಗೆ ಕಿಡಿಕಾರಿದ್ದಾರೆ.
ಡಿಕೆಶಿಯಿಂದ ಜಾತಿ ರಾಜಕಾರಣ: ಕುಮಾರಸ್ವಾಮಿ ವಾಗ್ದಾಳಿ
ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ,ಆತ್ಮವಿಶ್ವಾಸ ಮೂಡಿಸುತ್ತಿವೆ ಎಂದು ಹೇಳಿದ್ದಾರೆ.
ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು?, ಲಾಕ್ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.