ಪಕ್ಷದ ವರಿಷ್ಠರು ಯಾವ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿ ಕೆಲಸ ಮಾಡುವೆ. ಒಂದು ವೇಳೆ ಪಕ್ಷದ ಪರ ಕೆಲಸ ಮಾಡು ಎಂದರೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಪರೋಕ್ಷವಾಗಿ ನಾನೂ ಲೋಕಸಭಾ ಚುನಾವಣೆಗೆ ಆಕಾಂಕ್ಷಿ ಎಂದು ಸುಳಿವು ನೀಡಿದ ಜಗದೀಶ ಶೆಟ್ಟರ್‌

ಹುಬ್ಬಳ್ಳಿ(ಫೆ.11): ಪಕ್ಷದ ವರಿಷ್ಠರು ಲೋಕಸಭೆಗೆ ಸ್ಪರ್ಧಿಸುವಂತೆ ಸೂಚನೆ ನೀಡಿದರೆ ಸ್ಪರ್ಧಿಸಲು ಸಿದ್ಧ. ಧಾರವಾಡ ಸೇರಿದಂತೆ ಯಾವುದೇ ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ತಿಳಿಸಿದರೆ ನಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

Add Asianetnews Kannada as a Preferred SourcegooglePreferred

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರು ಯಾವ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧನಾಗಿ ಕೆಲಸ ಮಾಡುವೆ. ಒಂದು ವೇಳೆ ಪಕ್ಷದ ಪರ ಕೆಲಸ ಮಾಡು ಎಂದರೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಪರೋಕ್ಷವಾಗಿ ನಾನೂ ಲೋಕಸಭಾ ಚುನಾವಣೆಗೆ ಆಕಾಂಕ್ಷಿ ಎಂದು ಸುಳಿವು ನೀಡಿದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರವನ್ನು ಅಭದ್ರಗೊಳಿಸುತ್ತಿದ್ದಾರೆ: ಕೇಂದ್ರ ಸಚಿವ ಜೋಶಿ‌

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರು ಡಿ.ಕೆ. ಸುರೇಶರನ್ನು ಗುಂಡಿಕ್ಕಿ ಕೊಲ್ಲಿ‌ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ, ಯಾರೇ ಆಗಲಿ ಲಕ್ಷ್ಮಣ ಗೇರೆ ದಾಟಬಾರದು ಎಂದರು. ಮಹಾತ್ಮ ಗಾಂಧೀಜಿ ಕೊಂದವರು ಬಿಜೆಪಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಉತ್ತರಿಸಿ, ಕಳೆದ 70 ವರ್ಷಗಳಿಂದ ಇದನ್ನೇ ಜನರ ಮುಂದೆ ಹೇಳುತ್ತಾ ಬಂದಿದ್ದೀರಿ. ಇನ್ನು ಎಷ್ಟು ದಿನಗಳ ವರೆಗೆ ಜನರನ್ನು ಮೂರ್ಖರನ್ನಾಗಿ ಮಾಡುತ್ತೀರಾ?. ಬಿಜೆಪಿಯವರು ಮಹಾತ್ಮ ಗಾಂಧೀಜಿ ಹಂತಕರು ಎಂದು ಪದೇ ಪದೇ ಹೇಳುವುದು ಸರಿಯಲ್ಲ ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜತೆಗೆ ಸಭೆ ನಡೆಸಿದ್ದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ, ಪಕ್ಷದ ಸಂಘಟನೆ ಕುರಿತಂತೆ ಸಭೆಯಲ್ಲಿ ಚರ್ಚೆಗಳಾಗಿವೆ. ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸ್ಪಷ್ಟಪಡಿಸಿದರು.