Asianet Suvarna News Asianet Suvarna News

ಒಬಿಸಿ ಮೀಸಲಿಗೆ ಸರ್ಕಾರ ಮೀನಮೇಷ: ಸಿದ್ದರಾಮಯ್ಯ ಕಿಡಿ

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ (ಓಬಿಸಿ) ರಾಜಕೀಯ ಮೀಸಲಾತಿ ಅಂತಿಮಗೊಳಿಸಲು ಸರ್ಕಾರ ಉದ್ದೇಶಪೂರ್ವಕ ವಿಳಂಬ ನೀತಿ ಅನುಸರಿಸುತ್ತಿದೆ. ಸರ್ಕಾರದ ನಡೆ-ನುಡಿ ಗಮನಿಸಿದರೆ ಓಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Former CM Siddaramaiah Outraged Against BJP Govt Over OBC Reservation gvd
Author
First Published Dec 18, 2022, 3:40 AM IST

ಬೆಂಗಳೂರು (ಡಿ.18): ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ (ಓಬಿಸಿ) ರಾಜಕೀಯ ಮೀಸಲಾತಿ ಅಂತಿಮಗೊಳಿಸಲು ಸರ್ಕಾರ ಉದ್ದೇಶಪೂರ್ವಕ ವಿಳಂಬ ನೀತಿ ಅನುಸರಿಸುತ್ತಿದೆ. ಸರ್ಕಾರದ ನಡೆ-ನುಡಿ ಗಮನಿಸಿದರೆ ಓಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಉದ್ದೇಶವೇ ಸರ್ಕಾರಕ್ಕೆ ಇಲ್ಲ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜಕೀಯ ಮೀಸಲಾತಿ ಬಗೆಗಿನ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಓಬಿಸಿ ಸಮುದಾಯಕ್ಕೆ ಅನ್ಯಾಯವಾಗಿರುವುದು ಮಾತ್ರವಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯೂ ನಿಗದಿತ ಕಾಲಕ್ಕೆ ನಡೆಯದಂತಾಗಿದೆ. 

ಇದಕ್ಕೆ ಪೂರಕ ಎಂಬಂತೆ ಸುಪ್ರೀಂ ಕೋರ್ಟ್‌ ಉದಾರವಾಗಿ ಮತ್ತೆ ಮಾರ್ಚ್‌ 31ರವರೆಗೆ ಗಡುವು ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುವಾಗ ಮೂರು ಹಂತದ ಪರಿಶೀಲನೆ ನಡೆಸಬೇಕು ಎಂದು ಕಳೆದ ಮೇ ತಿಂಗಳಲ್ಲಿಯೇ ಸುಪ್ರೀಂ ಕೋರ್ಟ್‌ ಸ್ಪಷ್ಟಆದೇಶ ನೀಡಿತ್ತು. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಸ್ವೀಕರಿಸಿದೆ ಇದ್ದಿದ್ದರಿಂದ ಈಗ ಬಿಕ್ಕಟ್ಟು ಉಂಟಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸಾರ್ಹ ಅಂಕಿ ಅಂಶಗಳಿಂದ ಕೂಡಿದ ಮಾಹಿತಿಯನ್ನು ಆಧರಿಸಿ ಮೀಸಲಾತಿ ನೀತಿಯನ್ನು ರೂಪಿಸಬೇಕೆಂದು ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ಹೇಳಿದ್ದರೂ ರಾಜ್ಯ ಸರ್ಕಾರ ಮಾತ್ರ ಅವಸರದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ಕೆ. ಭಕ್ತವತ್ಸಲ ಸಮಿತಿ ನೇಮಿಸಿ ಅಷ್ಟೇ ಅವಸರದಲ್ಲಿ ಶಿಫಾರಸುಗಳನ್ನು ಪಡೆದು ಮೀಸಲಾತಿಯನ್ನು ರೂಪಿಸಿದೆ. 

ಸಿದ್ದರಾಮಯ್ಯ, ನನ್ನ ಮಧ್ಯೆ ಜಗಳ ಶುದ್ಧ ಸುಳ್ಳು: ಡಿ.ಕೆ.ಶಿವಕುಮಾರ್‌

ನ್ಯಾ. ಭಕ್ತವತ್ಸಲ ಸಮಿತಿ ಶಿಫಾರಸು ಆಧರಿತ ಮೀಸಲಾತಿಯನ್ನು ರಾಜ್ಯ ಹೈಕೋರ್ಟ್‌ ತಿರಸ್ಕರಿಸಿದ ನಂತರವೂ ತಪ್ಪನ್ನು ಸರಿಪಡಿಸಿಕೊಂಡಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್‌ ಮತ್ತೆ ರಾಜ್ಯ ಸರ್ಕಾರದ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅತ್ಯಂತ ವೈಜ್ಞಾನಿಕವಾಗಿ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸಿದ್ದವಾಗಿದೆ. ಇದರ ಆಧಾರದಲ್ಲಿಯೇ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿಯನ್ನು ರೂಪಿಸಿದರೆ ಸುಪ್ರೀಂ ಕೋರ್ಟ್‌ ಕೂಡಾ ಒಪ್ಪುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿಕೆಶಿ ಹೇಳಿಕೆ ತಿರುಚಿ ತಪ್ಪು ಮಾಹಿತಿ ನೀಡಲು ಬಿಜೆಪಿ ಪ್ರಯತ್ನ: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿದ್ದಾರೆ ಅಷ್ಟೆ. ಉಗ್ರವಾದವನ್ನು ಬೆಂಬಲಿಸುತ್ತೇನೆ ಎಂದು ಅವರು ಹೇಳಿದ್ದಾರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದಾರೆ. ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಪಕ್ಷದವರು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಇಂಥ ಹೇಳಿಕೆಗಳೇ ಬೇಕಾಗಿರೋದು. 

ಒಳ ಮೀಸಲಾತಿ ಸಮಿತಿ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ

ಕುಕ್ಕರ್‌ ಸ್ಫೋಟ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬಿಜೆಪಿಯವರು ಅವರ ಹೇಳಿಕೆಯನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ತಿರುಚಿ ಜನರ ಮುಂದೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿಗೆ ಅಧಿಕಾರವಿದೆ, ಡಬಲ್‌ ಎಂಜಿನ್‌ ಸರ್ಕಾರವಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷ ಆಗಿದೆ. ಅವರೇ ಭಯೋತ್ಪಾದನೆಯನ್ನು ಹತ್ತಿಕ್ಕಲಿ. ದೇಶದಲ್ಲಿ ಎಲ್ಲೆಲ್ಲಿ ಉಗ್ರಗಾಮಿ ಚಟುವಟಿಕೆ ನಡೆಯುತ್ತಿದೆಯೋ ಅದನ್ನು ನಿಯಂತ್ರಿಸಲಿ. ಅವರಿಗೆ ಅಧಿಕಾರ ಅಧಿಕಾರ ಕೊಟ್ಟಿದ್ದು ಕೇವಲ ಜನರನ್ನು ಪ್ರಚೋದಿಸಿ, ಭಾವನಾತ್ಮಕ ವಿಚಾರಗಳನ್ನು ಜನರ ಮುಂದಿಡಲು ಅಲ್ಲ ಎಂದರು.

Follow Us:
Download App:
  • android
  • ios