ಸದ್ಯಕ್ಕೆ ಕಟೀಲ್‌ ಅವರನ್ನು ಹುದ್ದೆಯಿಂದ ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಮುಂದಿನ ವರ್ಷವೇ ಲೋಕಸಭಾ ಚುನಾವಣೆ ಇದೆ. ಆದರೆ, ಈ ಬಗ್ಗೆ ಕೇಂದ್ರ ನಾಯಕರ ತೀರ್ಮಾನ ಏನು ಎಂಬುದು ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ ಎಂದ ಆರ್‌.ಅಶೋಕ್‌ 

ಚಿಕ್ಕಮಗಳೂರು(ಜೂ.25): ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್‌ ಕುಮಾರ್‌ ಕಟೀಲ್‌ ಇದ್ದಾರೆ, ಹಾಗಾಗಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ. ಸೋಮಣ್ಣ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಆರ್‌.ಅಶೋಕ್‌ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಸದ್ಯಕ್ಕೆ ಕಟೀಲ್‌ ಅವರನ್ನು ಹುದ್ದೆಯಿಂದ ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಮುಂದಿನ ವರ್ಷವೇ ಲೋಕಸಭಾ ಚುನಾವಣೆ ಇದೆ. ಆದರೆ, ಈ ಬಗ್ಗೆ ಕೇಂದ್ರ ನಾಯಕರ ತೀರ್ಮಾನ ಏನು ಎಂಬುದು ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ ಎಂದರು.

ಕಾಂಗ್ರೆಸ್‌ ತನ್ನ ವೈಫಲ್ಯಮುಚ್ಚಿಕೊಳ್ಳಲು ಮೋದಿ ಮೇಲೆ ‘ಅಕ್ಕಿ’ ಆಪಾದನೆ: ಸಿ.ಟಿ.ರವಿ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದಾಗಿ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಮ್ಮದು ರಾಷ್ಟ್ರೀಯ ಪಕ್ಷ. ದೆಹಲಿಯಲ್ಲಿ ಅಂಗೀಕಾರ ಆಗಬೇಕಲ್ವಾ? ಮುಂದಿನ ವರ್ಷ ಲೋಕಸಭಾ ಚುನಾವಣೆ ಇದೆ. ರಾಜ್ಯಾಧ್ಯಕ್ಷ ಹುದ್ದೆಯ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ, ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿರುವುದು ಸರಿಯೋ, ತಪ್ಪೋ ಗೊತ್ತಿಲ್ಲ. ಪಕ್ಷ ನಿಲ್ಲಲು ಹೇಳಿತ್ತು. ಪಕ್ಷದ ಶಿಸ್ತಿನ ಸಿಪಾಯಿಯಾದ ನಾನು ಚುನಾವಣೆಗೆ ನಿಂತೆ. ಬಿಜೆಪಿಗೆ ಇದು ಸಾಂದರ್ಭಿಕ ಸೋಲು ಅಷ್ಟೇ. ಕನಕಪುರದಲ್ಲಿ ಬಿಜೆಪಿಗೆ ಬೂತ್‌ ಏಜೆಂಟ್‌ ಕೂಡ ಇಲ್ಲ. ಆ ಕ್ಷೇತ್ರದಲ್ಲಿ ಹಿಂದಿನ ಯಾವುದೇ ಚುನಾವಣೆಯಲ್ಲೂ ಬಿಜೆಪಿ 5,000 ಮತ ದಾಟಿಲ್ಲ. ಆದರೆ, ಈ ಬಾರಿ ಹೋರಾಟ ಮಾಡಿ 19,500 ಮತ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆಗಿನ ಮೈತ್ರಿ ಕುರಿತು ಪ್ರತಿಕ್ರಿಯಿಸಿ, ಜೆಡಿಎಸ್‌ ಜೊತೆ ಮೈತ್ರಿ ಪ್ರಶ್ನೆಯೇ ಇಲ್ಲ ಎಂದರು.