ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂಸತ್ತಿನ ಕೊನೆಯ ಭಾಷಣದಲ್ಲಿ ಹೇಳಿದ್ದಾರೆ.

ಚಿಂಚೋಳಿ (ಮೇ.15): ಭಕ್ತಿ ವ್ಯಕ್ತಿಯ ಮೇಲೆ ಬಂದರೆ ಆತ ಸರ್ವಾಧಿಕಾರಿಯಾಗುತ್ತಾನೆ. ಅಂತಹ ಸರ್ವಾಧಿಕಾರ ಪ್ರಜಾಪ್ರಭುತ್ವಕ್ಕೆ ಮಾರಕವಾಗುತ್ತದೆ ಎಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂಸತ್ತಿನ ಕೊನೆಯ ಭಾಷಣದಲ್ಲಿ ಹೇಳಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಸ್ಥಾಪಿಸಲಾಗಿರುವ ಡಾ ಬಿ.ಆರ್.‌ಅಂಬೇಡ್ಕರ್‌ ಅವರ ಪಂಚಲೋಹದ ಪ್ರತಿಮೆ‌ ಅನಾವರಣಗೊಳಿಸಿ ಮಾತನಾಡಿದರು.

Add Asianetnews Kannada as a Preferred SourcegooglePreferred

ಇಂದಿನ ರಾಜಕಾರಣಿಗಳು ದೈವೀ ಸ್ವರೂಪರಾಗಿದ್ದೇವೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ. ಅದು ಆಗಬಾರದು. ಸಂವಿಧಾನದ ಪ್ರಕಾರವೇ ಎಲ್ಲ ನಡೆಯಬೇಕು ಹೊರತು, ವ್ಯಕ್ತಿಯ ಇಚ್ಛೆಯಂತಲ್ಲ. ನಾವೆಲ್ಲ ಇಂದು ಗೆದ್ದು ಬಂದಿರುವುದು ಸಂವಿಧಾನದ ಪ್ರಕಾರದಂತೆ ಹೊರತು ಯಾವುದೇ ದೈವದಿಂದಲ್ಲ ಎಂದರು. ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆಯಾಗದಂತೆ ತಿದ್ದುಪಡಿ ತರಲಾಗಿದೆ. ಸಾಮಾಜಿಕ ಹಾಗೂ ಆರ್ಥಿಕ‌ ನ್ಯಾಯ ಸಮಾನವಾಗಿ ಸಿಗಬೇಕು ಎನ್ನುವ ಆಶಯಕ್ಕೆ ಧಕ್ಕೆಯಾಗಿಲ್ಲ. ಆದರೆ, ಕೆಲ ದುಷ್ಟ ಸಿದ್ದಾಂತಗಳು ಬಸವ ಹಾಗೂ ಅಂಬೇಡ್ಕರ್ ಅವರ ಆಶಯಗಳ ವಿರುದ್ದ ನಡೆಯುತ್ತಿವೆ. ಅವುಗಳ ವಿರುದ್ದ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.

ಕದನ ವಿರಾಮದ ಬಗ್ಗೆ ಪ್ರಧಾನಿ ಮೋದಿ ಸತ್ಯ ಹೇಳಲಿ: ಸಚಿವ ಪ್ರಿಯಾಂಕ್ ಖರ್ಗೆ

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಸ್ವಾತಂತ್ರ್ಯ ನಂತರ ಸಂವಿಧಾನ ರಚನೆ ಮಾಡುವ ಹೊಣೆಗಾರಿಕೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಹೊರತುಪಡಿಸಿ ಬೇರೆಯವರಿಗೆ ವಹಿಸಿದ್ದರೆ ಬಹುಶಃ ಈ ದೇಶದಲ್ಲಿ ಪ್ರಜಾಪ್ರಭುತ್ವ ಇಷ್ಟೊಂದು ಗಟ್ಟಿಯಾಗಿರುತ್ತಿರಲಿಲ್ಲ ಎನ್ನುವ ಅನುಮಾನ ಮೂಡುತ್ತದೆ ಎಂದರು. ಗೌತಮ ಬುದ್ಧ ಹಾಗೂ 12ನೇಯ ಶತಮಾನದ ಅಣ್ಣ ಬಸವಣ್ಣ, ಹಾಗೂ ಶರಣರು ಮತ್ತು ಡಾ. ಅಂಬೇಡ್ಕರ್ ಅವರು ಸಮಾನತೆಗಾಗಿ ಹೋರಾಟ ನಡೆಸಿದ್ದಾರೆ. ಡಾ ಅಂಬೇಡ್ಕರ್ ಅವರು ಓದಿಗೆ ತಕ್ಕಂತೆ ಯಾವುದಾದರು ವಿಶ್ವವಿದ್ಯಾಲಯದಲ್ಲಿ ಹುದ್ದೆ ಹೊಂದಬಹುದಿತ್ತು. ಆದರೆ, ಶೋಷಿತರ, ತುಳಿತಕ್ಕೊಳಗಾದವರ ಸಮಾನತೆ ಹಾಗೂ ಹಕ್ಕುಗಳಿಗಾಗಿ ತಮ್ಮ ಜೀವನ ಮುಡುಪಾಗಿಟ್ಟು ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

ಮೈಸೂರಿನ ಉರಿಲಿಂಗಿ ಪೆದ್ದಿ ಸಂಸ್ಥಾನ ಮಠದ ಜ್ಞಾನ ಪ್ರಕಾಶ ಸ್ವಾಮಿ ಮಾತನಾಡಿ, ತಾವು ಪ್ರತಿಮೆಯಲ್ಲಿ ಇಲ್ಲ, ಪುಸ್ತಕದಲ್ಲಿ ಜೀವಂತವಿರುವುದಾಗಿ ಡಾ. ಅಂಬೇಡ್ಕರ್ ಹೇಳಿದ್ದಾರೆ. ಪೆನ್ನಿನ ಮೂಲಕ ಬಾಬಾಸಾಹೇಬರು ಬದಲಾವಣೆ ತಂದಿದ್ದಾರೆ. ಹಾಗಾಗಿ, ಶಿಕ್ಷಣದ ಕಡೆಗೆ ಮುಖ ಮಾಡುವ ಮೂಲಕ ಮನೆ ಮನೆಗೆ ಕರೆದುಕೊಂಡು ಹೋಗಿ ಎಂದು ಹೇಳಿದ್ದಾರೆ. ಹಾಗಾಗಿ, ಕೇವಲ ಪ್ರತಿಮೆ ಮಾಡುವುದರ ಬದಲು ಅಂಬೇಡ್ಕರ್ ಅವರ ವಿಚಾರಗಳನ್ನು ಜನರಿಗೆ ತಲುಪಿಸಿ ಎಂದರು.

'ಸೋಲಿನ' ಅಂಬೇಡ್ಕರ್ ಪತ್ರ ಬಿಡುಗಡೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಕಿಡಿ

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೆದಾರ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಸುಭಾಷ ರಾಠೋಡ, ಗ್ರಾಪಂ ಅಧ್ಯಕ್ಷ ಸಂತೋಷ ರಾಠೋಡ, ಮಾಣಿಕರಾವ ಗುಲಗುಂಜಿ, ಭೀಮರಾವ ಟಿ.ಟಿ.ಬಸಯ್ಯ ಗುತ್ತೆದಾರ, ಸಂಜೀವನ್ ಯಾಕಾಪೂರ, ಗೋಪಾಲರಾವ ಕಟ್ಟಿಮನಿ, ಗ್ರಾಪಂ ಸದಸ್ಯೆ ಪಾರ್ವತಿ ಗಿರಿ, ಸಂಗೀತಾ ರಾಮತೀರ್ಥಕರ, ಕಮಲಮ್ಮ ಗಿರಿ, ರಾಜಕುಮಾರ ಗಂಜಗಿ, ಶಾಮರಾವ ಮಾದೇಶಿ, ಜಗನ್ನಾಥ ಗಂಜಗಿರಿ, ಬಾಬಣ್ಣ, ಸಂಪತಕುಮಾರ ಬೆಳ್ಳಿಚುಕ್ಕಿ, ಸಂಪತ ಬುಗಡಿ, ದೇವೇದ್ರ ಜಾಬಿನ್, ಮಲ್ಲಿಕಾರ್ಜುನ ಗಿರಿ, ಮಲ್ಲಿಕಾಜುನ ಪಾಳೇದ, ಮಹೇಶ ಗುಲಗುಂಜಿ ಇನ್ನಿತರರಿದ್ದರು.