ರಾಜ್ಯದ ನೀರಾವರಿ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾವೆಲ್ಲಾ ಒಂದಾಗಿದ್ದೇವೆ. ಮಹದಾಯಿ ಕುರಿತು ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗ (ಜು.28): ರಾಜ್ಯದ ನೀರಾವರಿ ವಿಚಾರದಲ್ಲಿ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾವೆಲ್ಲಾ ಒಂದಾಗಿದ್ದೇವೆ. ಮಹದಾಯಿ ಕುರಿತು ಗೋವಾ ಮುಖ್ಯಮಂತ್ರಿ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರಾಜ್ಯದ ಹಿತಾಸಕ್ತಿಗೆ ಇಷ್ಟು ದೊಡ್ಡ ರಾಜಕೀಯ ಆಟ ಆಡುವ ಅವಶ್ಯಕತೆ ಇಲ್ಲ. ಗೋವಾದವರು ನ್ಯಾಯ ಸಮ್ಮತವಾಗಿ ನಡೆದುಕೊಳ್ಳಬೇಕು. ಆದ್ದರಿಂದ ಗೋವಾ ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾಣು ಖಂಡಿಸುತ್ತೇನೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಡ್ಡಗೋಡೆ ಕಾಂಗ್ರೆಸ್‌ ಕೊಡುಗೆ: ಮಹದಾಯಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿ ಮಾಡಿ ಇಂಟರ್ ಲಿಂಕಿಂಗ್ ಕೆನಾಲ್ ಮಾಡಿರುವುದನ್ನು ತಡೆದು ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಅಡ್ಡಗೋಡೆಯನ್ನು ಕಟ್ಟಿರುವುದು ಕಾಂಗ್ರೆಸ್ ಕೊಡುಗೆ ಎಂದು ಬೊಮ್ಮಾಯಿ ಲೇವಡಿ ಮಾಡಿದರು. ಕಾಂಗ್ರೆಸ್‌ನವರು ನ್ಯಾಯಮಂಡಳಿ ಮಾಡಿ ಅದಕ್ಕೆ 4 ವರ್ಷ ಕಚೇರಿ ಕೊಡಲಿಲ್ಲ. ನಮ್ಮ ಸರ್ಕಾರ ಬಂದು ಕಚೇರಿ ನೀಡಿತು. ನ್ಯಾಯ ಮಂಡಳಿ ಆದೇಶ ಬಂತು. ಆದರೆ, ಅದನ್ನು ಆದೇಶ ಮಾಡಲಿಲ್ಲ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಆದೇಶ ಹೊರಡಿಸಿತು. ಮಹದಾಯಿ ಯೋಜನೆಗೆ ಡಿಪಿಆರ್ ಮಾಡಿ ಒಪ್ಪಿಗೆ ಪಡೆದಿದ್ದು ಕೇಂದ್ರದ ಎನ್.ಡಿ.ಎ ಸರ್ಕಾರ, ಪರಿಸರ ಅನುಮತಿಯನ್ನೂ ಬಿಜೆಪಿ ಸರ್ಕಾರವೇ ಕೊಡಿಸಿದೆ. ಕಾಂಗ್ರೆಸ್ ಒಂದೇ ಒಂದು ಕೆಲಸ ಮಾಡಿದ್ದು, ಬಿಜೆಪಿ ಅವಧಿಯಲ್ಲಿ ಕಾಮಗಾರಿ ಮಾಡಿ ಇಂಟರ್ ಲಿಂಕಿಂಗ್ ಕೆನಾಲ್ ಮಾಡಿದ್ದನ್ನು ತಡೆದು ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಯದಂತೆ ಕಾಂಗ್ರೆಸ್‌ ಅಡ್ಡಗೋಡೆ ಕಟ್ಟಿದೆ ಎಂದು ವ್ಯಂಗ್ಯವಾಡಿದರು.

ಗೊಬ್ಬರ ಕೊರತೆ ತಪ್ಪಿಸಿ: ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆಯನ್ನು ರಾಜ್ಯ ಸರ್ಕಾರ ತಪ್ಪಿಸಬಹುದಿತ್ತು. ಈ ವರ್ಷ ಮಳೆ ಮುಂಚಿತವಾಗಿಯೇ ಆಗಿದೆ. ಎಲ್ಲಿ ಗೊಬ್ಬರದ ಅಗತ್ಯವಿದೆ ಅಲ್ಲಿ ಪೂರೈಕೆ ಮಾಡಬೇಕಿತ್ತು. ಬಫರ್ ಸ್ಟಾಕ್ ಇಟ್ಟುಕೊಳ್ಳಬೇಕಿತ್ತು. ನಿರ್ವಹಣೆ ಸರಿಯಾಗಿ ಆಗಿಲ್ಲ. ಹೆಚ್ಚಿನ ರಸಗೊಬ್ಬರಕ್ಕೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿದೆ. ನಾನೂ ಕೇಂದ್ರ ಕೃಷಿ ಮತ್ತು ರಸಗೊಬ್ಬರ ಸಚಿವರ ಜೊತೆ ಮಾತನಾಡಿ ಹೆಚ್ಚುವರಿ ಗೊಬ್ಬರ ಕೊಡಿಸುವ ಕೆಲಸ ಮಾಡುತ್ತೇನೆ. ಅದಕ್ಕಿಂತ ಮುಖ್ಯವಾಗಿ ಈಗಾಗಲೇ ಬರುತ್ತಿರುವ ಗೊಬ್ಬರವನ್ನು ಸಮರ್ಪಕವಾಗಿ ಹಂಚುವ ಕೆಲಸವನ್ನು ಕೃಷಿ ಇಲಾಖೆ ಮತ್ತು ಮಂತ್ರಿಗಳು ಮಾಡಬೇಕು ಎಂದರು. ಶಾಸಕ ಯತೀಂದ್ರ ಅವರು ತಮ್ಮ ತಂದೆಯ ಸಾಧನೆ ಹೇಳಲು ಒಡೆಯರ್ ಅವರಿಗೆ ಹೋಲಿಕೆ ಮಾಡಿದ್ದಾರೆ. ಸೂರ್ಯನಿಗೆ ಯಾವುದಾದರೂ ಸಣ್ಣ ಬೆಳಕನ್ನು ಹೋಲಿಕೆ ಮಾಡಲು ಸಾಧ್ಯವೇ ಸೂರ್ಯ ಸೂರ್ಯನೇ ಎಂದು ತಿರುಗೇಟು ನೀಡಿದರು.