ಶಿವಮೊಗ್ಗದಲ್ಲಿ ನನಗೆ ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೂ ಬೆಂಬಲ ನೀಡಲಿದ್ದಾರೆ. ಹೀಗಾಗಿ, ಶಿವಮೊಗ್ಗಕ್ಕೆ ಬ್ರಹ್ಮ ಬಂದರೂ ಬಂಡಾಯ ಸ್ಪರ್ಧೆಯಿಂದ ನಾನು ಹಿಂದೆ ಸರಿಯಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು. 

ಶಿವಮೊಗ್ಗ (ಮಾ.26): ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಬಿಜೆಪಿ ಕಾರ್ಯಕರ್ತರಷ್ಟೇ ಅಲ್ಲ ಕಾಂಗ್ರೆಸ್ ಮತ್ತು ಜೆಡಿಎಸ್ ನ ಕಾರ್ಯಕರ್ತರು ನನ್ನನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಶಿವಮೊಗ್ಗಕ್ಕೆ ಬ್ರಹ್ಮ ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಏ.12ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

Add Asianetnews Kannada as a Preferred SourcegooglePreferred

ಶಿವಮೊಗ್ಗದಲ್ಲಿ ಆಯೋಜಿಸಿದ್ದ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ. ಬಿಜೆಪಿ ಕಾರ್ಯಕರ್ತರಷ್ಟೇ ಅಲ್ಲ ಕಾಂಗ್ರೆಸ್ ಮತ್ತು ಜೆಡಿಎಸ್ ನ ಕಾರ್ಯಕರ್ತರು ನನ್ನನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಎಂದೂ ಬಿಜೆಪಿಗೆ ಬಹುಮತ ಬರಲಿಲ್ಲ. 108 ಸ್ಥಾನಗಳನ್ನು ಗಳಿಸಿ ಬೇರೆಯವರ ಸಹಾಯದಿಂದ ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳಿದರು.

ಸುರಪುರ ವಿಧಾನಸಭಾ ಉಪ ಚುನಾವಣೆಗೆ ರಾಜುಗೌಡಗೆ ಟಿಕೆಟ್‌ ಕೊಟ್ಟ ಬಿಜೆಪಿ

ರಾಜ್ಯದಲ್ಲಿ 108 ಸ್ಥಾನಗಳಿಂದ 66 ಸ್ಥಾನಗಳಿಗೆ ಕುಸಿಯಲು ಯಾರು ಕಾರಣ? ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧೆ ಬೇಡ ಅಂದಾಗ ತಕ್ಷಣವೇ ವರಿಷ್ಠರ ನಿರ್ಧಾರ ಒಪ್ಪಿದೆ. 40 ಪರ್ಸೆಂಟ್ ಆರೋಪ ಬಂದಾಗ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಆರೋಪ ಮುಕ್ತನಾದಾಗ ಮಂತ್ರಿ ಮಾಡುವುದಾಗಿ ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಹೇಳಿ ಮಾಡಲೇ ಇಲ್ಲ. ಆಗ ಈಶ್ವರಪ್ಪನವರನ್ನು ಮಂತ್ರಿ ಮಾಡುವುದಾದರೆ ವಿಜಯೇಂದ್ರ ನನ್ನು ಮಂತ್ರಿ ಮಾಡಬೇಕು ಎಂದು ಪಟ್ಟು ಹಿಡಿದರು. ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಾಂತೇಶ್ ಗೆ ಟಿಕೆಟ್ ಕೊಡುವುದಾಗಿ ಹೇಳಿದ್ದರು. ಬೊಮ್ಮಾಯಿ ಕೂಡ ಕಾಂತೇಶ್ ಗೆ ಟಿಕೆಟ್ ನೀಡಲು ಹೇಳಿದ್ದರು ಎಂಬ ಮಾಹಿತಿ ನೀಡಿದರು.

ಚಿಕ್ಕಮಗಳೂರಿನಲ್ಲಿ ಶೋಭಾ ಗೋ ಬ್ಯಾಕ್ ಎಂದರು. ಯಡಿಯೂರಪ್ಪ ಶೋಭಾ ನನ್ನು ನಿಲ್ಲಿಸುತ್ತೇನೆ ಗೆಲ್ಲಿಸಿ ಎಂದರು ಇವರಿಗೆ ಕಾರ್ಯಕರ್ತರು ಬೇಡ ಶೋಭಾ ಬೇಕು. ನಾನು ಜಾತಿ ರಾಜಕಾರಣ ಮಾಡಲ್ಲ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತೇನೆ. ಬಿ.ಎಸ್. ಯಡಿಯೂರಪ್ಪ ಶಿಕಾರಿಪುರದಲ್ಲಿ ತಮ್ಮ ಮಗನನ್ನು ಗೆಲ್ಲಿಸುವುದಕ್ಕಾಗಿ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದರು. ಚುನಾವಣೆಯಲ್ಲಿ ಗೆಲ್ಲುತ್ತೇನೆ ನಿಮ್ಮ ಋಣವನ್ನು ತೀರಿಸುತ್ತೇನೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯುವ ರೂಲ್ಸ್ ತರುತ್ತಿದ್ದೆನು; ಮಾಜಿ ಶಿಕ್ಷಣ ಸಚಿವ ಎನ್. ಮಹೇಶ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಡಮ್ಮಿ ಕ್ಯಾಂಡಿಡೇಟ್ ಹಾಕಿಸಿ ಕೊಂಡಿದ್ದಾರೆ. ಮಧು ಬಂಗಾರಪ್ಪ ಗಂಡಸ್ತನ ಇದ್ದರೆ ಈಶ್ವರಪ್ಪ ಮಗನಿಗೆ ಟಿಕೆಟ್ ತರಬೇಕಿತ್ತು ಎಂದಿದ್ದಾರೆ. ಗಂಡಸ್ತನ ಇರುವ ವ್ಯಕ್ತಿಯ ಜೊತೆಗೆ ನೀವು ಹೊಂದಾಣಿಕೆ ಮಾಡಿಕೊಂಡರೆ ನಾನೇನಪ್ಪ ಮಾಡಲಿ. ಈಶ್ವರಪ್ಪ ಜೀವನದಲ್ಲಿ ಪಕ್ಷಾಂತರ ಮಾಡಿಲ್ಲ. ಅಧಿಕಾರಕ್ಕೆ ಬರಲು ಕೆಜೆಪಿ ಕಟ್ಟಿ ಬಿಜೆಪಿಗೆ ಯಡಿಯೂರಪ್ಪ ಚಾಕು ಹಾಕಲಿಲ್ಲವಾ? ಕೆಜಿಪಿ ಕಟ್ಟಿ ಕೇವಲ 6 ಸೀಟು ಪಡೆದಿದ್ದರು. ಅಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದೆ 46 ಸ್ಥಾನಗಳನ್ನು ಪಡೆದೆ ಎಂದು ತಿಳಿಸಿದರು.