ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್‌ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಅರೋಪಿಸಿದರು. 

ಜಮಖಂಡಿ (ಆ.04): ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್‌ ಅವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಅರೋಪಿಸಿದರು. ಕೃಷ್ಣಾನದಿಯ ಪ್ರವಾಹಕ್ಕೆ ಜೀವ ಕಳೆದುಕೊಂಡ ಆಲಗೂರಿನ ಸಿದ್ದಪ್ಪ ಅಡವಳ್ಳಿ ಮತ್ತು ಕಡಕೋಳ ಗ್ರಾಮದ 5 ವರ್ಷದ ಬಾಲಕಿ ಸಮೃದ್ಧಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮುಡಾ ಹಗರಣ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಯವರ ಹೆಸರು ಕೆಡಿಸಲು ಬಿಜೆಪಿ-ಜೆಡಿಎಸ್‌ ನೀಚ ಕೆಲಸ ಮಾಡುತ್ತಿವೆ. 

Add Asianetnews Kannada as a Preferred SourcegooglePreferred

ರಾಜ್ಯದ ಜನರು ಬಿಜೆಪಿಯವರಿಗೆ ಛೀಮಾರಿ ಹಾಕುತ್ತಾರೆ ಎಂದರು. ಅನವಶ್ಯಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಪಾಲರು ಜೆಡಿಎಸ್‌-ಬಿಜೆಪಿಯವರು ಹೇಳಿದಂತೆ ಕೇಳುತ್ತಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ನೋಟಿಸ್‌ ನೀಡಿದ್ದಾರೆ. ರಾಜ್ಯದ ಬಿಜೆಪಿ ನಾಯಕರಿಗೆ ಬೇರೆ ಕೆಲಸವಿಲ್ಲ. ಆದ್ದರಿಂದ ಸುಳ್ಳು ಆರೋಪಗಳನ್ನು ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರೇ ಇವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದರು. ವಾಲ್ಮೀಕಿ ಹಗರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒತ್ತಾಯದ ಪಾದಯಾತ್ರೆ: ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ. ಬಸವನಗೌಡ ಯತ್ನಾಳ, ರಮೇಶ ಜಾರಕಿಹೊಳಿ ಅವರು ಪಾದಯಾತ್ರೆ ಬೆಂಬಲಿಸಿಲ್ಲ, ಕುಮಾರಸ್ವಾಮಿ ಅವರನ್ನು ಒತ್ತಾಯಪೂರ್ವಕ ಪಾದಯಾತ್ರೆಗೆ ಸೇರಿಸಿಕೊಳ್ಳಲಾಗಿದೆ ಎಂದ ಅವರು, ಬಿಜೆಪಿಯ ತಂತ್ರಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ಕಾನೂನು ರೀತಿ ಸೂಕ್ತ ಉತ್ತರ ನೀಡಲಾಗುವುದು ಎಂದು ತಿರುಗೇಟು ನೀಡಿದ ಅವರು, ಬ್ಯಾಂಕ್‌ ಅವ್ಯವಹಾರಕ್ಕೆ ಪ್ರಧಾನಿ ರಾಜೀನಾಮೆ ಕೇಳಿದರೆ ಅದು ಸೂಕ್ತವೇ ಎಂದು ಪ್ರಶ್ನಿಸಿದರು. 

ಪ್ರವಾಹದಿಂದಾಗಿ ಉಂಟಾಗಿರುವ ಬೆಳೆ ಹಾನಿಗೂ ಸರ್ಕಾರದಿಂದ ಪರಿಹಾರ: ಸಚಿವ ಆರ್‌.ಬಿ.ತಿಮ್ಮಾಪೂರ

ಪ್ರವಾಹ ಪರಿಹಾರಕ್ಕೆ ಪ್ರತಿ ತಾಲೂಕಿಗೆ ₹1 ಕೋಟಿ ತೆಗೆದಿಡಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಮಾಜಿ ಶಾಸಕ ಆನಂದ ನ್ಯಾಮಗೌಡ, ಜಿಲ್ಲಾಧಿಕಾರಿ ಜಾನಕಿ.ಕೆ.ಎಂ. ಜಿಪಂ, ಸಿಇಒ ಶಶಿಧರ ಕುರೇರ, ಎಸಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ಸದಾಶಿವ ಮಕ್ಕೊಜಿ, ತಾಲೂಕು ಮಟ್ಟದ ಅಧಿಕಾರಿಗಳು, ಕಾಂಗ್ರೆಸ್‌ ಕಾರ್ಯಕರ್ತರು ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.